*ಎಸ್ ಪಿ ಕಚೇರಿ ಮುತ್ತಿಗೆಗೆ ಯತ್ನ: ಬಿಜೆಪಿ ಕಾರ್ಯಕರ್ತರನ್ನು ವಶಕ್ಕೆ ಪಡೆದ ಪೊಲೀಸರು*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಉಗ್ರರಿಗೆ, ಜೈಲು ಶಿಕ್ಷೆಯಲ್ಲಿರುವ ಅಪರಾಧಿಗಳಿಗೆ ರಾಜಾತಿಥ್ಯ ನೀಡುತ್ತಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ವತಿಯಿಂದ ನಗರದ ಎಸ್ ಪಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಮುತ್ತಿಗೆ ಹಾಕಲು ಯತ್ನಿಸಲಾಯಿತು.
ಇಂದು ನಗರದ ಎಸ್ ಪಿ ಕಚೇರಿ ಮುಂದೆ ಭಾರತೀಯ ಜನತಾ ಪಕ್ಷದ ವತಿಯಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಪ್ರತಿಭಟನೆ ವೇಳೆ ಎಸ್ ಪಿ ಕಚೇರಿ ಮುತ್ತಿಗೆ ಹಾಕಲು ಯತ್ನಿಸಿದರು. ಬಳಿಕ ಬಿಜೆಪಿ ಕಾರ್ಯಕರ್ತರನ್ನು ಪೋಲಿಸರು ವಶಕ್ಕೆ ಪಡೆದರು.
ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ ಸುಭಾಷ್ ಪಾಟೀಲ್ ಅವರು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದಿದ್ದು, ಅತ್ಯಾಚಾರ, ಕೊಲೆ, ದರೋಡೆ ಪ್ರಕರಣಗಳು ಸರಣಿ ರೂಪದಲ್ಲಿ ಘಟಿಸುತ್ತಲೇ ಇದೆ. ಕ್ರಿಮಿನಲ್ ಚಟುವಟಿಕೆಗಳಿಗೆ ಅಂಕುಶ ಹಾಕುವ ಬದ್ಧತೆಯನ್ನು ಈ ಸರ್ಕಾರ ತೋರುತ್ತಿಲ್ಲ. ದುಷ್ಕರ್ಮಿಗಳು, ದೇಶದ್ರೋಹಿಗಳು ಕ್ರಿಮಿನಲ್ ಕೃತ್ಯಗಳನ್ನು ಎಸಗಲು ಯಾರಿಗೂ ಹೆದರುತ್ತಿಲ್ಲ, ಏಕೆಂದರೆ ಅಪರಾಧ ಎಸಗಿ ಬಂಧನವಾದರೆ ಜೈಲುಗಳಲ್ಲಿ ರಾಜಾತಿಥ್ಯ ಸಿಗುತ್ತದೆ ಎಂಬ ಖಾತ್ರಿ ಅವರಿಗಿದೆ. ಪರಪ್ಪನ ಅಗ್ರಹಾರದಲ್ಲಿ ದೇಶವಿದ್ರೋಹಿ ಉಗ್ರಗಾಮಿಗಳಿಗೆ, ರೇಪಿಸ್ಟ್, ಸ್ಮಗ್ಲರ್ಸ್, ಕೊಲೆಗೆಡುಕರಿಗೆ ವಿಶೇಷ ಸವಲತ್ತು ದೊರೆಯುತ್ತಿದೆ.
ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ನೈತಿಕತೆ ಇಲ್ಲದ ನಾಚಿಕೆಗೇಡಿತನದ ದುರಾಡಳಿತದ ಪ್ರತಿಫಲನ ಪರಪ್ಪನ ಅಗ್ರಹಾರದಲ್ಲಿ ಸ್ಪಷ್ಟವಾಗಿ ಗೋಚರವಾಗುತ್ತಿದೆ. ವಿಕೃತ ಕಾಮಿ ಉಮೇಶ್ ರೆಡ್ಡಿಯಂತವರಿಗೆ, ಉಗ್ರ ಸಂಘಟನೆ ISISಗೆ ಉಗ್ರ ಮನಸ್ಥಿತಿಯ ಯುವಕರನ್ನು ನೇಮಕಮಾಡುತ್ತಿದ್ದ ಜುಹಾದ್ ಹಮೀದ್ ಶಕೀಲ್ ಮನ್ನಾನಿಗೆ ಸಕಲ ಸವಲತ್ತು ನೀಡಿ, ಐಷಾರಾಮಿ ವ್ಯವಸ್ಥೆ ಕಲ್ಪಿಸಿಕೊಟ್ಟಿರುವುದು ಅತ್ಯಂತ ನಾಚಿಕೆಗೇಡಿನ ಸಂಗತಿ. ಕೂಡಲೇ ಇದಕ್ಕೆ ಕಾರಣರಾದ ಜೈಲು ಸಿಬ್ಬಂದಿ, ಅಧಿಕಾರಿಗಳನ್ನು ಬಂಧಿಸಿ ದೇಶ ದ್ರೋಹಿ ಪ್ರಕರಣ ದಾಖಲಿಸಿ ಸೂಕ್ತ ತನಿಖೆ ಕೈಗೆತ್ತಿಕೊಳ್ಳಲಿ. ಆತ್ಮಗೌರವ ಇದ್ದರೆ ಗೃಹಸಚಿವರು ಈ ಕೂಡಲೇ ರಾಜಿನಾಮೆ ನೀಡಲಿ, ಬದ್ಧತೆ ನೈತಿಕತೆ ಇದ್ದರೆ ಮುಖ್ಯಮಂತ್ರಿಗಳು ನೈತಿಕ ಜವಾಬ್ದಾರಿ ಹೊರಲಿ, ಸಂಬಂಧಿಸಿದ ಅಧಿಕಾರಿಗಳನ್ನು ಅಮಾನತುಗೊಳಿಸಿ ಅವರ ವಿರುದ್ಧ ಕ್ರಿಮಿನಲ್ ದಾವೆ ಹೂಡಲಿ ಎಂದು ಹೇಳಿದರು.
ಈ ಸಂದರ್ಭದಲ್ಲಿ ಯುವ ಮೋರ್ಚಾ ಜಿಲ್ಲಾಧ್ಯಕ್ಷರಾದ ಮಹಾಂತೇಶ ಚಿನ್ನಪ್ಪಗೌಡರ, ಮಹಾದೇವ ದರೆನ್ನವರ, ಶ್ರೇಯಸ್ ನಾಕಾಡಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ರಾಜಶೇಖರ್ ಡೋಣಿ, ಈರಯ್ಯ ಖೋತ, ಡಾ.ರವಿ ಪಾಟೀಲ, ಡಾ. ಗುರು ಕೋತಿನ, ಶಿಲ್ಪಾ ಕೇಕರೆ, ವಿನೋದ ಲಂಗೋಟಿ, ಆನಂದ ಅತ್ತುಗೋಳ, ಮನೋಜ ಪಾಟೀಲ, ಪ್ರಶಾಂತ ಅಮ್ಮಿನಬಾವಿ, ನಾಗಪ್ಪ ಸಂಗೊಳ್ಳಿ ಸೇರಿದಂತೆ ಪಕ್ಷದ ಪ್ರಮುಖರು, ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

