
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿದ್ದರೂ ಶಾಲಾ-ಕಾಲೇಜುಗಳಿಗೆ ರಜೆ ನೀಡಬೇಕಾದ ಗಂಭೀರ ಸ್ಥಿತಿ ಸಧ್ಯಕ್ಕಿಲ್ಲ. ಶಾಲೆಗಳಿಗಾಗಿ ಯಾವುದೇ ಹೊಸ ಮಾರ್ಗಸೂಚಿಯೂ ಇಲ್ಲ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ನಾಗೇಶ್, ಶಾಲೆಗಳಿಗೆ ಈ ಹಿಂದೆ ಇದ್ದ ಮಾರ್ಗಸೂಚಿಯೇ ಮುಂದುವರೆಯಲಿದೆ. ಸಧ್ಯಕ್ಕೆ ಶಾಲೆಗಳು ಬಂದ್ ಮಾಡುವುದಿಲ್ಲ. ತಾಂತ್ರಿಕ ಸಲಹಾ ಸಮಿತಿ ನೀಡಿದ ವರದಿ ಆಧಾರದ ಮೇಲೆಯೇ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದರು.
ರಾಜ್ಯದ ಕೆಲ ಹಾಸ್ಟೇಲ್ ಗಳಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿವೆ. ಈ ನಿಟ್ಟಿನಲ್ಲಿ ವಸತಿ ಶಾಲೆಗಳು, ಹಾಸ್ಟೇಲ್ ಮೇಲೆ ವಿಶೇಷ ನಿಗಾ ವಹಿಸಲಾಗುವುದು. ಹಾಸ್ಟೇಲ್ ಗಳಲ್ಲಿ ಮಕ್ಕಳು ಒಟ್ಟಿಗೆ ಊಟಕ್ಕೆ ಹೋಗುವಂತಿಲ್ಲ. ಹಾಸ್ಟೇಲ್ ಗಳಿಗೆ ಆರೋಗ್ಯ ಇಲಾಖೆ ಹಾಗೂ ಶಿಕ್ಷಣ ಇಲಾಖೆ ಜಂಟಿ ಸಮಿತಿ ಭೇಟಿ ನೀಡಿ ಪರಿಶೀಲನೆ ನಡೆಸಲಿದೆ ಎಂದು ತಿಳಿಸಿದರು.
ಈವರೆಗೆ 172 ಶಿಕ್ಷಕರು ಹಾಗೂ ಮಕ್ಕಳಿಗೆ ಕೊರೊನಾ ಸೋಂಕು ಬಂದಿದೆ. ಅವರಲ್ಲಿ 100 ಮಂದಿ ಚೇತರಿಸಿಕೊಂಡಿದ್ದಾರೆ. ಯಾವುದೇ ರೀತಿಯ ಆತಂಕಪಡುವ ಅಗತ್ಯವಿಲ್ಲ. ಶಾಲೆಗಳಲ್ಲಿ ಎಲ್ಲಾ ರೀತಿಯ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ರಾಜ್ಯದ ಹಾಸ್ಟೇಲ್ ಗಳಿಗೆ ಹೊಸ ಮಾರ್ಗಸೂಚಿ ಜಾರಿ