Politics

*ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡೇ ನೀಡ್ತಾರೆ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿಕೆ*

ಪ್ರಗತಿವಾಹಿನಿ ಸುದ್ದಿ: ವಾಲ್ಮೀಕಿ ಮತ್ತು ಮೂಡಾ ಹಗರಣದಿಂದ ಸಿಎಂ ಸಿದ್ದರಾಮಯ್ಯ ಅವರ ಸಮಾಜವಾದಿ ಮುಖವಾಡ ಕಳಚಿ ಬಿದ್ದಿದೆ, ಭ್ರಷ್ಟಾಚಾರದ ಕಳಂಕ ಮೆತ್ತಿದೆ. ಪರಿಣಾಮ ತಮ್ಮ ಸ್ಥಾನಕ್ಕೆ ಅವರು ರಾಜೀನಾಮೆ ಕೊಡುತ್ತಾರೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.

ಹುಬ್ಬಳ್ಳಿಯಲ್ಲಿ ಇಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ನಿವಾಸದಲ್ಲಿ ಮಾದ್ಯಮದವರೊಂದಿಗೆ ಮಾತನಾಡಿ, ಮೂಡಾ ಹಗರಣ ಕೇವಲ 14 ನಿವೇಶನಕ್ಕೆ ಸೀಮಿತವಾದದ್ದಲ್ಲ ಎಂದು ಹೇಳಿದರು.

5000 ಕೋಟಿಗೂ ಮೀರಿದ ಹಗರಣ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧದ ಮೂಡಾ ಹಗರಣ ಪ್ರಸ್ತುತದಲ್ಲಿ ಕೇವಲ 14 ನಿವೇಶನಗಳಿಗೆ ಸೀಮಿತವಾಗಿ ಚರ್ಚೆ ನಡೆಯುತ್ತಿದೆ. ಆದರೆ, ಇದು ಇಷ್ಟಕ್ಕೇ ಸೀಮಿತವಾದದ್ದಲ್ಲ. 5000 ಕೋಟಿಗೂ ಮೀರಿದ ಸಾವಿರಾರು ನಿವೇಶನಗಳ ಬಹುದೊಡ್ಡ ಹಗರಣ ಎಂದು ವಿಜಯೇಂದ್ರ ಗುಡುಗಿದರು.

ಸಿಎಂ ತವರು ಜಿಲ್ಲೆಯಲ್ಲಿ ಬಡವರನ್ನು ತಲುಪಬೇಕಿದ್ಧ 5000 ಕೋಟಿ ಬೆಲೆ ಬಾಳುವ ಸಾವಿರಾರು ಮೂಡಾ ನಿವೇಶನಗಳು ರಿಯಲ್ ಎಸ್ಟೇಟ್ ಮಾಫಿಯಾ ಮತ್ತು ಕಾಂಗ್ರೆಸ್ ನಾಯಕರ ಪಾಲಾಗಿವೆ ಎಂದು ವಿಜಯೇಂದ್ರ ಗಂಭೀರ ಆರೋಪ ಮಾಡಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪತ್ನಿ ಹೆಸರಿನಲ್ಲಿ ಕಾನೂನು ಬಾಹಿರವಾಗಿ 14 ನಿವೇಶನಗಳನ್ನು ಪಡೆದಿದ್ದಾರೆ. ಆದರೆ, ಇದು 14 ನಿವೇಶನಕ್ಕೆ ಸೀಮಿತವಾದುದಲ್ಲ ಎಂದು ಪುನರುಚ್ಚರಿಸಿದರು ವಿಜಯೇಂದ್ರ.

ಸಿದ್ಧರಾಮಯ್ಯ ಅವರು ಸಿಎಂ ಆದ 18 ತಿಂಗಳಲ್ಲಿ ಇದೊಂದು ಬಹುದೊಡ್ಡ ಹಗರಣವಾಗಿದೆ. ಹಾಗಾಗಿ ಬಿಜೆಪಿ ಸಿಬಿಐ ತನಿಖೆಗೆ ಒತ್ತಾಯಿಸುತ್ತಲೇ ಬಂದಿದೆ ಎಂದರು.

ವಾಲ್ಮೀಕಿ ಅಭಿವೃದ್ಧಿ ನಿಗಮದ ಭ್ರಷ್ಟಾಚಾರದಲ್ಲಿ SIT ನಾಗೇಂದ್ರ ಮತ್ತು ಬಸವರಾಜ ದದ್ದಲ್ ಮೇಲೆ ಚಾರ್ಜ್ ಶೀಟ್ ಹಾಕಿದರೂ ಸಿಎಂ ಮತ್ತು ಡಿಸಿಎಂ ಇವರನ್ನು ರಕ್ಷಿಸಲು ಯತ್ನಿಸಿದರು. ಹಾಗಾಗಿ ವಾಲ್ಮೀಕಿ ಮತ್ತು ಮೂಡಾ ಹಗರಣ ಎರಡರಲ್ಲೂ SIT ತನಿಖೆಯಿಂದ ನ್ಯಾಯ ನಿರೀಕ್ಷೆ ಅಸಾಧ್ಯವೆಂದು ವಿಜಯೇಂದ್ರ ಹೇಳಿದರು.

ಸಿಬಿಐ ತನಿಖೆಗೇ ವಹಿಸಬೇಕು: ಸಿಎಂ ನೇತೃತ್ವದ ಸಿಂಗಲ್ ಮ್ಯಾನ್ ಎನ್ಕ್ ವೈರಿ ಕಮಿಷನ್, ಎಸ್ ಐಟಿಯಿಂದ ತನಿಖೆ ಸಾಧ್ಯವಿಲ್ಲ. ಹಾಗಾಗಿ ಮುಖ್ಯಮಂತ್ರಿ ಅವರು ಇದನ್ನು ಸಿಬಿಐ ತನಿಖೆಗೇ ವಹಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಆಗ್ರಹಿಸಿದರು.

ಈ ಸಂದರ್ಭದಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಮತ್ತಿತರರು ಇದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button