ಪೊಲೀಸರಿಂದ ತಪ್ಪಿಸಿಕೊಂಡು ಓಡಿ ಹೋದ ಬಿ.ವಿ.ಶ್ರೀನಿವಾಸ್

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಪ್ರಕರಣ ಸಂಬಂಧ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿಗೆ ಇಡಿ ಸಮನ್ಸ್ ಜಾರಿ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ದೆಹಲಿ ಹಾಗೂ ಬೆಂಗಳೂರಿನಲ್ಲಿ ಪ್ರತಿಭಟನೆ ತೀವ್ರಗೊಳಿಸಿದ್ದಾರೆ. ಈ ನಡುವೆ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆಯಲು ಮುಂದಾಗುತ್ತಿದ್ದಂತೆ ಯೂಥ್ ಕಾಂಗ್ರೆಸ್ ಅಧ್ಯಕ್ಷ ಬಿ.ವಿ.ಶ್ರೀನಿವಾಸ್ ತಪ್ಪಿಸಿಕೊಂಡು ಓಡಿ ಹೋದ ಘಟನೆ ದೆಹಲಿಯಲ್ಲಿ ನಡೆದಿದೆ.
ಇಡಿ ಕಚೇರಿ ಬಳಿ ಯೂಥ್ ಕಾಂಗ್ರೆಸ್ ಅಧ್ಯಕ್ಷ ಬಿ.ವಿ.ಶ್ರೀನಿವಾಸ್ ನೇತೃತ್ವದಲ್ಲಿ ಯೂಥ್ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಲು ಮುಂದಾಗುತ್ತಿದ್ದಂತೆ ಪೊಲಿಸರು ಕಾರ್ಯಕರ್ತರನ್ನು ವಶಕ್ಕೆ ಪಡೆಯಲು ಯತ್ನಿಸಿದ್ದಾರೆ. ಇಡಿ ಕಚೇರಿ ಮಾರ್ಗ ಸಂಧಿಸುವ ಇತರ ರಸ್ತೆಗಳಿಂದಲೂ ಧಾವಿಸಿಬಂದ ಕಾಂಗ್ರೆಸ್ ಕಾರ್ಯಕರ್ತರನ್ನು ತಡೆಯಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ. ಈ ವೇಳೆ ಪ್ರತಿಭಟನಾ ಸ್ಥಳಕ್ಕೆ ಕಾರಿನಲ್ಲಿ ಬಂದ ಯೂಥ್ ಕಾಂಗ್ರೆಸ್ ಅಧ್ಯಕ್ಷ ಬಿ.ವಿ.ಶ್ರೀನಿವಾಸ್ ಅವರನ್ನು ಕಾರಿನಿಂದ ಇಳಿಯುತ್ತಿದ್ದಂತೆ ವಶಕ್ಕೆ ಪಡೆಯಲು ಪೊಲೀಸರು ಮುಂದಾಗಿದ್ದಾರೆ.
ಪೊಲೀಸ್ ಅಧಿಕಾರಿಯೊಬ್ಬರು ಶ್ರೀನಿವಾಸ್ ಹೆಗಲ ಮೇಲೆ ಕೈ ಹಾಕಿ ಮಾತನಾಡುತ್ತಿದ್ದಂತೆ ತಕ್ಷಣ ಎಚ್ಚೆತ್ತ ಬಿ.ವಿ.ಶ್ರೀನಿವಾಸ್, ಪೊಲೀಸ್ ಅಧಿಕಾರಿ ಕೈಯಿಂದ ತಪ್ಪಿಸಿಕೊಂಡು ಓಡಿ ಹೋಗಿ ಎಸ್ಕೇಪ್ ಆಗಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಬಿ.ವಿ.ಶ್ರೀನಿವಾಸ್, ನಮ್ಮ ಪ್ರತಿಭಟನೆ ಹತ್ತಿಕ್ಕಲೆಂದು ನಿನ್ನೆ ರಾತ್ರಿಯಿಂದ ಪೊಲೀಸರು ನನ್ನ ಹಿಂದೆ ಬಿದ್ದಿದ್ದರು. ಇಂದು ಬೆಳಿಗ್ಗೆ 7 ಗಂಟೆಗೂ ನನ್ನ ಹಿಂದೆ ಬಿದ್ದು ವಶಕ್ಕೆ ಪಡೆಯಲು ಯತ್ನಿಸಿದ್ದಾರೆ. ಪ್ರತಿಭಟನೆ ನಡೆಸುವ ಮೊದಲೇ ನಮ್ಮನ್ನು ವಶಕ್ಕೆ ಪಡೆದು ನಮ್ಮ ಧ್ವನಿ ಅಡಗಿಸುವುದು ಸರ್ಕಾರದ ಉದ್ದೇಶ. ನಾವೇನು ಕಳ್ಳತನ ಮಾಡಿದ್ದೇವಾ? ಅಪರಾಧ ಮಾಡಿದ್ದೇವಾ? ನಮ್ಮ ನಾಯಕರಿಗೆ ಇಡಿ ಸಮನ್ಸ್ ಜಾರಿ ಪ್ರಶ್ನಿಸಿ ಹೋರಾಟ ನಡೆಸುತ್ತಿದ್ದೇವೆ. ಪೊಲೀಸರ ಕಣ್ತಪ್ಪಿಸಿ ಓಡಿ ಹೋಗಿ ಪ್ರತಿಭಟನಾ ಸ್ಥಳ ತಲುಪಿ ಯಶಸ್ವಿಯಾಗಿದ್ದೇವೆ ಎಂದು ತಿಳಿಸಿದ್ದಾರೆ.
ಸಚಿವ ಸತ್ಯೇಂದ್ರ ಜೈನ್ ನ್ಯಾಯಾಂಗ ಬಂಧನಕ್ಕೆ



