Kannada News

ಅಂತರ್ಜಲ ಚೈತನ್ಯ ಹಾಗೂ ನರೇಗಾ ಪ್ರಗತಿ ಪರಿಶೀಲನಾ ಸಭೆ

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಅಂತರ್ಜಲ ಚೈತನ್ಯ ಹೆಚ್ಚಿಸಲು ಬೆಳಗಾವಿ ಜಿಲ್ಲೆಯನ್ನು ಇಡೀ ರಾಜ್ಯಕ್ಕೆ ಮಾದರಿ ಮಾಡಬಹುದು. ಆದ್ದರಿಂದ ಜಿಲ್ಲಾ ಪಂಚಾಯತ ಅಧಿಕಾರಿಗಳು ಆರ್ಟ್ ಆಫ್ ಲಿವಿಂಗ್ ಜತೆ ಸೇರಿಕೊಂಡು ಈ ನಿಟ್ಟಿನಲ್ಲಿ ಯೋಜನೆ ರೂಪಿಸಬೇಕು ಎಂದು ಸಚಿವ ಈಶ್ವರಪ್ಪ ತಿಳಿಸಿದರು.

ನಗರದ ಪ್ರವಾಸಿಮಂದಿರದಲ್ಲಿ ಮಂಗಳವಾರ(ಮೇ 26) ನಡೆದ ಅಂತರ್ಜಲ ಚೈತನ್ಯ ಹಾಗೂ ನರೇಗಾ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರ ಮಾತನಾಡಿದರು.

ಜಿಲ್ಲೆಯಲ್ಲಿ ನೀರಾವರಿ ಹಾಗೂ ಕಬ್ಬು ಬೆಳೆ ಹೆಚ್ಚಾಗಿರುವ ತಾಲ್ಲೂಕು ಗಳನ್ನು ಹೊರತುಪಡಿಸಿ ಇತರ ಕಡೆಗಳಲ್ಲಿ ಅಂತರ್ಜಲ ಚೈತನ್ಯ ಹೆಚ್ಚಳಕ್ಕೆ ಆದ್ಯತೆ ನೀಡಬೇಕು.

ನರೇಗಾ ಯೋಜನೆ ಹಾಗೂ ಬದು ನಿರ್ಮಾಣಕ್ಕೆ ಸಂಬಂಧಿಸಿದಂತೆ ನಿಗದಿಪಡಿಸಿದ ಗುರಿ ಸಾಧನೆಗೆ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.

ಜಿಲ್ಲಾಧಿಕಾರಿಗಳ ಜತೆ ಸಮನ್ವಯತೆ ಸಾಧಿಸುವ ಮೂಲಕ ಘನತ್ಯಾಜ್ಯ ನಿರ್ವಹಣಾ ಘಟಕ ನಿರ್ಮಾಣಕ್ಕೆ ಆದಷ್ಟು ಬೇಗ ಭೂಮಿ ಪಡೆದುಕೊಳ್ಳಬೇಕು.

ನರೇಗಾ ಯೋಜನೆ ಅನುಷ್ಠಾನದ ಕುರಿತು ಸಚಿವರಿಗೆ ಮಾಹಿತಿ ನೀಡಿದ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ರಾಜೇಂದ್ರ ಕೆ.ವಿ. ಅವರು, ಬೆಳಗಾವಿ ಜಿಲ್ಲೆಗೆ ಒಟ್ಟು 1.20 ಕೋಟಿ ಮಾನವ ದಿನಗಳ ಸೃಜನೆಯ ಗುರಿ ನೀಡಲಾಗಿತ್ತು. ಇದುವರೆಗೆ ಶೇ.42 ಗುರಿ ಸಾಧಿಸಲಾಗಿದೆ.

ಕೊರೊನಾ ಹಿನ್ನೆಲೆಯಲ್ಲಿ ಸ್ವಲ್ಪಮಟ್ಟಿಗೆ ನಿಧಾನವಾಗಿ ಕಾಮಗಾರಿ ಆರಂಭಗೊಂಡಿದ್ದು, ಇದೀಗ ಚುರುಕುಗೊಂಡಿರುತ್ತದೆ ಎಂದು ವಿವರಿಸಿದರು.

ಬದು ನಿರ್ಮಾಣ 3444 ಗುರಿ ಹೊಂದಲಾಗಿದ್ದು, ಜಿಲ್ಲೆಯ ಬಹುತೇಕ ರೈತರಿಗೆ ಅನುಕೂಲ ಕಲ್ಪಿಸಲಾಗುವುದು.
ಹಿರಣ್ಯಕೇಶಿ ನದಿ ವ್ಯಾಪ್ತಿಯಲ್ಲಿ , 2,33, 713 ಮಾನವ ದಿನಗಳ ಸೃಜನೆಗೆ ಗುರಿ ಹೊಂದಲಾಗಿದೆ.
ಜಿಲ್ಲೆಯಲ್ಲಿ ಇದುವರೆಗೆ ಟ್ಯಾಂಕರ್ ಮೂಲಕ ನೀರು ಪೂರೈಸುವ ಪರಿಸ್ಥಿತಿ ಬಂದಿಲ್ಲ.

ಸ್ವಚ್ಛ ಭಾರತ ಮಿಷನ್, ಘನತ್ಯಾಜ್ಯ ನಿರ್ವಹಣಾ ಘಟಕ ನಿರ್ಮಾಣ ಸೇರಿದಂತೆ ಬಹುತೇಕ ಕೆಲಸಗಳು ಇದೀಗ ಚುರುಕು ಪಡೆದುಕೊಂಡಿವೆ ಎಂದು ತಿಳಿಸಿದರು.

ಶಾಸಕರಾದ ಮಹಾಂತೇಶ ದೊಡ್ಡಗೌಡ್ರ, ಪ್ರತಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಜಲಾಮೃತ ಯೋಜನೆಯನ್ನು ಇನ್ನಷ್ಟು ವಿಸ್ತರಿಸಬೇಕು ಎಂದು ಮನವಿ ಮಾಡಿಕೊಂಡರು.

ವಿಧಾನಪರಿಷತ್ತಿನ ಸರ್ಕಾರದ ಮುಖ್ಯ ಸಚೇತಕರಾದ ಮಹಾಂತೇಶ ಕವಟಗಿಮಠ ಮಾತನಾಡಿ, ಅಂತರ್ಜಲ ಚೈತನ್ಯ ಹೆಚ್ಚಿಸುವುದಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಮುತುವರ್ಜಿ ವಹಿಸಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.
ರೈಲ್ವೆ ಇಲಾಖೆಯ ರಾಜ್ಯ ಸಚಿವರಾದ ಸುರೇಶ್ ಅಂಗಡಿ ಅವರು ನರೇಗಾ ಅನುಷ್ಠಾನದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಜಿಲ್ಲಾ ಪಂಚಾಯತ ಅಧ್ಯಕ್ಷೆ ಆಶಾ ಐಹೊಳೆ, ಉಪಾಧ್ಯಕ್ಷ ಅರುಣ ಕಟಾಂಬಳೆ ಮತ್ತಿತರರು ಉಪಸ್ಥಿತರಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button