Belagavi NewsBelgaum NewsKannada NewsKarnataka NewsLatest

ಎಲ್ಲ ವಿಕಲಚೇತನರಿಗೆ ಏಕಕಾಲದಲ್ಲಿ ವಾಹನ – ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ರಾಜ್ಯದಲ್ಲಿರುವ ಎಲ್ಲ ವಿಕಲಚೇತನರಿಗೆ ಅವರ ಅಗತ್ಯತೆ ಆಧರಿಸಿ ಒಂದೇ ಬಾರಿಗೆ ದ್ವಿಚಕ್ರ ವಾಹನ ನೀಡಲು ತೀರ್ಮಾನಿಸಲಾಗಿದೆ. ಆದ್ದರಿಂದ ಅರ್ಹ ವ್ಯಕ್ತಿಗಳ ಮಾಹಿತಿಯನ್ನು ಸಂಗ್ರಹಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರು ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ.

ಬೆಳಗಾವಿಯಲ್ಲಿ ಸೋಮವಾರ ಕರ್ನಾಟಕ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನೆ ಸಭೆಯಲ್ಲಿಅವರು ಮಾತನಾಡಿದರು. ರಾಜ್ಯದಲ್ಲಿ ಸುಮಾರು 4,500 ಇಂತಹ ವಿಕಲಚೇತನರಿದ್ದಾರೆ. ಅವರಿಗೆಲ್ಲ ವಿಶೇಷವಾಗಿ ವಿನ್ಯಾಸ ಮಾಡಲಾಗಿರುವ ದ್ವಿಚಕ್ರ ವಾಹನ ನೀಡಲಾಗುತ್ತದೆ. ಇದಕ್ಕಾಗಿ ಬಜೆಟ್ ನಲ್ಲಿ ಹಣ ಒದಗಿಸಲಾಗಿದೆ ಎಂದು ಸಚಿವರು ತಿಳಿಸಿದರು.

ಹೆಸ್ಕಾಂ ನಿರ್ಲಕ್ಷ್ಯ ದಿಂದ ವಿದ್ಯುತ್ ತಂತಿ ತಗುಲಿ ಮರಣ ಹೊಂದಿರುವವರಿಗೆ ಕೂಡಲೇ ಪರಿಹಾರವನ್ನು ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದು ಸಚಿವರು ತಿಳಿಸಿದರು.

ಬಾಡಿಗೆ ಕಟ್ಟಡಗಳಲ್ಲಿರುವ ಅಂಗನವಾಡಿ ಕೇಂದ್ರಗಳನ್ನು ಸಾಧ್ಯವಿದ್ದಷ್ಟು ಶಾಲಾ ಆವರಣದಲ್ಲಿ ನಿರ್ಮಿಸಲು ಆದ್ಯತೆ ನೀಡಬೇಕು. ಈ ರೀತಿ ಮಾಡುವುದರಿಂದ ಅಂಗನವಾಡಿ ಮಕ್ಕಳು ಮುಂದೆ ಅದೇ ಶಾಲೆಗೆ ಪ್ರವೇಶ ಪಡೆಯಲು ಅನುಕೂಲವಾಗಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದರು.

ಅಂಗನವಾಡಿ ಕಾರ್ಯಕರ್ತೆಯರ ನೇಮಕದಲ್ಲಿ ಸ್ಥಳೀಯ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು ಎಂದು ಅವರು ಸೂಚಿಸಿದರು.

ಗೃಹಲಕ್ಷ್ಮೀ ಯೋಜನೆ; ಫಲಾನುಭವಿಗಳ ನೋಂದಣಿಗೆ ಸೂಚನೆ:

ಗೃಹಲಕ್ಷ್ಮೀ ಯೋಜನೆಗೆ 17,500 ಕೋಟಿ ರೂಪಾಯಿ ಅನುದಾನ ಒದಗಿಸಲಾಗಿದೆ. ಜುಲೈ 20 ರಿಂದ ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳ ನೋಂದಣಿ ಪ್ರಕ್ರಿಯೆ ಆರಂಭವಾಗಿದೆ. ನೋಂದಣಿ ಪ್ರಕ್ರಿಯೆ ಹಾಗೂ ನೋಂದಾಯಿತ ಫಲಾನುಭವಿಗಳ ಸಂಖ್ಯೆ ಮತ್ತಿತರ ವಿಷಯಗಳನ್ನು ಸ್ಥಳೀಯ ಶಾಸಕರ ಗಮನಕ್ಕೆ ತರಬೇಕು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ತಹಶೀಲ್ದಾರರಿಗೆ ಸೂಚನೆ ನೀಡಿದರು.

ಸರಕಾರದ ಯೋಜನೆಯನ್ನು ಜನರ ಮನೆಬಾಗಿಲಿಗೆ ಕೊಂಡೊಯ್ಯಲು ಅನುಕೂಲವಾಗುವಂತೆ ಪ್ರಜಾಪ್ರತಿನಿಧಿಗಳನ್ನು ನೇಮಿಸಲಾಗುತ್ತಿದೆ. ಸರಕಾರದ ಯೋಜನೆಯನ್ನು ಮನೆ ಬಾಗಿಲಿಗೆ ತಂದಿದ್ದಾರೆಂದು ಶಾಸಕರಿಗೆ ಒಳ್ಳೆಯ ಹೆಸರು ಬರಲಿ ಎಂದು ಪ್ರಜಾಪ್ರತಿನಿಧಿಗಳನ್ನು ಅವರ ಮೂಲಕವೇ ನೇಮಿಸಲು ಕ್ರಮಕೈಗೊಳ್ಳಲಾಗಿದೆ. ಗ್ರಾಮ ಪಂಚಾಯತಿ ಮಟ್ಟದಲ್ಲಿ ಗೃಹಲಕ್ಷ್ಮೀ ಯೋಜನೆ ಕುರಿತು ಪ್ರತಿದಿನ ಹೆಚ್ಚಿನ ಪ್ರಚಾರ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button