Belagavi NewsBelgaum NewsKannada NewsKarnataka NewsLatestNational

*ಯುಪಿಎಸ್ಸಿಯಲ್ಲಿ 910ನೇ ರ್ಯಾಂಕ್ ಪಡೆದ ಬೆಳಗಾವಿ ಯುವಕ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಜಿಲ್ಲೆಯ ಯರಗಟ್ಟಿ ತಾಲ್ಲೂಕಿನ ಕೊಡ್ಲಿವಾಡ ಗ್ರಾಮದ ಹನುಮಂತಪ್ಪ ಯಲ್ಲಪ್ಪ ನಂದಿ ಯುಪಿಎಸ್ಸಿ ಪರೀಕ್ಷೆಯಲ್ಲಿ ಸಾಧನೆ‌ ಮೆರೆದಿದ್ದಾರೆ. ಸತತ ಓದು, ಪರಿಶ್ರಮ ಆತನ ಕೈ ಹಿಡಿದಿದ್ದು, ಯುಪಿಎಸ್ಸಿ ಪರೀಕ್ಷೆಯಲ್ಲಿ 910ನೇ ರ್ಯಾಂಕ್ ಪಡೆಯುವ ಮೂಲಕ ಎಲ್ಲರಿಗೂ ಮಾದರಿಯಾಗಿದ್ದಾರೆ.

ಯುಪಿಎಸ್ಸಿಯಲ್ಲಿ ಮಗ ಪಾಸ್ ಆಗಿರುವ ಸುದ್ದಿ ತಿಳಿಯುತ್ತಿದ್ದಂತೆ ಕೊಡ್ಲಿವಾಡದ ಅವರ ಮನೆಯಲ್ಲಿ ಸಂಭ್ರಮ ಮನೆ ಮಾಡಿದೆ. ಅಪ್ಪ ಯಲ್ಲಪ್ಪ, ಅವ್ವ ಕಾಳವ್ವ, ಪತ್ನಿ ಯಶೋಧಾ, ಸಹೋದರ ಆನಂದ ಸೇರಿ ಕುಟುಂಬಸ್ಥರ ಸಂತಸಕ್ಕೆ ಪಾರವೇ ಇಲ್ಲ. ಅಲ್ಲದೇ ಇಡೀ ಊರಿಗೆ ಊರೇ ಹನುಮಂತನ ಸಾಧನೆಗೆ ಹೆಮ್ಮೆ ಪಡುತ್ತಿದೆ.

Home add -Advt

ಹನುಮಂತ ಅವರ ಅಪ್ಪ ಮತ್ತು ಸಹೋದರ ಕುರಿ ಕಾಯುತ್ತಾ ಕೃಷಿ ಕಾಯಕ ಮಾಡುತ್ತಾರೆ. ಅವ್ವ ಅವರಿಗೆ ಸಹಾಯ ಮಾಡುತ್ತಾರೆ. ಯಾವುದೇ ಯುಪಿಎಸ್ಸಿ ಹಿನ್ನೆಲೆ ಇಲ್ಲ. ಮನೆಯಲ್ಲಿ ಬಡತನ ಹಾಸಿ ಹೊದ್ದಿದೆ. ಎಲ್ಲವನ್ನು ಮೆಟ್ಟಿ ನಿಂತು ಹನುಮಂತ ಯುಪಿಎಸ್ಸಿ ಪಾಸ್ ಆಗುವ ಮೂಲಕ ತಂದೆ-ತಾಯಿ ಹೆಮ್ಮೆ ಪಡುವ ಸಾಧನೆಗೈದಿದ್ದಾರೆ.

ತನ್ನ ಸಾಧನೆ ಬಗ್ಗೆ ಹೇಳಿರುವ ಹನುಮಂತು ಅವರು, ಸಮಾಜದಲ್ಲಿ ಬಡವರು, ನೊಂದವರಿಗೆ ಒಳ್ಳೆಯ ಸೇವೆ ಸಲ್ಲಿಸುವ ಅಭಿಲಾಷೆ ಇದೆ. ಭಾರತೀಯ ರೈಲ್ವೇ ಸೇವೆ ಅಥವಾ ಭಾರತೀಯ ಕಂದಾಯ ಸೇವೆಯಲ್ಲಿ ಉನ್ನತ ಹುದ್ದೆ ಸಿಗುವ ನಿರೀಕ್ಷೆ ಇದೆ. ಯಾವುದೇ ಹುದ್ದೆ ಸಿಕ್ಕರೂ ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ ಎಂದು ಹನುಮಂತ ಹೇಳಿದರು.

ಹನುಮಂತ ಅವರು, 1 ರಿಂದ 7ನೇ ತರಗತಿಯವರೆಗೆ ಸ್ವಗ್ರಾಮ ಕೊಡ್ಲಿವಾಡದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಲಿತಿದ್ದು, 8-10ನೇ ತರಗತಿ ಸತ್ತಿಗೇರಿ ಸರ್ಕಾರಿ ಪ್ರೌಢಶಾಲೆಯಲ್ಲಿ ಮುಗಿಸಿದ್ದಾರೆ. ಪಿಯುಸಿ ಧಾರವಾಡದ ಕೆಸಿಡಿ ಕಾಲೇಜಿನಲ್ಲಿ ಪೂರ್ಣಗೊಳಿಸಿದ್ದರೆ, ಬೆಳಗಾವಿ ಗೋಗಟೆ‌ ಕಾಲೇಜಿನಲ್ಲಿ ಬಿಇ ಮೆಕ್ಯಾನಿಕಲ್ ಪದವಿ ಪಡೆದಿದ್ದಾರೆ.

ರಾಜ್ಯ ಸರ್ಕಾರದ ಸಮಾಜ ಕಲ್ಯಾಣ ಇಲಾಖೆಯಿಂದ ಶಿಷ್ಯವೇತನದಡಿ ದೆಹಲಿಯಲ್ಲಿ 1 ವರ್ಷ ತರಬೇತಿ ಪಡೆದಿದ್ದರು. ದೆಹಲಿಯ ಶಂಕರ ಐಎಎಸ್ ಇನ್ಸಿಟಿಟ್ಯೂಟ್, ಇನ್ ಸೈಟ್ಸ್ ಐಎಎಸ್, ಅಕ್ಕಾ ಐಎಎಸ್ ಸೆಂಟರ್ ಗಳಲ್ಲಿ ಓದಿದ್ದರು. ಸದ್ಯ ಬೆಂಗಳೂರಿನಲ್ಲಿ ರೂಮ್ ಮಾಡಿಕೊಂಡು ಯುಪಿಎಸ್ಸಿ ಪರೀಕ್ಷೆಗೆ ಓದುತ್ತಿದ್ದರು. ಸತತ ಓದು, ಸ್ಪಷ್ಟವಾದ ಗುರಿ ಇಂದಿನ ನನ್ನ ಸಾಧನೆಗೆ ಕಾರಣ. ಬಡತನ, ಎಷ್ಟೇ ಸಮಸ್ಯೆ ಇದ್ದರೂ ಸಾಧನೆಗೆ ಅಡ್ಡಿಯಾಗದು ಎನ್ನುತ್ತಾರೆ

Related Articles

Back to top button