
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ವೇತನವನ್ನು ಕೇಂದ್ರ ಸರ್ಕಾರಿ ನೌಕರರ ಮಾದರಿಯಲ್ಲಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಅಧಿಕಾರಿಗಳ ವೇತನ ಸಮಿತಿಯನ್ನು ಬಜೆಟ್ ನಲ್ಲಿ ಘೋಷಣೆ ಮಾಡಬೇಕು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಒತ್ತಾಯಿಸಿದ್ದಾರೆ.
ಈ ಕುರಿತು ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ಪತ್ರ ಬರೆದಿರುವ ಬಿಎಸ್ ವೈ, ರಾಜ್ಯ ಸರ್ಕಾರಿ ನೌಕರರ ವೇತನ ಹೆಚ್ಚಳ ಮಾಡುವ ಅಗತ್ಯವಿದ್ದು, ಈ ನಿಟ್ಟಿನಲ್ಲಿ ಪರಾಮರ್ಶೆ ಹಾಗೂ ಅನುಷ್ಠಾನಕ್ಕಾಗಿ ನಾಳಿನ ಬಜೆಟ್ ನಲ್ಲಿ ಅಧಿಕಾರಿಗಳ ವೇತನ ಸಮಿತಿ ಘೋಷಣೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.
ಕೇಂದ್ರ ಸರ್ಕಾರ 2016ರಲ್ಲಿ 7ನೇ ವೇತನ ಆಯೋಗದ ಶಿಫಾರಸುಗಳನ್ನು ಆಧರಿಸಿ ನೌಕರರ ವೇತನ ಮತ್ತು ಭತ್ಯೆಗಳನ್ನು ಪರಿಷ್ಕರಿಸಿದೆ. ದೇಶದ 28 ರಾಜ್ಯಗಳಲ್ಲಿ ಈಗಾಗಲೇ 25 ರಾಜ್ಯಗಳಲ್ಲಿ ಈ ಮಾದರಿ ಜಾರಿಯಲ್ಲಿದೆ. ದೇಶದ ಜಿಎಸ್ ಡಿಪಿ ಅವಲೋಕಿಸಿದರೆ ರಾಜ್ಯ ಸರ್ಕಾರ ಅಭಿವೃದ್ಧಿ ಹಾಗೂ ಪ್ರಗತಿಯಲ್ಲಿ ರಾಷ್ಟ್ರದಲ್ಲಿ 6ನೇ ಸ್ಥಾನದಲ್ಲಿದೆ. ಈ ಪ್ರಗತಿಯಲ್ಲಿ ಸರ್ಕಾರಿ ನೌಕರರ ಸೇವೆ ಹಾಗೂ ಅವರ ಪಾತ್ರ ಪ್ರಮುಖವಾಗಿದೆ. ಕೊರೋನಾ ಸಂದರ್ಭದಲ್ಲಿ ಅವರ ಸೇವೆ ಶ್ಲಾಘನೀಯವಾಗಿದೆ ಎಂದು ತಿಳಿಸಿದ್ದಾರೆ.