Belagavi NewsBelgaum NewsKarnataka NewsPolitics

*ಬೆಳಗಾವಿಯಲ್ಲಿ ಶೀಘ್ರ ಸಚಿವ ಸಂಪುಟ ಸಭೆ: ಸಿಎಂ ಸಿದ್ದರಾಮಯ್ಯ ಮಾಹಿತಿ*

ಪ್ರಗತಿವಾಹಿನಿ ಸುದ್ದಿ: ಸರ್ಕಾರದಲ್ಲಿ ಅಧಿಕಾರ ಬದಲಾವಣೆ ಬಗ್ಗೆ ಬಿಜೆಪಿ ಹಗಲು ಗನಸು ಕಾಣುತ್ತಿದೆ. ಬಿಜೆಪಿಯವರು ಸುಳ್ಳನ್ನು ಮಾತ್ರ ನಂಬುತ್ತಾರೆ ಸತ್ಯವನ್ನಲ್ಲ ಸುಳ್ಳು ಹೇಳುವುದರಲ್ಲಿ ನಿಸ್ಸೀಮರಾಗಿರುವ ಬಿಜೆಪಿಯವರಿಗೆ ಸತ್ಯ ಹೇಳಿ ಗೊತ್ತೇ ಇಲ್ಲ. ಅವರು ನಂಬುತ್ತಾರೋ ಬಿಡುತ್ತಾರೆ ನಾವೆಲ್ಲಾ ಒಟ್ಟಾಗಿದ್ದೇವೆ. ನಮ್ಮ ಸರ್ಕಾರ ಬಂಡೆಯಂತೆ ಐದು ವರ್ಷ ಆಡಳಿತ ನಡೆಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

ಅವರು ಇಂದು ನಂದಿ ಬೆಟ್ಟದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಬಿಜೆಪಿ ಅಧಿಕಾರದಲ್ಲಿದ್ದಾಗ ಏನು ಸಾಕ್ಷಿಗುಡ್ಡೆಯನ್ನು ಬಿಟ್ಟುಹೋಗಿದ್ದಾರೆ ಎಂದು ಪ್ರಶ್ನಿಸಿದ ಸಿಎಂ, ಅವರು ನೀರಾವರಿ, ಗ್ರಾಮೀಣಾಭಿವೃದ್ಧಿ, ಲೋಕೋಪಯೋಗಿ, ಶಿಕ್ಷಣ, ಆರೋಗ್ಯ ಕ್ಷೇತ್ರಗಳಲ್ಲಿ ಏನು ಮಾಡಿದ್ದಾರೆ. ಬಿಜೆಪಿ ನಾಲ್ಕು ವರ್ಷ ಅಧಿಕಾರದಲ್ಲಿತ್ತು. ಎಚ್ ಡಿ ಕುಮಾರಸ್ವಾಮಿಯವರು ಒಂದು ವರ್ಷ ಎರಡು ತಿಂಗಳು ಸಮ್ಮಿಶ್ರ ಸರ್ಕಾರದಲ್ಲಿ ಅಧಿಕಾರದಲ್ಲಿದ್ದರು. ಏನು ಮಾಡಿದ್ದಾರೆ ಎಂದು ಪ್ರಶ್ನಿಸಿದರು.

ಏನೂ ಮಾಡದೇ ಸುಳ್ಳು ಹೇಳಿಕೊಂಡು ಜನರನ್ನು ತಪ್ಪುದಾರಿಗೆ ಎಳೆಯುವ ಪ್ರಯತ್ನ ಮಾಡುತ್ತಿದ್ದಾರೆ ಎಂದರು.

Home add -Advt

2 ವರ್ಷದ ಸರ್ಕಾರದ ಸಾಧನಾ ಸಮಾವೇಶದಲ್ಲಿ ಮಳೆಯಿದ್ದರೂ ಸುಮಾರು ಮೂರು ಲಕ್ಷಕ್ಕಿಂತ ಹೆಚ್ಚು ಜನ ಸೇರಿದ್ದರು. ಜನರು ಸರ್ಕಾರದ ಪರವಾಗಿ ಸುಮ್ಮನೆ ಬರುತ್ತಾರೆಯೇ ಎಂದು ಪ್ರಶ್ನಿಸಿದರು.

ಜಾತಿಗಣತಿ: ಆನ್ ಲೈನ್ ಮೂಲಕ ಜಾತಿ ನಮೂದಿಸಬಹುದು

ಜಾತಿ ಸಮೀಕ್ಷೆಯಲ್ಲಿ ತೊಂದರೆಗಳಾಗಿದ್ದರೆ ಆನ್ ಲೈನ್ ಮಾಡಲು ತೊಂದರೆಯಿಲ್ಲ ಎಂದು ತಿಳಿಸಿದ ಮುಖ್ಯಮಂತ್ರಿಗಳು ಯಾವುದಾದರೂ ಒಂದು ದಾರಿಯಲ್ಲಿ ಜಾತಿ ಹೇಳಿಕೊಳ್ಳಬೇಕು. ಸಮೀಕ್ಷೆ ಮಾಡುವವರು ಮನೆಗೆ ಬಂದಾಗ ಅಥವಾ ಶಿಬಿರದಲ್ಲಿ ಅಥವಾ ಯಾವುದಾದರೂ ಒಂದು ವಿಧಾನದಲ್ಲಿ ಪರಿಶಿಷ್ಟರ ಜಾತಿ/ವರ್ಗ ಹೇಳಿಕೊಳ್ಳಬೇಕು. ಸಮೀಕ್ಷೆ ಮಾಡುವವರು ಮನೆ ಮನೆಗೆ ತೆರಳುತ್ತಿದ್ದಾರೆ. ಬೆಂಗಳೂರು ನಗರದಲ್ಲಿ ಕೆಲವರು ಸಾಮಾಜಿಕ ಕಳಂಕ ಇದ್ದರೆ ಆನ್ ಲೈನ್ ನಲ್ಲಿ ಜಾತಿಯ ಹೆಸರನ್ನು ದಾಖಲಿಸಬಹುದು ಎಂದರು.

