Kannada NewsLatest

ರಾಚವಿ ಪರಿಶಿಷ್ಟ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಣೆ

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಪರಿಶಿಷ್ಟ ಜಾತಿ/ಪಂಗಡಗಳ ಸ್ನಾತಕೋತ್ತರ ಮತ್ತು ಸಂಶೋಧನಾ ವಿದ್ಯಾರ್ಥಿಗಳಿಗೆ ಎಸ್.ಸಿ.ಪಿ/ಟಿ.ಎಸ್.ಪಿ ಯೋಜನೆಯಡಿ ಉಚಿತ ಲ್ಯಾಪ್‌ಟಾಪ್ ಗಳನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ರಮೇಶ್ ಜಾರಕಿಹೊಳಿ ವಿತರಿಸಿದರು.

ಸುವರ್ಣ ವಿಧಾನಸೌಧದ ಸೆಂಟ್ರಲ್ ಸಭಾಂಗಣದಲ್ಲಿ ಶನಿವಾರ(ಸೆ.19) ನಡೆದ ಸಮಾರಂಭದಲ್ಲಿ ಲ್ಯಾಪ್‌ಟಾಪ್ ಗಳನ್ನು ನೀಡಲಾಯಿತು.

ಅಧ್ಯಕ್ಷತೆ ವಹಿಸಿ ಮಾತನಾಡಿದ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎಂ.ರಾಮಚಂದ್ರಗೌಡ, ದಶಮಾನೋತ್ಸವದ ಸಂಭ್ರಮದಲ್ಲಿ ಇರುವ ಅಭಿವೃದ್ಧಿ ಕೆಲಸ ಭರದಿಂದ ನಡೆಯಲಿವೆ ಎಂದರು.

ಭೌಗೋಳಿಕವಾಗಿ ಹಾಗೂ ಶೈಕ್ಷಣಿಕವಾಗಿ ರಾಜ್ಯದಲ್ಲಿ ದೊಡ್ಡದಾಗಿರುವ ವಿಶ್ವವಿದ್ಯಾಲಯವು ಗುಣಮಟ್ಟದ ಶಿಕ್ಷಣ ಸೇವೆಯನ್ನು ನೀಡುತ್ತಿದೆ. ದಶಮಾನೋತ್ಸವ ಅಂಗವಾಗಿ ವಿವಿಧ ಹೊಸ ವಿಭಾಗಗಳ ಆರಂಭ, ವಿಚಾರಸಂಕಿರಣ, ಕಮ್ಮಟಗಳನ್ನು ಆಯೋಜಿಸಲಾಗುತ್ತದೆ.

ಸಿಎಂ, ಉಸ್ತುವಾರಿ ಸಚಿವರಿಗೆ ಕೃತಜ್ಞತೆ:

ರಾಣಿ ಚೆನ್ನಮ್ಮ ವಿವಿಗೆ ಹಿರೇಬಾಗೇವಾಡಿ ಬಳಿ ಜಮೀನು ಒದಗಿಸಿದ ಮುಖ್ಯಮಂತ್ರಿಗಳು ಹಾಗೂ ಉಸ್ತುವಾರಿ ಸಚಿವರಾದ ರಮೇಶ್ ಜಾರಕಿಹೊಳಿ ಸೇರಿದಂತೆ ಎಲ್ಲ ಜನಪ್ರತಿನಿಧಿಗಳಿಗೆ ಕುಲಪತಿ ಪ್ರೊ.ಎಂ.ರಾಮಚಂದ್ರಗೌಡ ಕೃತಜ್ಞತೆಗಳನ್ನು ಸಲ್ಲಿಸಿದರು. ಇದೇ ವೇಳೆ ಜಮೀನು ನೀಡಿದ ರೈತರ ಸಹಕಾರವನ್ನು ಕೂಡ ಅವರು ಸ್ಮರಿಸಿದರು.

ಪದವಿ ವಂಚಿತರಿಗೆ ಸುವರ್ಣಾವಕಾಶ:

ಅನಿವಾರ್ಯ ಕಾರಣಗಳಿಂದ ಪದವಿ ಅಪೂರ್ಣಗೊಳಿಸಿದವರಿಗೆ ದಶಮಾನೋತ್ಸವ ಸಂದರ್ಭದಲ್ಲಿ ಪದವಿ ಪೂರ್ಣಗೊಳಿಸಲು ಸುವರ್ಣಾವಕಾಶವನ್ನು ವಿಶ್ವ ವಿದ್ಯಾಲಯ ಒದಗಿಸಲಿದೆ ಎಂದು ಕುಲಪತಿ ಪ್ರೊ.ಎಂ.ರಾಮಚಂದ್ರಗೌಡ ಅವರು ತಿಳಿಸಿದರು.

ಪ್ರಧಾನಮಂತ್ರಿಗಳ ಆಶಯದಂತೆ ಹಾಗೂ ಹೊಸ ಶೈಕ್ಷಣಿಕ ಕೌಶಲ್ಯಾಧಾರಿತ ನೂತನ ಕೋರ್ಸುಗಳನ್ನು ಆರಂಭಿಸಲಾಗುವುದು. ಲ್ಯಾಪ್‌ಟಾಪ್ ವಿತರಿಸುವ ಮೂಲಕ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಪೂರಕ ಅವಕಾಶ ಕಲ್ಪಿಸಲಾಗಿದೆ ಎಂದರು.

ವಿಧಾನಸಭೆ ಉಪಾಧ್ಯಕ್ಷ ಆನಂದ ಮಾಮನಿ, ಜಿಲ್ಲಾ ಪಂಚಾಯತ ಅಧ್ಯಕ್ಷೆ ಆಶಾ ಐಹೊಳೆ, ಜಲಸಂಪನ್ಮೂಲ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ, ಬಾಗಲಕೋಟೆ ಜಿಲ್ಲಾಧಿಕಾರಿ ಕ್ಯಾಪ್ಟನ್ ರಾಜೇಂದ್ರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ಕುಲಸಚಿವ ಬಸವರಾಜ ಪದ್ಮಸಾಲಿ ಮತ್ತಿತರರು ಉಪಸ್ಥಿತರಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button