Kannada NewsKarnataka NewsLatest

ದೇಶದ 100 ನಗರಗಳ ಪೈಕಿ ಬೆಳಗಾವಿ ಸ್ಮಾರ್ಟ್ ಸಿಟಿ ಯೋಜನೆಗೆ 6ನೇ ಸ್ಥಾನ

ಸ್ಮಾರ್ಟ್ ಸಿಟಿ ಕಲ್ಪನೆಗೆ ತಕ್ಕಂತೆ ಕೆಲಸಗಳಾಗಲಿ – ಸಚಿವ ಭೈರತಿ ಬಸವರಾಜ್

 

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಸ್ಮಾರ್ಟ್ ಸಿಟಿ ಯೋಜನೆಯಡಿ ಬೆಳಗಾವಿ ನಗರದಲ್ಲಿ ಕೈಗೆತ್ತಿಕೊಳ್ಳಲಾಗಿರುವ ಎಲ್ಲ ಕಾಮಗಾರಿಗಳನ್ನು ಸಮರೋಪಾದಿಯಲ್ಲಿ ಪೂರ್ಣಗೊಳಿಸಿ ಸಾರ್ವಜನಿಕ ಬಳಕೆಗೆ ಒದಗಿಸಬೇಕು ಎಂದು ನಗರಾಭಿವೃದ್ಧಿ ಇಲಾಖೆಯ ಸಚಿವ ಬಿ.ಎ.ಬಸವರಾಜ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಮಹಾನಗರ ಪಾಲಿಕೆಯ ಸಭಾಂಗಣದಲ್ಲಿ ಶುಕ್ರವಾರ (ಜ.8) ನಡೆದ ಸ್ಮಾರ್ಟ್ ಸಿಟಿ ಹಾಗೂ ನಗರಾಭಿವೃದ್ಧಿ ಪ್ರಾಧಿಕಾರದ ಅಭಿವೃದ್ಧಿ ಕಾರ್ಯಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸ್ಮಾರ್ಟ್ ಸಿಟಿ ಯೋಜನೆಯಡಿ ಕೈಗೊಳ್ಳಲಾಗಿರುವ ಕಾಮಗಾರಿಗಳಿಗೆ ರಾಜ್ಯ ಸರ್ಕಾರದ ವತಿಯಿಂದ ಬಿಡುಗಡೆ ಮಾಡಬೇಕಾದ ಅನುದಾನ ಬಿಡುಗಡೆಗೆ ಕೂಡಲೇ ಕ್ರಮ ಕೈಗೊಳ್ಳಲಾಗುವುದು.

ಸ್ಮಾರ್ಟ್ ಸಿಟಿ ಕಲ್ಪನೆಗೆ ತಕ್ಕಂತೆ ನಗರ ಸ್ಮಾರ್ಟ್ ಕಾಣಿಸುವಂತೆ ಕೆಲಸಗಳು ಆಗಬೇಕು. ಅಧಿಕಾರಿಗಳು ಈ ನಿಟ್ಟಿನಲ್ಲಿ ಹೊಣೆಗಾರಿಕೆಯಿಂದ ಕಾರ್ಯನಿರ್ವಹಿಸಬೇಕು ಎಂದು ಸೂಚನೆ ನೀಡಿದರು.
ಸ್ಮಾರ್ಟ್ ಸಿಟಿ ಯೋಜನೆಯಡಿ ಕೈಗೆತ್ತಿಕೊಂಡಿರುವ ರಸ್ತೆ ಕಾಮಗಾರಿಗಳ ಪಾದಚಾರಿ ಮಾರ್ಗ ಸೇರಿದಂತೆ ಫಿನಿಷಿಂಗ್ ಉತ್ತಮ‌ ರೀತಿಯಲ್ಲಿ ನಿರ್ವಹಿಸಬೇಕು ಎಂದರು.

ಸೈಕಲ್‌ ಟ್ರ್ಯಾಕ್ ವೈಜ್ಞಾನಿಕ ರೀತಿಯಲ್ಲಿ ನಿರ್ಮಿಸಬೇಕು ಎಂದರು. ಎಲ್ಲ ಕಾಮಗಾರಿಗಳನ್ನು ಸಮರೋಪಾದಿಯಲ್ಲಿ ಪೂರ್ಣಗೊಳಿಸಿ ಸಾರ್ವಜನಿಕ ಬಳಕೆಗೆ ಒದಗಿಸಬೇಕು. ವಿಳಂಬವಾದರೆ ಗುತ್ತಿಗೆದಾರರ ವಿರುದ್ಧ ಕ್ರಮ ಕೈಗೊಳ್ಳಬೇಕು.

ಬಡ್ಡಿ‌ ಹಣದಲ್ಲಿ ಅಭಿವೃದ್ಧಿ ಕೆಲಸಕ್ಕೆ ಅವಕಾಶ:

ಸ್ಮಾರ್ಟ್ ಸಿಟಿ ಯೋಜನೆಯಡಿ ಇರುವ 80 ಕೋಟಿ ಅನುದಾನಕ್ಕೆ ಬರುವ ಬಡ್ಡಿ ಹಣದಲ್ಲಿ ಸೂಕ್ತ ಕಾಮಗಾರಿಗಳನ್ನು ಕೈಗೊಳ್ಳಲು ಅನುಕೂಲವಾಗುವಂತೆ ತಕ್ಷಣವೇ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಚಿವ ಬಸವರಾಜ್ ಹೇಳಿದರು.

