*3 ಡಿಸಿಎಂ ಹುದ್ದೆ ಸೃಷ್ಟಿಸಬೇಕು: ಸಚಿವ ಕೆ.ಎನ್.ರಾಜಣ್ಣ ಒತ್ತಾಯ*

ಪ್ರಗತಿವಾಹಿನಿ ಸುದ್ದಿ; ತುಮಕೂರು: ರಾಜ್ಯದಲ್ಲಿ ಮೂರು ಡಿಸಿಎಂ ಹುದ್ದೆ ಸೃಷ್ಟಿಸಬೇಕು. ಮೂರು ಸಮುದಾಯಗಳಿಗೆ ಡಿಸಿಎಂ ಹುದ್ದೆ ನೀಡಬೇಕು ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ತಿಳಿಸಿದ್ದಾರೆ.
ತುಮಕೂರಿನಲ್ಲಿ ಮಾತನಾಡಿದ ಸಚಿವ ರಾಜಣ್ಣ, ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಇನ್ನೂ ಹೆಚ್ಚಿನ ಸಮುದಾಯಗಳ ಬೆಂಬಲ ಪಡೆಯುವ ನಿಟ್ಟಿನಲ್ಲಿ ಮೂರು ಸಮುದಾಯಗಳ ಮುಖಂಡರಿಗೆ ಡಿಸಿಎಂ ಸ್ಥಾನ ನೀಡಬೇಕು ಎಂದರು.
ಪರಿಶಿಷ್ಟ ಜಾತಿ ಪಂಗಡ ಸಮುದಾಯ, ಅಲ್ಪಸಂಖ್ಯಾತ ಹಾಗೂ ವೀರಶೈವ ಸಮುದಾಯದ ಓರ್ವ ಮುಖಂಡರನ್ನು ಉಪಮುಖ್ಯಮಂತ್ರಿಯನ್ನಾಗಿ ಮಾಡಬೇಕು ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯ. ಇದರಿಂದ ಲೋಕಸಭಾ ಚುನಾವಣೆಯಲ್ಲಿ ಎಲ್ಲಾ ಸಮುದಾಯಗಳ ಬೆಂಬಲ ಪಡೆಯಬಹುದು ಎಂದರು.
ವಿಧಾನಸಭಾ ಚುನಾವಣೆಯಲ್ಲಿ ಲಿಂಗಾಯಿತ ಸಮುದಾಯ ಕಾಂಗ್ರೆಸ್ ಕೈಹಿಡಿದಿದೆ. ಹಾಗಾಗಿ ಎಲ್ಲವನ್ನೂ ಪರಿಗಣಿಸಿ ಮೂರು ಸಮುದಾಯದವರನ್ನು ಡಿಸಿಎಂ ಮಾಡಬೇಕು. ನನ್ನ ಹೇಳಿಕೆಯಿಂದ ಡಿ.ಕೆ.ಶಿವಕುಮಾರ್ ಅವರಿಗೆ ಅಸಮಾಧಾನವಾಗುವ ಸಂದರ್ಭವಿಲ್ಲ. ಕಾರಣ ಅವರು ಈಗಾಗಲೇ ಡಿಸಿಎಂ ಆಗಿದ್ದಾರೆ. ಅಲ್ಲದೇ ಪಕ್ಷ ಸಂಘಟನೆ ಮಾಡುವ ಚಾಣಾಕ್ಷ್ಯತೆ ಅವರಲ್ಲಿದೆ ಎಂದು ಹೇಳಿದರು.




