Kannada NewsKarnataka NewsLatest

*ಉಡುಪಿ ಕಾಲೇಜಿನ ಮೊಬೈಲ್ ಚಿತ್ರೀಕರಣ ಪ್ರಕರಣ: ಎಸ್.ಐ.ಟಿಗೆ ವಹಿಸುವ ಪ್ರಶ್ನೆ ಇಲ್ಲ: ಸಿಎಂ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ; ಮಂಗಳೂರು: ಉಡುಪಿ ಕಾಲೇಜೊಂದರಲ್ಲಿ ಮೊಬೈಲ್ ಚಿತ್ರೀಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸ್ಯೂ ಮೋಟೋ ಪ್ರಕರಣವನ್ನು ದಾಖಲಿಸಿಕೊಂಡಿದ್ದು ಎಫ್ ಐ ಆರ್ ಆಗಿದೆ. ತನಿಖೆಯನ್ನು ಡಿ ವೈಎಸ್ಪಿ ಮಟ್ಟದ ಅಧಿಕಾರಿ ಮಾಡುತ್ತಿದ್ದು, ಪ್ರಕರಣವನ್ನು ಎಸ್.ಐ.ಟಿಗೆ ವಹಿಸುವ ಪ್ರಶ್ನೆ ಉದ್ಬವವಾಗುವುದಿಲ್ಲ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

Home add -Advt

ಅವರು ಇಂದು ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಕೇಂದ್ರ ಮಹಿಳಾ ಆಯೋಗದ ಸದಸ್ಯರು ಆಗಮಿಸಿ ತನಿಖೆ ಕೈಗೊಂಡು ಕಾಲೇಜಿನ ಶೌಚಾಲಯದಲ್ಲಿ ಕ್ಯಾಮರಾ ಇರಲಿಲ್ಲ ಎಂದು ಹೇಳಿದ್ದಾರೆ. ತನಿಖೆಯಾಗಿ ವರದಿ ಬಂದ ನಂತರ ಕ್ರಮ ಕೈಗೊಳ್ಳಲಾಗುವುದು ಎಂದರು.

ಗೃಹ ಸಚಿವರು ಈ ಪ್ರಕರಣವನ್ನು ಮಕ್ಕಲಾಟಿಕೆ ಎಂದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಮಕ್ಕಳಾಟಿಕೆಯಾಗಿದಿದ್ದರೆ ಪ್ರಕರಣ ದಾಖಲಾಗುತ್ತಿತ್ತೆ ಎಂದರು. ಕಾಲೇಜಿನ ವಿದ್ಯಾರ್ಥಿಗಳು ತಮಾಷೆ ಮಾಡಿರಬಹುದು ಎಂದಿರಬಹುದು. ಆದರೆ ಪ್ರಕರಣ ದಾಖಲಾಗಿದ್ದು, ಎಫ್. ಐ.ಆರ್. ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ ಎಂದರು. ಡಿವೈಎಸ್ಪಿ ಮಟ್ಟದ ಅಧಿಕಾರಿ ತನಿಖೆ ನಡೆಸುತ್ತಿದ್ದಾರೆ ಎಂದ ಮೇಲೆ ಪ್ರಕರಣವನ್ನು ಎಸ್.ಐ.ಟಿಗೆ ವಹಿಸುವ ಪ್ರಶ್ನೆ ಉದ್ಬವವಾಗುವುದಿಲ್ಲ ಎಂದರು.

ಪ್ರಗತಿ ಪರಿಶೀಲನೆ
ಕರಾವಳಿ ಭಾಗಕ್ಕೆ ನೀಡಿರುವ ಸೌಲಭ್ಯಗಳನ್ನು ಬಜೆಟ್ ನಲ್ಲಿ ತಿಳಿಸಲಾಗಿದೆ. ಜುಲೈ ತಿಂಗಳಲ್ಲಿ ಉಡುಪಿ, ಮಂಗಳೂರು, ಕರಾವಳಿ ಪ್ರದೇಶದಲ್ಲಿ ಮಳೆಯಾಗಿದ್ದು, ಹಾನಿಯಾಗಿರುವ ಪ್ರದೇಶಗಳನ್ನು ವೀಕ್ಷಿಸಲು ಹಾಗೂ ಪ್ರಗತಿ ಪರಿಶೀಲನಾ ಸಭೆ ನಡೆಸಲು ಆಗಮಿಸಿರುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.

ನೈತಿಕ ಪೊಲೀಸ್ ಗಿರಿ: ನಿರ್ದಾಕ್ಷಿಣ್ಯ ಕ್ರಮ
ನೈತಿಕ ಪೊಲೀಸ್ ಗಿರಿ ಯಾರೇ ಮಾಡಿದರೂ ಕೂಡ ನಿರ್ದಾಕ್ಷಿಣ್ಯವಾಗಿ ಕ್ರಮ ತೆಗೆದುಕೊಳ್ಳಲು ತಿಳಿಸಲಾಗಿದೆ. ಯಾರೂ ಕಾನೂನನ್ನು ಕೈಗೆ ತೆಗೆದುಕೊಳ್ಳುವಂತಿಲ್ಲ ಎಂದು ಪೊಲೀಸರಿಗೆ ಸೂಚಿಸಲಾಗಿದೆ ಎಂದರು.

