EducationKannada NewsKarnataka NewsLatest

*ಜನಿವಾರ ತೆಗೆಸಿದ ವಿದ್ಯಾರ್ಥಿಗಳಿಗೆ ಸಿಇಟಿ ಮರು ಪರೀಕ್ಷೆಗೆ ಅವಕಾಶ*

ಪ್ರಗತಿವಾಹಿನಿ ಸುದ್ದಿ: ವೃತ್ತಿಪರ ಕೋರ್ಸ್ ಗಳ ಪ್ರವೇಶದ ಸಿಇಟಿ ಪರೀಕ್ಷೆ ವೇಳೆ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಗಳಿಗೆ ಮರು ಪರೀಕ್ಷೆಗೆ ಅವಕಾಶ ನೀಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸುಧಾಕರ್ ಮಾಹಿತಿ ನೀಡಿದ್ದಾರೆ.

ಸಿಇಟಿ ಪರೀಕ್ಷೆಗೆ ಬಂದಿದ್ದ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರದ ಸಿಬ್ಬಂದಿಗಳು ಜನಿವಾರ ತೆಗೆಸಿ ಪರೀಕ್ಷೆ ಬರೆಸಿದ್ದರು. ಬೆಂಗಳೂರಿನ ಮಡಿವಾಳ ಬಳಿಯ ಕೃಪಾನಿಧಿ ಕಾಲೇಜು ಹಾಗೂ ಚಿಕ್ಕಬಳ್ಳಾಪುರದ ಪರೀಕ್ಷಾ ಕೇಂದ್ರದಲ್ಲಿ ಈ ಘಟನೆ ನಡೆದಿತ್ತು. ಪರೀಕ್ಷಾ ಕೇಂದ್ರದ ಸಿಬ್ಬಂದಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಘಟನೆ ಖಂಡಿಸಿದ್ದ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಕಾಲೇಜಿನ ಮಾನ್ಯತೆ ರದ್ದು ಮಾಡುವಂತೆ ಹಾಗೂ 25 ಲಕ್ಷ ದಂಡ ವಿಧಿಸುವಂತೆ ಮುಖ್ಯಮಂತ್ರಿಗಳಿಗೆ ಪತ್ರ ಬರೆದು ಒತ್ತಾಯಿಸಿತ್ತು.

Home add -Advt

ಇದೇ ವೇಳೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಜಿಲ್ಲಾಧಿಕಾರಿಗಳಿಗೆ ಪ್ರಕರಣದ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಂಡ ಬಗ್ಗೆ ವರದಿ ನೀಡುವಂತೆ ಸೂಚಿಸಿತ್ತು. ಈ ಬೆಳವಣಿಗೆ ಬೆನ್ನಲ್ಲೇ ಕೃಪಾನಿಧಿ ಕಾಲೇಜಿನ ಪರೀಕ್ಷಾ ಕೇಂದ್ರದ ಮೂವರು ಸಿಬ್ಬಂದಿಗಳನ್ನು ಕಾಲೇಜು ಆಡಳಿತ ಮಂಡಳಿ ಅಮಾನತುಗೊಳಿಸಿ ಆದೇಶ ಹೊರಡಿಸಿತ್ತು. ಪರೀಕ್ಷೆ ವೇಳೆ ವಿದ್ಯಾರ್ಥಿಗಳ ಜನಿವಾರ ತೆಗೆಸಿ ವಿದ್ಯಾರ್ಥಿಗಳ ಆತ್ಮಸ್ಥೈರ್ಯ ಕುಸಿಯುವಂತೆ ಮಾಡಿ, ಗೊಂದಲವುಂಟಾಗುವಂತೆ ಮಾಡಿದ್ದಕ್ಕೆ ಮತ್ತೊಮ್ಮೆ ಪರೀಕ್ಷೆ ಬರೆಯಲು ಅವಕಾಶ ನಿಡುವಂತೆ ಪೋಷಕರು, ವಿದ್ಯಾರ್ಥಿಗಳು ಒತ್ತಾಯಿಸಿದ್ದರು.

ಇದೀಗ ಉನ್ನತ ಶಿಕ್ಷಣ ಸಚಿವ ಸುಧಾಕರ್ ಈ ಬಗ್ಗೆ ಮಾಹಿತಿ ನೀಡಿದ್ದು, ಸಿಇಟಿ ಪರೀಕ್ಷೆಯಲ್ಲಿ ಜನಿವಾರ ತೆಗೆಸಿ ಪರೀಕ್ಷೆ ಬರೆಸಿದ ಪ್ರಕರಣ ಸಂಬಂಧ ವಿದ್ಯಾರ್ಥಿಗಳಿಗೆ ಮರು ಪರೀಕ್ಷೆಗೆ ಅವಕಾಶ ನೀಡಲಾಗುವುದು. ವಿದ್ಯಾರ್ಥಿಗಳು ಹಾಗೂ ಪೋಷಕರು ಈ ಬಗ್ಗೆ ಒಪ್ಪಿದರೆ ಅಂತಹ ವಿದ್ಯಾರ್ಥಿಗಳಿಗೆ ಮರು ಪರೀಕ್ಷೆಗೆ ಅವಕಾಶ ಮಾಡಿಕೊಡುವುದಾಗಿ ತಿಳಿಸಿದ್ದಾರೆ.

Related Articles

Back to top button