*ಬೆಳೆ ಹಾನಿ ಪರಿಹಾರ ವಿತರಣೆಗೆ ಶೀಘ್ರವೇ ಕ್ರಮಕೈಗೊಳ್ಳಬೇಕು: ಸಂಜಯ ಶೆಟ್ಟೆಣ್ಣವರ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಪ್ರಸಕ್ತ ಸಾಲಿನಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದ್ದು ಅತಿವೃಷ್ಟಿಯಿಂದಾಗಿ ಹಾನಿಗೊಳಗಾದ ಬೆಳೆ ಹಾನಿ ಪರಿಹಾರ ವಿತರಣೆಗೆ ಶೀಘ್ರವೇ ಕ್ರಮಕೈಗೊಳ್ಳಬೇಕು ಎಂದು ಸಹಕಾರ ಇಲಾಖೆಯ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಸಂಜಯ ಶೆಟ್ಟೆಣ್ಣವರ ಅವರು ತಿಳಿಸಿದರು.
ಜಿಲ್ಲಾ ಪಂಚಾಯಿತ ಸಭಾಂಗಣದಲ್ಲಿ ಸೋಮವಾರ (ನ.17) ನಡೆದ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಬೆಳೆಹಾನಿ ಪರಿಹಾರಕ್ಕೆ ಸಂಬಂಧಿಸಿದಂತೆ ಹಾನಿಗೊಳಗಾದ ಕೃಷಿ ಪ್ರದೇಶದ ದಾಖಲೆಗಳನ್ನು ತಂತ್ರಾಂಶದಲ್ಲಿ ದಾಖಲಿಸಬೇಕು. ಯಾವುದೇ ಕಾರಣಕ್ಕೂ ಬೆಳೆ ಪರಿಹಾರ ವಿತರಣೆಯಲ್ಲಿ ವಿಳಂಭಕ್ಕೆ ಆಸ್ಪದ ನೀಡದಂತೆ ನಿಗಾವಹಿಸಬೇಕು. ಈ ಕಾರ್ಯದಲ್ಲಿ ಎದುರಾಗುವ ತಾಂತ್ರಿಕ ತೊಂದರೆಗಳನ್ನು ತ್ವರಿತವಾಗಿ ನಿವಾರಿಸಬೇಕು.
ಹಿಂಗಾರು ಹಂಗಾಮಿಗೆ ಬೇಕಾಗುವಂತಹ ಅಗತ್ಯದ ರಸಗೊಬ್ಬರ ಪೂರೈಕೆಯಲ್ಲಿ ಯಾವುದು ತೊಂದರೆಗಳಾಗದಂತೆ ನಿಗಾವಹಿಸಬೇಕು. ಯೂರಿಯಾ, ಡಿ.ಎ.ಪಿ ಸೇರಿದಂತೆ ಅಗತ್ಯ ದಾಸ್ತಾನುಗಳನ್ನು ರೈತ ಸಂಪರ್ಕ ಕೇಂದ್ರಗಳ ಮೂಲಕ ವಿತರಣೆ ಮಾಡಬೇಕು. ರೈತರಿಗೆ ಯಾವುದೇ ಸಮಸ್ಯೆಗಳು ಇದ್ದಲ್ಲಿ ತಕ್ಷಣವೇ ಸಂಬಂಧಿಸಿದ ಅಧಿಕಾರಿಗಳು ಸ್ಪಂದಿಸಿ ಪರಿಹರಿಸುವ ಕೆಲಸಕ್ಕೆ ಮುಂದಾಗಬೇಕು ಎಂದರು.
ಜಲ ಜೀವನ ಮಿಷನ ಯೋಜನೆಯಡಿ ಕೈಗೊಳ್ಳಲಾದ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. ಗ್ರಾಮೀಣ ಪ್ರದೇಶಗಳಲ್ಲಿನ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ನಿಯಮಿತವಾಗಿ ನಿರ್ವಹಣೆ ಮಾಡಬೇಕು.
ಬಹುಗ್ರಾಮ ಕುಡಿಯುವ ನೀರಿನ ಯೋಜನೆಯಡಿ ಕೈಗೊಳ್ಳಲಾಗುತ್ತಿರುವ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. ಈಗಾಗಲೇ ಪ್ರಗತಿಯಲ್ಲಿರುವ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಲು ತಿಳಿಸಿದರು.
ಇಲಾಖೆಗಳ ವಿವಿಧ ಕಾಮಗಾರಿಗೆ ಬಿಡುಗಡೆಯಾದ ಹಣ ಬಳಕೆಯಾಗದೆ ಬಾಕಿ ಉಳಿದಿದ್ದು, ಅನುದಾನವನ್ನು ಕೊರತೆ ಇರುವ ಕಾಮಗಾರಿಗಳಿಗೆ ಬಳಕೆ ಮಾಡಿಕೊಂಡು ನಿಗದಿತ ಅವಧಿಯೊಳಗೆ ಪ್ರಗತಿ ಸಾಧಿಸಬೇಕು. ಸಂಪೂರ್ಣ ಅನುದಾನವನ್ನು ಬಳಕೆ ಮಾಡಿಕೊಂಡಲ್ಲಿ ಮಾತ್ರ ಗರಿಷ್ಠ ಆರ್ಥಿಕ ಪ್ರಗತಿ ಸಾಧಿಸಲು ಸಾಧ್ಯವಾಗುತ್ತದೆ.
