*ಮೂವರು ಆರೋಪಿಗಳನ್ನು ಗಡಿಪಾರು ಮಾಡಿದ ಬೆಳಗಾವಿ ಪೊಲೀಸರು*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ನಗರದ ಕಾನೂನು ಸುವ್ಯವಸ್ಥೆ ಕಾಪಾಡಲು ಬೆಳಗಾವಿ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದು ಅಕ್ರಮ ದಂಧೆಯಲ್ಲಿ ಭಾಗಿಯಾಗಿದ್ದ ನಠೋರಿಯಸ್ ಆರೋಪಿಗಳಿಗೆ ಪೊಲೀಸ್ ಕಮೀಷನರ್ ಭೂಷಣ್ ಬೊರಸೆ ಗಡಿಪಾರು ಶಾಕ್ ನೀಡಿದ್ದಾರೆ.
ಹೊಸ ವರ್ಷದ ಯುಗಾದಿ ಹಬ್ಬದ ದಿನವೇ ಮೂವರು ಆರೋಪಿಗಳನ್ನು ನಗರ ಹಾಗೂ ಜಿಲ್ಲೆಯ ವ್ಯಾಪ್ತಿಯಿಂದ ಹೊರಗೆ ಗಡಿಪಾರು ಮಾಡುವಂತೆ ಆದೇಶಿಸಲಾಗಿದೆ. ಮಟ್ಕಾ ಜೂಜಾಟ, ಗಾಂಜಾ ಸೇರಿದಂತೆ ವಿವಿಧ ಅಕ್ರಮ ಚಟುವಟಿಕೆಗಳಲ್ಲಿ ತೊಡಗಿದ್ದ ಆರೋಪಿಗಳ ವಿರುದ್ಧ ಈ ಕ್ರಮ ಕೈಗೊಳ್ಳಲಾಗಿದೆ.
ಗಡಿಪಾರುಗೊಳಗಾದವರನ್ನು ಸರ್ಫರಾಜ್ ಶೇಖ್, ವಿನಾಯಕ ಕೊಲ್ಲಾಪುರಿ ಹಾಗೂ ಸಾಗರ ಸಾಲಗುಡೆ ಎಂದು ಗುರುತಿಸಲಾಗಿದೆ. ಇವರ ವಿರುದ್ಧ ಹಲವು ಪ್ರಕರಣಗಳು ದಾಖಲಾಗಿದ್ದರೂ, ಪದೇ ಪದೇ ಎಚ್ಚರಿಕೆ ನೀಡಿದರೂ ಚಟುವಟಿಕೆ ನಿಲ್ಲಿಸಿರಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಹಿನ್ನೆಲೆ ಮೂವರನ್ನೂ ಕ್ರಮವಾಗಿ ವಿಜಯಪುರ, ಕಾರವಾರ ಹಾಗೂ ಯಾದಗಿರಿ ಜಿಲ್ಲೆಗಳ ವ್ಯಾಪ್ತಿಗೆ 6 ತಿಂಗಳ ಕಾಲ ಗಡಿಪಾರು ಮಾಡಲಾಗಿದೆ. ನಗರದಲ್ಲಿ ಶಾಂತಿ ಮತ್ತು ಭದ್ರತೆ ಕಾಪಾಡಲು ಇಂತಹ ಕಠಿಣ ಕ್ರಮಗಳು ಮುಂದುವರೆಯಲಿವೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ.