ಈ ಹಣದಲ್ಲಿ ಬೆಳಗಾವಿ ನಗರ ಮತ್ತು ದಕ್ಷಿಣ ಮತ ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸಗಳನ್ನು ಕೈಗೊಳ್ಳಲು ಅವಕಾಶ ಕಲ್ಪಿಸಲಾಗುವುದು ಎಂದು ತಿಳಿಸಿದರು.

ಸ್ಮಾರ್ಟ್ ಕ್ಲಾಸ್ ವಿನೂತನ ಮಾದರಿ ಅನುಷ್ಠಾನ ಗೊಳಿಸಲಾಗುತ್ತಿದೆ. ಆದರೆ ಭವಿಷ್ಯದಲ್ಲಿ ಅವುಗಳ ನಿರ್ವಹಣೆಯನ್ನು ಗಮನದಲ್ಲಿಟ್ಟುಕೊಂಡು ಸೌಕರ್ಯಗಳನ್ನು ಒದಗಿಸಬೇಕು ಎಂದು ಶಾಸಕ ಅಭಯ್ ಪಾಟೀಲ ಸಲಹೆ ನೀಡಿದರು.
ಸ್ಮಾರ್ಟ್ ಕ್ಲಾಸ್ ಗಳಿಗೆ ಕುಷನ್ ಫರ್ನಿಚರ್ ಬದಲಾಗಿ ಸ್ಟೀಲ್ ಫರ್ನಿಚರ್ ನೀಡಿದರೆ ನಿರ್ವಹಣೆ ಸುಲಭವಾಗುತ್ತದೆ ಎಂದರು.

ಸೈಕಲ್ ಟ್ರ್ಯಾಕ್ ಮೇಲೆ ಪಾರ್ಕಿಂಗ್ ಅಥವಾ ಬೀದಿ ವ್ಯಾಪಾರ ಮಾಡುವರ ಮೇಲೆ ಕ್ರಮಕೈಗೊಳ್ಳಬೇಕು. ಅಂದಾಗ ಮಾತ್ರ ಸೈಕಲ್ ಟ್ರ್ಯಾಕ್ ಉಪಯುಕ್ತವಾಗುತ್ತದೆ ಎಂದು ಶಾಸಕ ಅಭಯ್ ಪಾಟೀಲ ಸಲಹೆ ನೀಡಿದರು.

ಸ್ಮಾರ್ಟ್ ಸಿಟಿ-101 ಕಾಮಗಾರಿ:

ಸ್ಮಾರ್ಟ ಸಿಟಿ ಯೋಜನೆಯಡಿ ಒಟ್ಟಾರೆ 101 ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. 930 ಕೋಟಿ ರೂಪಾಯಿ ವೆಚ್ಚದಲ್ಲಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ ಎಂದು ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕ ಶಶಿಧರ್ ಕುರೇರ್ ವಿವರಿಸಿದರು.
ಬಿಡುಗಡೆಯಾಗಿರುವ 494 ಕೋಟಿ ರೂಪಾಯಿ ಪೈಕಿ ಇದುವರೆಗೆ 366 ಕೋಟಿ ರೂಪಾಯಿ ವೆಚ್ಚ ಮಾಡಲಾಗಿದೆ.
ಕಾಮಗಾರಿಗಳನ್ನು ಪೂರ್ಣಗೊಳಿಸಿದ ದೇಶದ ನೂರು ನಗರಗಳ ಪೈಕಿ ಬೆಳಗಾವಿ ನಗರ 6ನೇ ಸ್ಥಾನದಲ್ಲಿದೆ ಎಂದು ಕುರೇರ್ ತಿಳಿಸಿದರು.

ನಿರಂತರ ನೀರು ಯೋಜನೆಗೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ವಿಶೇಷ ಸಭೆ ಕರೆದು ರಾಜ್ಯಮಟ್ಟದಲ್ಲಿ ಕೂಡ ಚರ್ಚೆ ಆಗಬೇಕು ಎಂದು ಶಾಸಕ ಹಾಗೂ ಕೆಯುಐಡಿಎಫ್ ಸಿ ಅಧ್ಯಕ್ಷ ಶಂಕರ್ ಪಾಟೀಲ ಮುನೇನಕೊಪ್ಪ ಸಲಹೆ ನೀಡಿದರು.

ಬೆಳಗಾವಿ ಸ್ಮಾರ್ಟ್ ಸಿಟಿ ಮಾದರಿಯಲ್ಲಿ ಹುಬ್ಬಳ್ಳಿ-ಧಾರವಾಡದಲ್ಲೂ ಕಾಮಗಾರಿಗಳನ್ನು ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.

ಶಾಸಕ ಅನಿಲ್ ಬೆನಕೆ, ಕೆಯುಡಬ್ಲ್ಯುಸಿ ನಿರ್ದೇಶಕರಾದ ದೀಪಾ ಕುಡಚಿ, ಬುಡಾ ಅಧ್ಯಕ್ಷ ಘೂಳಪ್ಪ ಹೊಸಮನಿ, ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ, ಪಾಲಿಕೆ ಆಯುಕ್ತ ಜಗದೀಶ್ ಕೆ.ಎಚ್., ಬುಡಾ ಆಯುಕ್ತ ಪ್ರೀತಂ ನಸಲಾಪುರೆ ಮತ್ತಿತರರು ಸಭೆಯಲ್ಲಿ ಉಪಸ್ಥಿತರಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button