ಕೆಲವು ಕಾಮಗಾರಿಗಳಿಗೆ ಭೂ ಸ್ವಾದೀನ, ಕಳಪೆ ಕಟ್ಟಡ, ಸಾಮಾಜಿಕ ಸಮಸ್ಯೆ ಸೇರಿದಂತೆ ನಾನಾ ಅಡೆತಡೆಗಳಿರುತ್ತವೆ. ಅಂತಹ ಸಮಸ್ಯೆಗಳನ್ನು ತ್ವರಿತವಾಗಿ ಬಗೆಹರಿಸಿಕೊಂಡು ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು ಎಂದು ಹೇಳಿದರು.
31 ಎಂ.ಎಲ್.ಡಿ ಜಲಶುದ್ದೀಕರಣ ಘಟಕ, ಮೇಲ್ಮಟ್ಟದ ಜಲ ಸಂಗ್ರಹಗಾರ, ಭೂಮಟ್ಟದ ಜಲ ಸಂಗ್ರಹಗಾರ ಕಾಮಗಾರಿಗಳು ಚಾಲನೆಯಲಿದ್ದು, ನಿಗದಿತ 2026ರ ಡಿಸೆಂಬರ್ ಅವಧಿಯೊಳಗೆ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು ಎಂದರು.
ಜಿಲ್ಲೆಯ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರು ಕಾರ್ಯ ನಿರ್ವಹಿಸಂತೆ ನೋಡಿಕೊಳ್ಳಬೇಕು. ಆರೋಗ್ಯ ಇಲಾಖೆಯಿಂದ ತಾಲೂಕಾ ಮಟ್ಟದಲ್ಲಿ ಸಭೆಗಳನ್ನು ಆಯೋಜಿಸಬೇಕು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳು ಸಮನ್ವಯದೊಂದಿಗೆ ಕಾರ್ಯ ನಿರ್ವಹಿಸಬೇಕು ಎಂದು ಉಸ್ತವಾರಿ ಕಾರ್ಯದರ್ಶಿ ಸಂಜಯ ಶೆಟ್ಟೆಣ್ಣವರ ಹೇಳಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ರಾಹುಲ್ ಶಿಂಧೆ 2025-26 ಸಾಲಿನ ಬೀಜ ರಸಗೊಬ್ಬರಗಳನ್ನು ಬೇಡಿಕೆಗೆ ಅನುಗುಣವಾಗಿ ಈಗಾಗಲೇ ವಿತರಣೆ ಮಾಡಲಾಗಿದೆ. ಹಿಂಗಾರು ಬೇಸಿಗೆ ಹಂಗಾಮಿಗೆ ಬಿತ್ತನೆ ಬೀಜಗಳ 329 ಸೊಸೈಟಿಗಳ ಮೂಲಕ ರಸಗೊಬ್ಬರಗಳ ವಿತರಣೆ ಮಾಡಲಾಗುತ್ತಿದೆ. ಜೋಳ, ಮೆಕ್ಕೆಜೋಳ, ಗೋಧಿ, ಕಡಲೆ, ನೆಲಗಡಲೆ ಹಾಗೂ ಸೂರ್ಯಕಾಂತಿ ಬೆಳೆಗಳಿಗೆ ಸಹಾಯದನದಡಿ ಬೇಡಿಕೆಯಂತೆ ಬಿತ್ತನೆ ಬೀಜಗಳನ್ನು ಪೂರೈಸಲಾಗಿದೆ ಎಂದು ಹೇಳಿದರು.
ರಾಮದುರ್ಗ ಯರಗಟ್ಟಿ ತಾಲೂಕಿನಲ್ಲಿ ಬೆಳೆ ಹಾನಿಗಳಿಗೆ ಪರಿಹಾರ ಈಗಾಗಲೇ ಬಿಡುಗಡೆ ಮಾಡಲಿದೆ. ಹವಾಮಾನ ಆಧಾರಿತ ಬೆಳೆ ವಿಮೆ ಪಾವತಿಗೆ ಎಲ್ಲ ರೈತರಿಗೆ ಸೂಚನೆ ನೀಡಲಾಗಿದೆ ಅದರಂತೆ ಬೆಳೆ ಹಾನಿಗೊಳಗಾದ ರೈತರಿಗೆ ವಿಮೆ ಕ್ಲೀಮ್ ಮಾಡಿ ಕೊಡುವ ಪ್ರಕ್ರಿಯೆ ನಡೆದಿದೆ ಎಂದು ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಮಹಾಂತೇಶ ಮುರಗೋಡ ಹೇಳಿದರು.
