*ಬಸ್ ಮೇಲೆ ಬಿದ್ದ ಜಲ್ಲಿಕಲ್ಲು ತುಂಬಿದ ಲಾರಿ: 20 ಜನರ ದುರ್ಮರಣ*

ಪ್ರಗತಿವಾಹಿನಿ ಸುದ್ದಿ : ಬಸ್ ಮತ್ತು ಜಲ್ಲಿಕಲ್ಲು ತುಂಬಿದ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ್ದು, 20ಜನ ಮೃತಪಟ್ಟಿದ್ದಾರೆ.
ಇಂದು ಬೆಳಗ್ಗೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಚೆವೆಳ್ಳಾ ತಾಲೂಕಿನಲ್ಲಿ ದುರ್ಘಟನೆ ಸಂಭವಿಸಿದೆ. ಈ ಘಟನೆಯಲ್ಲಿ 24 ಪ್ರಯಾಣಿಕರಿಗೆ ಗಂಭೀರ ಗಾಯವಾಗಿದ್ದು, ಐವರ ಸ್ಥೀತಿ ಗಂಭೀರವಾಗಿದೆ. ಘಟನೆಯಲ್ಲಿ ಗಾಯಗೊಂಡ ಪ್ರಯಾಣಿಕರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಜಲ್ಲಿಕಲ್ಲು ಸಾಗಿಸುತ್ತಿದ್ದ ಲಾರಿಯೊಂದು ಎದುರಿನಿಂದ ಬಂದು ಬಸ್ ಗೆ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ಬಸ್ ನಲ್ಲಿ 40 ಜನ ಪ್ರಯಾಣಿಸುತ್ತಿದ್ದರು. ಈ ಅಪಘಾತದಲ್ಲಿ ಬಸ್ ಚಾಲಕ ಹಾಗೂ ಲಾರಿ ಚಾಲಕ ಸೇರಿ ಸಧ್ಯಕ್ಕೆ 20 ಮಂದಿ ಮೃತಪಟ್ಟಿರುವುದು ಖಚಿತವಾಗಿದೆ ಎಂದು ಅಧಿಕಾರಿಗಳು ಖಚಿತಪಡಿಸಿದ್ದಾರೆ.
ಅಪಘಾತದ ರಭಸಕ್ಕೆ ಬಸ್ ಮೇಲೆ ಲಾರಿ ಬಿದ್ದಿದೆ. ಇದರಿಂದ ಬಸ್ ನಲ್ಲಿ ಇದ್ದ ಹೆಚ್ಚು ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ಬಸ್ ನಲ್ಲಿ ಮಹಿಳೆಯರೆ ಹೆಚ್ಚು ಪ್ರಯಾಣಿಸುತ್ತಿದ್ದರು. ಟಿಪ್ಪರ್ ಚಾಲಕನ ಅತೀ ವೇಗದ ಚಾಲನೆಯೇ ಈ ದುರ್ಘಟನೆಗೆ ಕಾರಣ ಎಂದು ಹೇಳಲಾಗುತ್ತಿದೆ. ಅಪಘಾತದ ವೇಳೆ ಬಸ್ ನಲ್ಲಿ ಸಿಲುಕಿದ ಹಲವರನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಅಪಘಾತದಿಂದ ಟ್ರಾಫಿಕ್ ಜಾಮ್ ಉಂಟಾಗಿತ್ತು.