ಸೌಜನ್ಯ ಪ್ರಕರಣ: ಮೇಲ್ಮನವಿ ಸಲ್ಲಿ ಸುವ ಕುರಿತು ಪರಿಶೀಲನೆ
ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಸಿಬಿಐ ನ್ಯಾಯಾಲಯದಲ್ಲಿ ಇತ್ಯರ್ಥವಾಗಿದೆ. ಅವರ ಪೋಷಕರು ಹಾಗೂ ಹೋರಾಟಗಾರರು ಈ ಪ್ರಕರಣದ ಮರುತನಿಖೆಗೆ ಒತ್ತಾಯಿಸಿದ್ದಾರೆ. ಕಾನೂನಿನ ಪ್ರಕಾರ ಏನು ಕ್ರಮ ಕೈಗೊಳ್ಳಬಹುದೆಂದು ವಿಚಾರ ಮಾಡಲಾಗುದು. ಕಾನೂನಿನ ಪ್ರಕಾರ ಉಚ್ಚ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಬೇಕಾಗುತ್ತದೆ ಎಂದರು. ಅಧಿಕಾರಿಗಳಿಂದ ಲೋಪವಾಗಿದೆ ಎಂದು ತೀರ್ಪಿನಲ್ಲಿ ಉಲ್ಲೇಖವಿರುವ ಬಗ್ಗೆ ಉತ್ತರಿಸಿ , ತೀರ್ಪು ಓದಿದ ನಂತರ ಮೇಲ್ಮನವಿ ಸಲ್ಲಿಸಲು ಅವಕಾಶವಿದ್ದರೆ ಸಲ್ಲಿಸಲಾಗುವುದು ಎಂದರು.

ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ ಕ್ರಮ
ಸಾಮಾಜಿಕ ಜಾಲತಾಣಗಳಲ್ಲಿ ಸರ್ಕಾರದ ವಿರುದ್ಧ ಅಥವಾ ವ್ಯಕ್ತಿ ಯ ವಿರುದ್ಧವಾಗಿ ಅನಗತ್ಯವಾಗಿ ಸುಳ್ಳು ಸುದ್ದಿಗಳನ್ನು ಹಬ್ಬಿಸಿದರೆ ಅವರ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುವುದು. ಟೀಕೆ ಮಾಡಿದರೂ ಕ್ರಮ ಕೈಗೊಳ್ಳುತ್ತಿದ್ದೀರಿ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ, ಟೀಕೆ ಮಾಡಿದರೆ ಕ್ರಮ ತೆಗೆದುಕೊಳ್ಳುವುದಿಲ್ಲ. ಸುಳ್ಳು ಸುದ್ದಿ ಹಬ್ಬಿಸಿದರೆ ತೆಗೆದುಕೊಳ್ಳಲಾಗುವುದು ಎಂದರು. ಕುಟುಂಬದವರ ಮೇಲೆ ಸುಳ್ಳು ಸುದ್ದಿ ಹಬ್ಬಿಸುವುದು, ವೈಯಕ್ತಿಕವಾಗಿ ತೇಜೋವಧೆ ಮಾಡುವುದು ಬೇರೆ ಎಂದರು.

ಪರಿಸರ ಸಂರಕ್ಷಣೆಯಲ್ಲಿ ಸರ್ಕಾರ ಹಿಂದೆಬೀಳುವುದಿಲ್ಲ
ಕಸ್ತೂರಿ ರಂಗನ್ ವರದಿ ಬಗ್ಗೆ ಕೇಂದ್ರ ಸರ್ಕಾರ ತೀರ್ಮಾನ ಕೈಗೊಳ್ಳಬೇಕಿದೆ. ಪರಿಸರ ಸಂರಕ್ಷಣೆ ಯ ವಿಚಾರದಲ್ಲಿ ಸರ್ಕಾರ ಹಿಂದೆಬೀಳುವುದಿಲ್ಲ ಎಂದರು.

ಬಿಟ್ ಕಾಯಿನ್
ಬಿಟ್ ಕಾಯಿನ್ ವಿಚಾರದಲ್ಲಿ ಎಸ್.ಐ.ಟಿ ವತಿಯಿಂದ ಇನ್ನೂ ಯಾರಿಗೂ ನೋಟೀಸು ಹೋಗದಿರುವ ಬಗ್ಗೆ ಮಾತನಾಡಿ ಎಸ್.ಐ.ಟಿ ಕ್ರಮವನ್ನು ವಹಿಸುತ್ತದೆ ಎಂದರು.

Related Articles

Back to top button