ರೈತರ ತರಕಾರಿ ಹಣ್ಣುಗಳನ್ನು ಸಂಗ್ರಹಿಸಲು ಈಗಾಗಲೇ ಜಿಲ್ಲೆಯಲ್ಲಿ ಸುಮಾರು 10 ಕೋಲ್ಡ್ ಸ್ಟೋರೇಜ್ ಇವೆ. ಮೂಡಲಗಿ, ಗೋಕಾಕ, ರಾಯಬಾಗ ಭಾಗದಲ್ಲಿ ಅರಿಶಿಣ ಬೆಳೆ ಹೆಚ್ಚಾಗಿ ಬೆಳೆಯುತ್ತಿದ್ದು, ಅರಿಶಿಣ ಬೆಳೆ ಮಾರಾಟಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ತೋಟಗಾರಿಕೆ ಇಲಾಖೆಯಿಂದ ಅವರಿಗೆ ಸಲಹೆ ನೀಡಲಾಗುತ್ತಿದೆ ಎಂದು ಮಹಾಂತೇಶ ಮುರಗೋಡ ಹೇಳಿದರು.
ನಗರಾಭಿವೃದ್ಧಿ ಯೋಜನೆಯಡಿ ಅಗತ್ಯ ಸ್ಥಳಗಳಲ್ಲಿ ಇಂದಿರಾ ಕ್ಯಾಂಟಿನ್ ಈಗಾಗಲೇ ಪ್ರಾರಂಭಿಸಲಾಗಿದೆ ಅದರಂತೆ ಪ್ರತಿ ಊಟಕ್ಕೆ 10 ರೂಪಾಯಿ ಮತ್ತು ಬೆಳಗಿನ ಉಪಹಾರಕ್ಕೆ 5 ರೂಪಾಯಿಯಂತೆ ದರ ನಿಗದಿ ಮಾಡಲಾಗಿದೆ ಎಂದು ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಲ್ಲಿಕಾರ್ಜುನ್ ಕಲಾದಗಿ ವಿವರಿಸಿದರು.
ಹಿಂದುಳಿದ ಕಲ್ಯಾಣ ಇಲಾಖೆ 166 ಜಿಲ್ಲೆಯಲ್ಲಿ ವಸತಿ ನಿಲಯಗಳಿವೆ. 30 ಹೊಸ ವಸತಿ ನಿಲಯಗಳ ನಿರ್ಮಾಣಕ್ಕೆ ಈಗಾಗಲೇ ಪ್ರಸ್ತಾವನೆ ಸಲ್ಲಿಸಲಾಗಿದೆ. ಸಮಾಜ ಕಲ್ಯಾಣ ಇಲಾಖೆ 66 ಮೆಟ್ರಿಕ್ ಪೂರ್ವ ಮತ್ತು 36 ಮೆಟ್ರಿಕ್ ನಂತರ ವಸತಿ ನಿಲಯಗಳು ಇವೆ. ವಸತಿ ನಿಲಯ ನಿರ್ಮಾಣಕ್ಕೆ ಸಮಾಜ ಕಲ್ಯಾಣ ಇಲಾಖೆಗೆ ನಿವೇಶನ ಕೊರತೆ ಇರುವುದಿಲ್ಲ ಎಂದು ಸಂಬಂಧಿಸಿದ ಅಧಿಕಾರಿಗಳು ಮಾಹಿತಿ ನೀಡಿದರು.
ಅಪರ ಜಿಲ್ಲಾಧಿಕಾರಿ ವಿಜಯಕುಮಾರ ಹೊನಕೇರಿ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಬಸವರಾಜ ಹೆಗ್ಗನಾಯಕ, ಮಹಾನಗರ ಪಾಲಿಕೆ ಆಯುಕ್ತ ಶುಭ.ಬಿ, ಜಿಲ್ಲಾ ಪಂಚಾಯತ್ ಮುಖ್ಯ ಲೆಕ್ಕಾಧಿಕಾರಿ ಪರುಶುರಾಮ ದುಡಗುಂಟಿ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ರಾಮನಗೌಡ ಕನ್ನೊಳ್ಳಿ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಕೊಳೇಕರ, ತೋಟಗಾರಿಕೆ ಉಪ ನಿರ್ದೇಶಕ ಮಹಾಂತೇಶ ಮುರಗೋಡ, ಆಹಾರ ಇಲಾಖೆ ಉಪ ನಿರ್ದೇಶಕ ಮಲ್ಲಿಕಾರ್ಜುನ್ ನಾಯಕ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಚೇತನಕುಮಾರ, ಡಿಡಿಪಿಐ ಲೀಲಾವತಿ ಹಿರೇಮಠ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಪ ನಿರ್ದೇಶಕಿ ವಿದ್ಯಾವತಿ ಭಜಂತ್ರಿ ಸೇರಿದಂತೆ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.



