BREAKING: ಶ್ರೀರಾಮಸೇನೆ ಕಾರ್ಯಕರ್ತರನ್ನು ಮರಕ್ಕೆ ಕಟ್ಟಿಹಾಕಿ ಥಳಿಸಿದ ದುಷ್ಕರ್ಮಿಗಳು!

ಪ್ರಗತಿವಾಹಿನಿ ಸುದ್ದಿ: ಗೋವುಗಳನ್ನು ಸ್ಥಳಾಂತರಿಸುತ್ತಿರುವುದನ್ನು ಪ್ರಶ್ನೆ ಮಾಡಿದ್ದಕ್ಕೆ ಶ್ರೀರಾಮಸೇನೆ ಕಾರ್ಯಕರ್ತರನ್ನು ಮರಕ್ಕೆ ಕಟ್ಟಿಹಾಕಿ ದೊಣ್ಣೆಯಿಂದ ಹೊಡೆದಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.
ಹುಕ್ಕೇರಿ ತಾಲೂಕಿನ ಇಂಗಳಿ ಗ್ರಾಮದಲ್ಲಿ ದುಷ್ಕರ್ಮಿಗಳು ಶ್ರೀರಾಮಸೇನೆಯ ಐವರು ಕಾರ್ಯಕರ್ತರನ್ನು ತೆಂಗಿನ ಮರಕ್ಕೆ ಕಟ್ಟಿ ಹಾಕಿ ಥಳಿಸಿದ್ದಾರೆ.
ಎರಡು ದಿನಗಳ ಹಿಂದೆ ಅಕ್ರಮವಾಗಿ ಗೋವುಗಳನ್ನು ಸಾಗಿಸಲಾಗುತ್ತಿದೆ ಎಂಬ ಮಾಹಿತಿ ಹಿನ್ನೆಲೆಯಲ್ಲಿ ಶ್ರೀರಾಮಸೇನೆ ಕಾರ್ಯಕರ್ತರು ಗೋವುಗಳನ್ನು ಸಾಗಿಸುತ್ತಿದ್ದ ವಾಹನವನ್ನು ತಡೆದು ಗೋವುಗಳನ್ನು ರಕ್ಷಿಸಿದ್ದರು. ಹೀಗೆ ರಕ್ಷಿಸಿದ್ದ ಗೋವುಗಳನ್ನು ಇಂಗಳಿ ಬಳಿಯ ಗೋಶಾಲೆಗೆ ತಂದು ಸಲಹಲಾಗುತ್ತಿತ್ತು. ಇದೀಗ ಏಕಾಏಕಿ ಗೋಶಾಲೆಯಲ್ಲಿದ್ದ ಗೋವುಗಳನ್ನು ಕೆಲವರು ವಾಹನದಲ್ಲಿ ಬೇರೆಡೆಗೆ ರವಾನಿಸುತ್ತಿರುವ ಬಗ್ಗೆ ಗೊತ್ತಾಗಿದೆ. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಶ್ರೀರಾಮಸೇನೆ ಕಾರ್ಯಕರ್ತರು, ಗೋವುಗಳನ್ನು ಎಲ್ಲಿಗೆ ಸಾಗಿಸುತ್ತಿದ್ದೀರಿ? ಎಂದು ಪ್ರಶ್ನಿಸಿದ್ದಾರೆ.
ಪ್ರಶ್ನೆ ಮಾಡಿದ್ದಕ್ಕೆ ಶ್ರೀರಾಮಸೇನೆ ಐವರು ಕಾರ್ಯಕರ್ತರನ್ನು ಅಲ್ಲಿಯೇ ತೆಂಗಿನ ಮರಕ್ಕೆ ಕಟ್ಟಿಹಾಕಿ ದೊಣ್ಣೆಗಳಿಂದ ಮನಬಂದಂತೆ ಥಳಿಸಿದ್ದಾರೆ. ಇದರಿಂದ ಸಿಡಿದೆದ್ದಿರುವ ಶ್ರೀರಾಮಸೇನೆ ಕಾರ್ಯಕರ್ತರು ಬೆಳಗಾವಿಯಲ್ಲಿ ಪ್ರತಿಭಟನೆಗೆ ಮುಂದಾಗಿದ್ದಾರೆ.