

ಪ್ರಗತಿವಾಹಿನಿ ಸುದ್ದಿ: ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಅವರ ರಾಜೀನಾಮೆ ವಿಚಾರಕ್ಕೆ ಸಂಬಂಧಿಸಿದಂತೆ ರಾಜಕೀಯ ಗೊಂದಲ ಮತ್ತಷ್ಟು ತೀವ್ರಗೊಂಡಿದ್ದು, ಈ ನಡುವೆ ಸಭಾಪತಿ ಬಸವರಾಜ್ ಹೊರಟ್ಟಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.
ನನಂತರ ಸ್ವಲ್ಪ ಹೊತ್ತಿನಲ್ಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದರು.
ಸಿಎಂ ಡಿ.ಕೆ.ಶಿವಕುಮಾರ್ ನಿವಾಸಕ್ಕೆ ತೆರಳಿ ಸಿಎಂ ಭೇಟಿಯಾದ ಸಭಾಪತಿ ಬಸವರಾಜ ಹೊರಟ್ಟಿ ಕೆಲ ಕಾಲ ಚರ್ಚೆ ನಡೆಸಿದರು. ತಮ್ಮ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ ಬೇಡ. ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ. ಆದರೆ ಸ್ವಲ್ಪ ಸಮಯಾವಕಾಶ ಬೇಕು ಎಂದಿದ್ದಾರೆ ಎನ್ನಲಾಗಿದೆ.
ಸಿಎಂ ಡಿ.ಕೆ.ಶಿವಕುಮಾರ್ ಭೇಟಿ ಬಳಿಕ ಅಸಮಾಧಾನದಿಂದಲೇ ಸಿಎಂ ನಿವಾಸದಿಂದ ಹೊರಟ್ಟಿ ಹೊರ ಬಂದಿದ್ದಾರೆ. ಸಿಎಂ ಮನೆಯಿಂದ ಹೊರಗೆ ಕಳುಹಿಸಲು ಬಂದರೂ ಹೊರಟ್ಟಿ, ಸಿಎಂ ಅವರನ್ನು ತಿರುಗಿ ನೋಡದೇ ಕಾರೆಲ್ಲಿದೆ? ಎನ್ನುತ್ತಾ ತೆರಳಿದ್ದಾರೆ.
ನಂತರ ಅವರ ರಾಜಿನಾಮೆ ಪತ್ರವನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡಲಾಯಿತು.