ಸಚಿವ ಸ್ಥಾನ :ವರಿಷ್ಠರಿಂದ ಅಂತಿಮ ತೀರ್ಮಾನ

ಪ್ರಜಾಪ್ರಭುತ್ವದಲಿ ಎಲ್ಲರಿಗೂ ಸಚಿವರಾಗುವ ಅಧಿಕಾರವಿದೆ. ಸಚಿವ ಸ್ಥಾನದ ಬಗ್ಗೆ ಪಕ್ಷದ ವರಿಷ್ಠರು ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದರು. 142 ಜನ ನಮ್ಮ ಪಕ್ಷದವರಿದ್ದಾರೆ. 34 ಜನರನ್ನು ಮಾತ್ರ ಸಚಿವರನ್ನಾಗಿಸಬಹುದು. ಎಲ್ಲರನ್ನು ಮಾಡಲಾಗುವುದಿಲ್ಲ. ಶೇ.15% ಜನರನ್ನು ಮಾತ್ರ ಮಾಡಬಹುದು ಎಂದರು.

ಐದು ವರ್ಷ ನಾನೇ ಮುಖ್ಯಮಂತ್ರಿ

ನಾನೇ ಐದು ವರ್ಷ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದೇನೆ ಎಂದು ಸ್ಪಷ್ಟಪಡಿಸಿದ ಮುಖ್ಯಮಂತ್ರಿಗಳು ನವೆಂಬರ್ ನಲ್ಲಿ ಮುಖ್ಯಮಂತ್ರಿ ಸ್ಥಾನದಿಂದ ಸಿದ್ದರಾಮಯ್ಯ ಅವರು ಇಳಿಯಲಿದ್ದಾರೆ ಎಂಬ ಬಿಜೆಪಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು ಬಿಜೆಪಿ ನಮ್ಮ ಹೈ ಕಮಾಂಡ್ ಅಲ್ಲ ಎಂದರು.

ಆರ್.ಅಶೋಕ್, ವಿಜಯೇಂದ್ರ, ಛಲವಾದಿ ನಾರಾಯಣಸ್ವಾಮಿ ಹೇಳಿದೆಲ್ಲಾ ಸತ್ಯವಲ್ಲ ಎಂದರು.

ರಾಜ್ಯದ ಎಲ್ಲಾ ಕಂದಾಯ ವಿಭಾಗಗಳಲ್ಲಿ ಸಚಿವ ಸಂಪುಟ ಸಭೆ

ರಾಜ್ಯದ ಎಲ್ಲಾ ಕಂದಾಯ ವಿಭಾಗಗಳಲ್ಲಿ ಸಚಿವ ಸಂಪುಟ ಸಭೆ ನಡೆಸಬೇಕೆಂದು ತೀರ್ಮಾನಿಸಿ ಗುಲ್ಬರ್ಗಾ, ಮೈಸೂರು, ಬೆಂಗಳೂರು ವಿಭಾಗಗಳಲ್ಲಿ ಸಚಿವ ಸಂಪುಟ ಸಭೆ ನಡೆದಿದ್ದು, ಇನ್ನು ಕೆಲವೇ ದಿನಗಳಲ್ಲಿ ಬೆಳಗಾವಿ ಹಾಗೂ ವಿಜಯಪುರದಲ್ಲಿ ಕೂಡ ನಡೆಸಲಾಗುವುದು ಎಂದರು.

ಚಿಕ್ಕಬಳ್ಳಾಪುರದಲ್ಲಿ ಬೆಂಗಳೂರು ಕಂದಾಯ ವಿಭಾಗದ ಸಚಿವ ಸಂಪುಟ ಸಭೆ ನಡೆಸಲಾಗುತ್ತಿದೆ. ಬಜೆಟ್ ಕಾರ್ಯಕ್ರಮಗಳ ಬಗ್ಗೆ ಚರ್ಚಿಸಿ ಸಣ್ಣಪುಟ್ಟ ಕೆಲಸಗಳಿದ್ದರೆ ಮಾಡಿ ಕೊಡಲಾಗುವುದು ಎಂದರು.

ರಾಜ್ಯ ಸುಭಿಕ್ಷವಾಗಲಿ
ರಾಜ್ಯದಲ್ಲಿ ಒಳ್ಳೆ ಮಳೆ ಬೆಳೆಯಾಗಿ , ಸಮೃದ್ಧಿಯಾಗಿ. ಜನ ಸಂತೋಷದಿಂದಿರಲಿ ಮಾನವೀಯ ಸಮಾಜ ನಿರ್ಮಾಣವಾಗುತ್ತ ಪ್ರಯತ್ನ ಮಾಡಲಿ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

Related Articles

Back to top button