Kannada NewsKarnataka NewsLatest

ಜಿಲ್ಲಾಧಿಕಾರಿ ಭೇಟಿ ಮಾಡಿದ ಬಾಲಚಂದ್ರ ಜಾರಕಿಹೊಳಿ

 ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಕಳೆದ ವರ್ಷ ಪ್ರವಾಹ ಹಾಗೂ ನಿರಂತರ ಮಳೆಯಿಂದ ಹಾನಿಗೀಡಾಗಿರುವ ಸಂತ್ರಸ್ತರ ಕುಟುಂಬಗಳಿಗೆ ೧೫ ದಿನಗಳೊಳಗಾಗಿ ವಸತಿ ಸೌಕರ್ಯ ಕಲ್ಪಿಸಿಕೊಡುವಂತೆ ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿದ ಅವರು, ಗೋಕಾಕ ಮತ್ತು ಮೂಡಲಗಿ ತಾಲೂಕುಗಳ ನೆರೆ ಸಂತ್ರಸ್ತರ ಬೇಡಿಕೆಗಳಿಗೆ ಸ್ಪಂದಿಸಿ ತಕ್ಷಣ ಪರಿಹಾರ ಕಂಡುಕೊಳ್ಳಬೇಕೆಂದು ಅವರು ಹೇಳಿದರು.
೨೦೧೯ ರ ಅಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳಿನಲ್ಲಿ ಪ್ರವಾಹ ಮತ್ತು ಮಳೆಯಿಂದಾಗಿ ಸಾವಿರಾರು ಮನೆಗಳು ಜಲಾವೃತಗೊಂಡಿದ್ದವು. ಇದರಲ್ಲಿ ಫಲಾನುಭವಿಗಳ ಹೆಸರುಗಳು ಹೈಡ್/ಡೆಲಿಟ್ ಮತ್ತು ಡಾಟಾ ಎಂಟ್ರಿ ಪೆಂಡಿಂಗ್ ಇರುವ ಒಟ್ಟು ೧೨೮೩ ಫಲಾನುಭವಿಗಳಿದ್ದು, ಸಂತ್ರಸ್ತರ ಸಮಸ್ಯೆಗಳನ್ನು ಕೂಡಲೇ ಇತ್ಯರ್ಥಪಡಿಸುವಂತೆ ಅವರು ಅಧಿಕಾರಿಗಳನ್ನು ಕೋರಿದರು.

ಕೂಡಲೇ ವರದಿ ಸಲ್ಲಿಸಿ : ನೆರೆ ಸಂತ್ರಸ್ತರ ವಸತಿ ಸೌಲಭ್ಯಕ್ಕಾಗಿ ಶುಕ್ರವಾರದಂದು ಶಾಸಕರ ಗೃಹ ಕಛೇರಿ ಎನ್‌ಎಸ್‌ಎಫ್ ಅತಿಥಿ ಗೃಹದಲ್ಲಿ ದೂರವಾಣಿ ಮೂಲಕ ಸಭೆ ನಡೆಸಿದ ಬಾಲಚಂದ್ರ ಜಾರಕಿಹೊಳಿ ಅವರು, ನೆರೆ ಸಂತ್ರಸ್ತರ ಸಮಸ್ಯೆಗಳಿಗೆ ಸೂಕ್ತ ಪರಿಹಾರ ನೀಡುವಂತೆ ಸೂಚನೆ ನೀಡಿದರು.
ಪ್ರವಾಹ ಸಂದರ್ಭದಲ್ಲಿ ನೆರೆ ಸಂತ್ರಸ್ತರು ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ. ಅವರಿಗೆ ವಾಸಿಸಲು ಈಗಲೂ ವಸತಿ ಸೌಲಭ್ಯವಿಲ್ಲ. ನಿಜವಾದ ಸಂತ್ರಸ್ತರಿಗೆ ಸರ್ಕಾರದ ಪರಿಹಾರ ಧನ ಸಿಕ್ಕಿರುವುದಿಲ್ಲ. ಇದರಿಂದ ಅವರು ವಂಚಿತರಾಗಿದ್ದಾರೆ. ತಾವೂ ಕೂಡ ಈ ಸಂಬಂಧ ವಸತಿ ಸಚಿವ ವ್ಹಿ. ಸೋಮಣ್ಣ ಮತ್ತು ಬೆಳಗಾವಿ ಜಿಲ್ಲಾಧಿಕಾರಿಗಳನ್ನು ಎರಡೆರಡು ಬಾರಿ ಭೇಟಿ ಮಾಡಿ ಆಗಿರುವ ಅನ್ಯಾಯವನ್ನು ಸರಿಪಡಿಸಲು ಮನವಿ ಮಾಡಿಕೊಂಡಿದ್ದೇನೆ. ಅಧಿಕಾರಿಗಳು ತಕ್ಷಣವೇ ಕಾರ್ಯಪ್ರವೃತ್ತರಾಗುವಂತೆ ಸೂಚಿಸಿದರು.
ಈ ಸಂದರ್ಭದಲ್ಲಿ ಗೋಕಾಕ ತಹಶೀಲ್ದಾರ ಪ್ರಕಾಶ ಹೊಳೆಪ್ಪಗೋಳ, ಮೂಡಲಗಿ ತಹಶೀಲ್ದಾರ ಡಿ.ಜೆ. ಮಹಾತ್, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ ಹೆಗ್ಗನಾಯಿಕ, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಲೆಕ್ಕಾಧಿಕಾರಿಗಳು ಉಪಸ್ಥಿತರಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button