
ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ಮೂರನೇ ಅಲೆ ಭೀತಿ ಹಾಗೂ ರೂಪಾಂತರಿ ವೈರಸ್ ಒಮಿಕ್ರಾನ್ ಆತಂಕ ಬೆನ್ನಲ್ಲೇ ಅಂತರಾಜ್ಯ ಗಡಿಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದ್ದು, ರಾಜ್ಯಕ್ಕೆ ಬರುವ ಪ್ರಯಾಣಿಕರ ಕಟ್ಟುನಿಟ್ಟಿನ ತಪಾಸಣೆ ಕೈಗೊಳ್ಳಲಾಗುತ್ತಿದೆ. ಈ ನಡುವೆ ನೆಗೆಟಿವ್ ರಿಪೋರ್ಟ್ ಇಲ್ಲದ ಪ್ರಯಾಣಿಕರ ಬಸ್ ನ್ನೇ ವಾಪಸ್ ಕಳುಹಿಸಿದ ಘಟನೆ ಕಾಗವಾಡ ಚಕ್ ಪೋಸ್ಟ್ ನಲ್ಲಿ ನಡೆದಿದೆ.
ಬೆಳಗಾವಿ ಜಿಲ್ಲೆಯ ಕಾಗವಾಡ ಚೆಕ್ ಪೋಸ್ಟ್ ನಲ್ಲಿ ಪ್ರತಿಯೊಂದು ವಾಹನವನ್ನು ತಪಾಸಣೆ ನಡೆಸಲಾಗುತ್ತಿದ್ದು, ಈ ವೇಳೆ ಮಹಾರಾಷ್ಟ್ರದ ಸಾಂಗ್ಲಿಯಿಂದ ಸಿಂದಗಿಗೆ ಹೊರಟಿದ್ದ ಕೆ ಎಸ್ ಆರ್ ಟಿಸಿ ಬಸ್ ತಡೆದ ಅಧಿಕಾರಿಗಳು ಪ್ರಯಾಣಿಕರ ಬಳಿ ಕೋವಿಡ್ ನೆಗೆಟಿವ್ ರಿಪೋರ್ಟ್ ತೋರಿಸುವಂತೆ ಕೇಳಿದ್ದಾರೆ. ಆದರೆ ಬಸ್ ನಲ್ಲಿದ್ದ ಪ್ರಯಾಣಿಕರಲ್ಲಿ ಯಾರೊಬ್ಬರ ಬಳಿಯೂ ನೆಗೆಟಿವ್ ವರದಿ ಇರಲಿಲ್ಲ.
ನೆಗೆಟಿವ್ ರಿಪೋರ್ಟ್ ಇಲ್ಲದ ಕಾರಣ ಪೊಲೀಸ್ ಅಧಿಕಾರಿಗಳು ಬಸ್ ನ್ನು ವಾಪಸ್ ಸಾಂಗ್ಲಿ ಕಳುಹಿಸಿದ್ದಾರೆ ಎಂದು ತಿಳಿದುಬಂದಿದೆ.