Kannada NewsKarnataka NewsLatest

ಬೆಳಗಾವಿ – ಉಪಚುನಾವಣೆ: ಬೊಮ್ಮಾಯಿ ಮೊದಲ ಪ್ರತಿಕ್ರಿಯೆ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು:  ರಾಜ್ಯದಲ್ಲಿ ಘೋಷಣೆಯಾಗಿರುವ ಒಂದು ಲೋಕಸಭೆ ಹಾಗೂ 2 ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆಯಲ್ಲಿ ನಾವು ದಾಖಲೆ ಮತಗಳ ಅಂತರದಿಂದ ಜಯಗಳಿಸುತ್ತೇವೆ ಎಂಬ ವಿಶ್ವಾಸವನ್ನು ಗೃಹ,  ಕಾನೂನು ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಬಸವರಾಜ ಬೊಮ್ಮಾಯಿ ವ್ಯಕ್ತಪಡಿಸಿದರು.
 ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಅಭ್ಯರ್ಥಿಗಳ ಆಯ್ಕೆಯನ್ನು ಪಕ್ಷದವರು ಸಮಿತಿಯಲ್ಲಿ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದರು.
ಕಳೆದ ಬಾರಿ ರಾಜ್ಯದಲ್ಲಿ  ೧೫ ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯಲ್ಲಿ೧೨ ಕ್ಷೇತ್ರಗಳಲ್ಲಿ ಜಯ ಗಳಿಸಿದ್ದೆವು. ನಂತರ ರಾಜರಾಜೇಶ್ವರಿನಗರ ಕ್ಷೇತ್ರದ ಉಪ ಚುನಾವಣೆಯಲ್ಲಿ ಕೂಡ ಬಿಜೆಪಿ ಅಭರ್ಥಿ ದಾಖಲೆ ಮತಗಳ ಅಂತರದಿಂದ ಜಯ ಗಳಿಸಿದ್ದರು. ಈ ಬೆಳಗಾವಿ ಲೋಕಸಭೆ ಹಾಗೂ  ಮಸ್ಕಿ, ಬಸವಕಲ್ಯಾಣ ವಿಧಾನಸಭೆ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ನಾಯಕತ್ವದಲ್ಲಿ ಬಿಜೆಪಿ‌ ಅಭ್ಯರ್ಥಿಗಳು ದಾಖಲೆ ಮತಗಳ ಅಂತರದಿಂದ ಜಯಗಳಿಸಲಿದ್ದಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನಾಯಕತ್ವಕ್ಕೆ ಬೆಳಗಾವಿ ಲೋಕಸಭೆ ಕ್ಷೇತ್ರದ ಜನತೆ ಈಗಾಗಲೇ ತಮ್ಮ ಬೆಂಬಲ ವ್ಯಕ್ತಪಡಿಸಿದ್ದಾರೆ.  ಇತ್ತೀಚೆಗೆ ಬೆಳಗಾವಿಯಲ್ಲಿ ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ನೇತೃತ್ವದಲ್ಲಿ ನಡೆದ ಸಂದರ್ಭದಲ್ಲಿ ಸೇರಿದ್ದ ಅಪಾರ ಜನಸ್ತೋಮವೇ ಇದಕ್ಕೆ ನಿದರ್ಶನ ಎಂದು ಬೊಮ್ಮಾಯಿ ತಿಳಿಸಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button