*ಅಣ್ಣಾ ಹಜಾರೆ ಆಸ್ಪತ್ರೆಗೆ ದಾಖಲು*

ಪ್ರಗತಿವಾಹಿನಿ ಸುದ್ದಿ: ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ನಿರ್ಜಲೀಕರಣ ಹಾಗೂ ಮೂತ್ರಪಿಂಡದ ಸಮಸ್ಯೆಯಿಂದ ಬಳಲುತ್ತಿರುವ ಅಣ್ಣಾ ಹಜಾರೆ ಅವರನ್ನು ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು. ತೀವ್ರ ನಿಗಾ ಘಟಕದಲ್ಲಿರಿಸಲಾಗಿದೆ.
87 ವರ್ಷದ ಅಣ್ಣಾ ಹಜಾರೆಯವರಿಗೆ ಆರಂಭದಲ್ಲಿ ಅವರ ಸ್ವಗ್ರಾಮ ರಾಳೇಗಾಂಧಿ ಸಿದ್ಧಿ ಬಳಿಯಿರುವ ವೈದ್ಯಕೀಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಅವರಿಗೆ ತೀವ್ರವಾದ ವೈರಲ್ ಸೋಂಕು, ದೇಹದಲ್ಲಿ ನೀರಿನಂಶ ಕಡಿಮೆಯಾಗಿರುವುದು ಮತ್ತು ಮೂತ್ರಪಿಂಡದ ತೊಂದರೆಗಳು ಕಾಣಿಸಿಕೊಂಡಿದ್ದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ತುರ್ತಾಗಿ ಮುಂಬೈ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.
ಡಾ. ಗೌತಮ್ ಭನ್ಸಾಲಿ ಅವರ ನೇತೃತ್ವದ ವೈದ್ಯರ ತಂಡದಿಂದ ಅಣ್ಣಾ ಹಜಾರೆಯವರನ್ನು ವೈದ್ಯಕೀಯ ನಿಗಾದಲ್ಲಿ ಇರಿಸಲಾಗಿದೆ. ವೈದ್ಯಕೀಯ ತಜ್ಞರು ವಿವರವಾದ ಪರೀಕ್ಷೆಗಳನ್ನು ನಡೆಸುತ್ತಿದ್ದು, ವರದಿ ಬಂದ ನಂತರ ಮುಂದಿನ ಚಿಕಿತ್ಸೆಯ ಬಗ್ಗೆ ನಿರ್ಧರಿಸಲಾಗುತ್ತದೆ. ಅವರ ಆರೋಗ್ಯದ ಸ್ಥಿತಿಗತಿಗಳನ್ನು ಸೂಕ್ಷ್ಮವಾಗಿ ಗಮನಿಸಲಾಗುತ್ತಿದೆ ಎಂದು ತಿಳಿದಿಬಂದಿದೆ.
ಅಣ್ಣಾ ಹಜಾರೆ ಅವರು ಭ್ರಷ್ಟಾಚಾರ ವಿರೋಧಿ ಹೋರಾಟಗಾರರು ಮತ್ತು ಸಮಾಜ ಸುಧಾರಕರಲ್ಲಿ ಒಬ್ಬರು. ಮಹಾರಾಷ್ಟ್ರದ ತಮ್ಮ ಸ್ವಗ್ರಾಮವಾದ ರಾಳೇಗಾಂಧಿ ಸಿದ್ಧಿಯನ್ನು ಜಲಾನಯನ ಅಭಿವೃದ್ಧಿ, ಅರಣ್ಯೀಕರಣ, ಗ್ರಾಮೀಣ ಸ್ವಾವಲಂಬನೆ ಮತ್ತು ವ್ಯಸನ ನಿರ್ಮೂಲನೆಯ ಮುಂದಾಳತ್ವದ ಮೂಲಕ ಮಾದರಿ ಗ್ರಾಮವಾಗಿ ಪರಿವರ್ತಿಸುವಲ್ಲಿ ಪ್ರಮುಖ ಪಾತ್ರವಹಿಸಿದವರು.



