
ಪ್ರಗತಿವಾಹಿನಿ ಸುದ್ದಿ, ಘಟಪ್ರಭಾ – ಇಲ್ಲಿಯ ಡಾ. ಎನ್.ಎಸ್. ಹರ್ಡೇಕರ್ ತರಬೇತಿ ಕೇಂದ್ರದಲ್ಲಿ ಶುಕ್ರವಾರ ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ನವ ಸಂಕಲ್ಪ ಚಿಂತನಾ ಶಿಬಿರ ನಡೆಯಿತು.
ಕಾಂಗ್ರೆಸ್ ಪಕ್ಷವನ್ನು ಬಲವರ್ಧನೆ ಮಾಡುವ ಹಿನ್ನೆಲೆಯಲ್ಲಿ 4 ಸಮಿತಿಗಳನ್ನು ರಚಿಸಲಾಗಿದ್ದು, ಈ ಸಮಿತಿಗಳ ಕಾರ್ಯಕ್ರಮಗಳ ಕುರಿತು ಸುದೀರ್ಘವಾಗಿ ಚರ್ಚೆ ನಡೆಯಿತು.
ಸರ್ವ ಧರ್ಮದವರೂ ಪ್ರಗತಿಯತ್ತ ಸಾಗಬೇಕೆಂದರೆ ಅದು ಕಾಂಗ್ರೆಸ್ ಪಕ್ಷದಿಂದ ಮಾತ್ರ ಸಾಧ್ಯ
– ಸತೀಶ್ ಜಾರಕಿಹೊಳಿ
ಶಿಬಿರ ಉದ್ಘಾಟಿಸಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ, ಸಾಮಾಜಿಕ ಜಾಲತಾಣಗಳನ್ನು ಸದ್ಬಳಕೆ ಮಾಡಿಕೊಂಡು ಕಾಂಗ್ರೆಸ್ ಪಕ್ಷವನ್ನು ತಳ ಮಟ್ಟದಲ್ಲಿ ಸಂಘಟಿಸಲು ಆದ್ಯತೆ ನೀಡಬೇಕೆಂದು ಕರೆ ನೀಡಿದರು.

2023ಕ್ಕೆ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವುದು ನಮ್ಮ ಗುರಿಯಾಗಿದ್ದು, ಅದಕ್ಕೆ ಇಂದಿನಿಂದಲೇ ತಯಾರಿ ನಡೆಸಬೇಕು. ಯುವಕರು ಕಾಂಗ್ರೆಸ್ ಆಡಳಿತಾವಧಿಯಲ್ಲಿ ಜಾರಿಗೆ ತಂದ ಯೋಜನೆಗಳನ್ನು ಜನರಿಗೆ ತಲುಪಿಸಬೇಕೆಂದು ಕರೆ ನೀಡಿದರು.
ದೇಶದಲ್ಲಿ ಇತ್ತೀಚಿಗೆ ಕಲುಷಿತ ವಾತಾವರಣ ನಿರ್ಮಾಣವಾಗಿದ್ದು, ಅದನ್ನು ತಡೆಯಬೇಕು. ಸರ್ವ ಧರ್ಮದವರೂ ಪ್ರಗತಿಯತ್ತ ಸಾಗಬೇಕೆಂದರೆ ಅದು ಕಾಂಗ್ರೆಸ್ ಪಕ್ಷದಿಂದ ಮಾತ್ರ ಸಾಧ್ಯ. ಹೀಗಾಗಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿ ಎಂದು ತಿಳಿಸಿದರು.
ಚನ್ನರಾಜ ಹಟ್ಟಿಹೊಳಿ ಚರ್ಚೆ

ಸಾಮಾಜಿಕ ನ್ಯಾಯ, ಮಹಿಳಾ/ಯುವಕರ ಸಬಲೀಕರಣ ಹಾಗೂ ಉದ್ಯೋಗವಕಾಶಗಳ ಸೃಷ್ಟಿ ಹಾಗೂ ನಾ ನಾಯಕಿ ಕಾರ್ಯಕ್ರಮ ಮತ್ತು ಸ್ವಾತಂತ್ರ್ಯ ಅಮೃತ ಮಹೋತ್ಸವ ಆಚರಣೆ ಅನುಷ್ಠಾನ ಸಮಿತಿಯ ಚೇರಮನ್ ಆಗಿ ಆಯ್ಕೆಯಾಗಿರುವ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಉದ್ಘಾಟನೆ ಕಾರ್ಯಕ್ರಮದ ನಂತರ ಸಮಿತಿಯ ಸದಸ್ಯರೊಂದಿಗೆ ಸುಧೀರ್ಘವಾಗಿ ಚರ್ಚಿಸಿದರು.

2023ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಬೇಕಿದೆ. ಆ ದಿಸೆಯಲ್ಲಿ ನಾವು ಅವಿಶ್ರಾಂತವಾಗಿ, ವ್ಯವಸ್ಥಿತವಾಗಿ ಯೋಜನೆ ಹಾಕಿಕೊಂಡು ಕೆಲಸ ಮಾಡಬೇಕಿದೆ. ಸೆಲ್ಫ್ ಸ್ಟಾರ್ಟ್ ರೀತಿಯಲ್ಲಿ ನೀವೆಲ್ಲ ಮುನ್ನುಗ್ಗಬೇಕಿದೆ ಎಂದು ಚನ್ನರಾಜ ಸೂಚಿಸಿದರು.

