Kannada NewsKarnataka NewsLatestPolitics

*ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳ ಈಡೇರಿಕೆಗೆ ಕ್ರಮ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌*

10 ಸಾವಿರ ಕೇಂದ್ರಗಳಲ್ಲಿ ಎಲ್‌ಕೆಜಿ, ಯುಕೆಜಿ ತರಗತಿಗಳು ಆರಂಭ

ಪ್ರಗತಿವಾಹಿನಿ ಸುದ್ದಿ: ಮುಂದಿನ ಜೂನ್‌ ತಿಂಗಳಿಂದ 10 ಸಾವಿರ ಅಂಗನವಾಡಿ ಕೇಂದ್ರಗಳಲ್ಲಿ ಎಲ್‌ಕೆಜಿ, ಯುಕೆಜಿ ತರಗತಿಗಳನ್ನು ಆರಂಭಿಸಲಾಗುವುದು. ಹಂತ ಹಂತವಾಗಿ ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳನ್ನು ಈಡೇರಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಹೇಳಿದರು.

Home add -Advt

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ವತಿಯಿಂದ ಫ್ರೀಡಂ ಪಾರ್ಕ್‌ನಲ್ಲಿ ಅಂಗನವಾಡಿ ಕಾರ್ಯಕರ್ತರು ನಡೆಸುತ್ತಿರುವ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಮನವಿ ಸ್ವೀಕರಿಸಿ ಮಾತನಾಡಿದ ಸಚಿವರು, ಈಗಾಗಲೇ ಐದು ಸಾವಿರ ಅಂಗನವಾಡಿ ಕೇಂದ್ರಗಳಲ್ಲಿ ಎಲ್‌ಕೆಜಿ, ಯುಕೆಜಿ ತರಗತಿಗಳನ್ನು ಆರಂಭಿಸಲಾಗಿದೆ ಎಂದರು.

ಸಂಘಟನೆಯವರ ಜೊತೆಗೆ ಮಾತುಕತೆ ನಡೆಸಿ ಮುಖ್ಯಮಂತ್ರಿ ಅವರ ಜೊತೆ ಚರ್ಚೆ ನಡೆಸಲಾಗುವುದು. ಮುಖ್ಯಮಂತ್ರಿಗಳ ಸಮಯ ನಿಗದಿ ಮಾಡಿ ಶಿಕ್ಷಣ ಇಲಾಖೆಯ ಜೊತೆಗೆ ಮಾತುಕತೆ ನಡೆಸಲಾಗುವುದು. ಎಂಎ, ಬಿಎಡ್‌, ಪದವಿ ಪಡೆದಿರುವವರು ಅಂಗನವಾಡಿ ಕೇಂದ್ರಗಳಲ್ಲಿ ಕಾರ್ಯಕರ್ತೆಯಾಗಿ ಕೆಲಸ ಮಾಡುತ್ತಿದ್ದಾರೆ. ಅಂಗನವಾಡಿ ಕೇಂದ್ರಗಳಲ್ಲಿಯೇ ಎಲ್‌ಕೆಜಿ, ಯುಕೆಜಿ ತರಗತಿಗಳನ್ನು ಉಳಿಸಿಕೊಳ್ಳಲಾಗುವುದು ಎಂದು ಸಚಿವರು ಭರವಸೆ ನೀಡಿದರು.

ನಾನು ಈ ಹಿಂದೆ ಮುಖ್ಯಮಂತ್ರಿಗಳೊಂದಿಗೆ ಮಾತನಾಡಿ ಬಿಎಲ್‌ಒ ಕೆಲಸಗಳಿಂದ ಅಂಗನವಾಡಿ ಕಾರ್ಯಕರ್ತೆಯರನ್ನು ಕೈಬಿಡುವಂತೆ ಮಾಡಿದ್ದೆ. ಆದರೆ, ಬಿಎಲ್‌ಒ ಕೆಲಸಗಳಿಗೆ ಮತ್ತೊಮ್ಮೆ ಅಂಗನವಾಡಿ ಕಾರ್ಯಕರ್ತೆಯರನ್ನು ನಿಯೋಜಿಸಲಾಗಿದೆ. ಮುಂದಿನ ದಿನಗಳಲ್ಲಿ ಇದರಿಂದ ಮುಕ್ತಿಕೊಡಿಸಲು ಪ್ರಯತ್ನಿಸಲಾಗುವುದು ಎಂದರು.

ಪ್ರತಿಭಟನೆ ಕೈಬಿಡಲು ಮನವಿ
ನಾನೊಬ್ಬ ಮಹಿಳೆಯಾಗಿ ನಿಮ್ಮ (ಅಂಗನವಾಡಿ ಕಾರ್ಯಕರ್ತರು) ಧ್ವನಿಯಾಗಿ ಕೆಲಸ ಮಾಡುತ್ತಿರುವೆ. ನಾನು ಸಚಿವೆಯಾದ ಬಳಿಕ ಹಲವು ಬೇಡಿಕೆಗಳನ್ನು ಈಡೇರಿಸಿರುವೆ. ಮುಖ್ಯಮಂತ್ರಿಗಳ ಜೊತೆ ಚರ್ಚೆ ನಡೆಸಿ ನಿಮ್ಮ ಬೇಡಿಕೆಗಳನ್ನು ಈಡೇರಿಸಲಾಗುವುದು ಎಂದು ಸಚಿವರು ಭರವಸೆ ನೀಡಿದರು.

ಈ ವೇಳೆ ಇಲಾಖೆಯ ಕಾರ್ಯದರ್ಶಿ ಡಾ.ಶಾಮ್ಲಾ ಇಕ್ಬಾಲ್‌, ನಿರ್ದೇಶಕರಾದ ಮಹೇಶ್‌ ಬಾಬು, ಸಂಘದ ಅಧ್ಯಕ್ಷರಾದ ವರಲಕ್ಷ್ಮೀ, ಕಾರ್ಯಾಧ್ಯಕ್ಷರಾದ ಶಾಂತಾ ಎಸ್.ಘಂಟಿ, ಪ್ರಧಾನ ಕಾರ್ಯದರ್ಶಿ ಎಚ್.ಎಸ್.ಸುನಂದಾ ಸೇರಿದಂತೆ ಸಂಘಟನೆಯ ಪದಾಧಿಕಾರಿಗಳು, ಸಾವಿರಾರು ಸಂಖ್ಯೆಯಲ್ಲಿ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

Related Articles

Back to top button