
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬಿಜೆಪಿ ವರಿಷ್ಠರ ಕರೆಯ ಮೇರೆಗೆ ಸಿಎಂ ಬಸವರಾಜ್ ಬೊಮ್ಮಾಯಿ ಇಂದು ದಿಢೀರ್ ದೆಹಲಿಗೆ ಪ್ರಯಾಣ ಬೆಳೆಸುತ್ತಿದ್ದು ಕುತೂಹಲಕ್ಕೆ ಕಾರಣವಗಿದೆ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಳೆಯಿಂದಾಗಿ ಹಲವೆಡೆ ಭಾರಿ ಹಾನಿ ಸಂಭವಿಸಿದ್ದು, ಕಳೆದ ಮೂರು ದಿನಗಳಿಂದ ಸಿಎಂ ಬೊಮ್ಮಾಯಿ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಲಯವಾರು ಸಚಿವರ ನೇಮಕದ ಬಗ್ಗೆಯೂ ಚರ್ಚೆ ನಡೆಸಿದ್ದಾರೆ. ಈ ಮಧ್ಯೆ ಬಿಜೆಪಿ ವರಿಷ್ಠರಿಂದ ಮುಖ್ಯಮಂತ್ರಿಗಳಿಗೆ ದೂರವಾಣಿ ಕರೆ ಬಂದಿದ್ದು, ದೆಹಲಿಗೆ ಬರುವಂತೆ ಕರೆ ನೀಡಿದ್ದಾರೆ.
ಈ ಹಿನ್ನೆಲೆಯಲ್ಲಿ ಸಿಎಂ ಬೊಮ್ಮಾಯಿ ಇಂದು ಮಧ್ಯಾಹ್ನ ದೆಹಲಿಗೆ ತೆರಳಲಿದ್ದಾರೆ. ರಾಜ್ಯ ಸಚಿವ ಸಂಪುಟ ವಿಸ್ತರಣೆ ವಿಚಾರ ಇನ್ನೂ ಕಗ್ಗಂಟಾಗಿಯೇ ಉಳಿದಿದ್ದು, ಈ ವಿಚಾರ ಚರ್ಚೆಗಾಗಿ ವರಿಷ್ಠರು ಮುಖ್ಯಮಂತ್ರಿಗಳಿಗೆ ಬುಲಾವ್ ನೀಡಿದ್ದಾರೆಯೇ ಎಂಬ ಕುತೂಹಲ ಮೂಡಿದೆ.
ಇನ್ನು ನಾಳೆ ಸಿಎಂ ಬಸವರಾಜ್ ಬೊಮ್ಮಾಯಿ ದಾವೋಸ್ ಪ್ರವಾಸ ಕೈಗೊಳ್ಳಲಿದ್ದು, ನಾಳೆಯಿಂದ ಮೇ 26ರವರೆಗೆ ದಾವೋಸ್ ನಲ್ಲಿ ನಡೆಯಲಿರುವ ವಿಶ್ವ ಆರ್ಥಿಕ ಶೃಂಗ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಈ ನಡುವೆಯೇ ಹೈಕಮಾಂಡ್ ಸಿಎಂ ಗೆ ಬುಲಾವ್ ನೀಡಿರುವುದು ಕುತೂಹಲ ಇಮ್ಮಡಿಗೊಳಿಸಿದೆ.
ದೂರದ ಕೆನಡಾ ಪಾಲಿಮೆಂಟ್ ನಲ್ಲಿ ಕನ್ನಡ ಡಿಂಡಿಮ; ಕನ್ನಡದಲ್ಲಿಯೇ ಭಾಷಣ ಮಾಡಿ ಗಮನ ಸೆಳೆದ ಸಂಸದ ಚಂದ್ರ ಆರ್ಯ