Latest

*ಭಾರತದ ಪ್ರಜಾಪ್ರಭುತ್ವದಲ್ಲಿ ಇದೊಂದು ಕರಾಳ ದಿನ; ಸಿದ್ದರಾಮಯ್ಯ ಆಕ್ರೋಶ*

ಪ್ರಗತಿವಾಹಿನಿ ಸುದ್ದಿ; ಬಾದಾಮಿ: ರಾಹುಲ್ ಗಾಂಧಿಯವರು ಹೇಳುವ ಸತ್ಯವನ್ನು ಎದುರಿಸಲಾಗದ ನರೇಂದ್ರ ಮೋದಿ ಸರ್ಕಾರ ಅವರನ್ನು ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಳಿಸಿ ತನ್ನ ಹೇಡಿತನವನ್ನು ಜಾಹೀರುಗೊಳಿಸಿದೆ. ಭಾರತದ ಸಂಸದೀಯ ಪ್ರಜಾಪ್ರಭುತ್ವದಲ್ಲಿ ಇದೊಂದು ಕರಾಳ ದಿನ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಹುಲ್ ಗಾಂಧಿಯವರನ್ನು ಲೋಕಸಭಾ ಸದಸ್ಯತ್ವ ಸ್ಥಾನದಿಂದ ಅನರ್ಹಗೊಳಿಸಿರುವ ವಿಚಾರವಾಗಿ ಮಾತನಾಡಿರುವ ಸಿದ್ದರಾಮಯ್ಯ, ಭಾರತೀಯ ಜನತಾ ಪಕ್ಷದ ಪಾಪದ ಕೊಡ ತುಂಬಿದೆ. ತನ್ನ ನಾಶದ ಶವದಪೆಟ್ಟಿಗೆಗೆ ತಾನೇ ಕೊನೆಯ ಮೊಳೆ ಬಡಿದಿದೆ. ಈ ಫ್ಯಾಸಿಸ್ಟ್ ನಡವಳಿಕೆಗೆ ಹೆದರುವ, ಹಿಂಜರಿಯುವ ಪ್ರಶ್ನೆಯೇ ಇಲ್ಲ. ಈ ಅನ್ಯಾಯದ ವಿರುದ್ದ ನ್ಯಾಯಾಲಯ ಮತ್ತು ಬೀದಿಗಳಲ್ಲಿ ಹೋರಾಟ ಮಾಡುತ್ತೇವೆ ಎಂದು ತಿಳಿಸಿದ್ದಾರೆ.

Home add -Advt

ಭಾರತದಲ್ಲಿ ಇಂದು ಅನಧಿಕೃತವಾಗಿ ತುರ್ತುಪರಿಸ್ಥಿತಿ ಘೋಷಿಸಲಾಗಿದೆ. ನರೇಂದ್ರಮೋದಿ, ಬಿಜೆಪಿ ಮತ್ತು ಎನ್ ಡಿ ಎ ಸರ್ಕಾರದ ವಿರುದ್ದ ಮಾತನಾಡುವವರಿಗೆಲ್ಲರಿಗೂ ಎಚ್ಚರಿಕೆಯ ರೂಪದಲ್ಲಿ ರಾಹುಲ್ ಗಾಂಧಿಯವರ ಬಗ್ಗೆ ಕೇಂದ್ರ ಸರ್ಕಾರ ನಿರ್ಧಾರ ಕೈಗೊಂಡಿದೆ.

ಇದು ಕೇವಲ ಕಾಂಗ್ರೆಸ್ ಪಕ್ಷ ಇಲ್ಲವೇ ರಾಹುಲ್ ಗಾಂಧಿಯವರಿಗೆ ನೀಡಿರುವ ಬೆದರಿಕೆ ಅಲ್ಲ, ಅನ್ಯಾಯ-ಅಕ್ರಮದ ವಿರುದ್ದ ದನಿ ಎತ್ತುವ ಎಲ್ಲ ಪ್ರಜಾಪ್ರಭುತ್ವ ಪ್ರೇಮಿಗಳಿಗೆ ಒಡ್ಡಿರುವ ಬೆದರಿಕೆ. ಪಕ್ಷ,ಪಂಥ ಮರೆತು ಎಲ್ಲರೂ ಒಟ್ಟಾಗಿ ಇದರ ವಿರುದ್ದ ಪ್ರತಿಭಟನೆ ನಡೆಸಬೇಕಾಗಿದೆ.

ರಾಹುಲ್ ಗಾಂಧಿಯವರ ವಿರುದ್ದ ಕೈಗೊಳ್ಳಲಾದ ಕ್ರಮದಿಂದ ಕಾಂಗ್ರೆಸ್ ಪಕ್ಷದ ಲಕ್ಷಾಂತರ ಕಾರ್ಯಕರ್ತರ ಮನಸ್ಸಿಗೆ ನೋವಾಗಿರುವುದು ನಿಜವಾದರೂ ಈ ಸಂದರ್ಭದಲ್ಲಿ ಸಂಯಮದಿಂದ ವರ್ತಿಸುವುದು ಅಗತ್ಯ. ಯಾರೂ ಕೂಡಾ ಸಿಟ್ಟು-ಆಕ್ರೋಶದ ಕೈಗೆ ಬುದ್ದಿ ಕೊಡದೆ ಶಾಂತಿಯುತ ಪ್ರತಿಭಟನೆ ನಡೆಸಬೇಕೆಂದು ಹೇಳಿದ್ದಾರೆ.
Rahul gandi,disqualified,siddaramaiah,Reaction

Related Articles

Back to top button