*ಟ್ರ್ಯಾಕ್ಟರ್ ಗೆ ಬೈಕ್ ಡಿಕ್ಕಿ: ನವವಿವಾಹಿತೆ ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ಗೆ ಬೈಕ್ ಡಿಕ್ಕಿಯಾದ ಪರಿಣಾಮ ನವವಿವಾಹಿತೆ ಮೃತಪಟ್ಟ ಘಟನೆ ನಡೆದಿದೆ.
ಮೃತ ಮಹಿಳೆಯನ್ನು ವರ್ಷಿಣಿ ಎಂದು ಗುರುತಿಸಲಾಗಿದೆ. ವರ್ಷಿಣಿ ಬಾಗೇಪಲ್ಲಿ ತಾಲೂಕಿನ ಚೆಂಚುರಾಯನಪಲ್ಲಿ ಗ್ರಾಮದವರಾಗಿದ್ದು ಕಳೆದ ಮೂರು ತಿಂಗಳ ಹಿಂದೆಯಷ್ಟೇ ಸುರೇಂದ್ರ ಅವರ ಜೊತೆಗೆ ಮದುವೆಯಾಗಿದ್ದರು. ನವ ದಂಪತಿ ವರ್ಷಿಣಿ ಹಾಗೂ ಪತಿ ಸುರೇಂದ್ರ ಬೈಕ್ನಲ್ಲಿ ತೆರಳುತ್ತಿದ್ದರು. ಆದರೆ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಗೂಳೂರು ರಸ್ತೆಯ ಚಿನ್ನೇಪಲ್ಲಿ ಕ್ರಾಸ್ನ ಆರ್.ಎಸ್. ಕಲ್ಯಾಣ ಮಂಟಪದ ರಸ್ತೆಯಲ್ಲಿ ಕೆಟ್ಟುನಿಂತಿದ್ದ ಟ್ಯಾಕ್ಟರ್ಗೆ ಬೈಕ್ ಡಿಕ್ಕಿ ಹೊಡೆದಿದೆ.
ಘಟನೆ ವೇಳೆ ವರ್ಷಿಣಿಗೆ ಗಂಭೀರ ಗಾಯಗಳಾಗಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಪತಿ ಸುರೇಂದ್ರನಿಗೂ ಅಪಘಾತದ ವೇಳೆ ಗಾಯವಾಗಿದ್ದು ಅವರನ್ನು ಬಾಗೇಪಲ್ಲಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಸುರೇಂದ್ರ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಘಟನೆಗೆ ಸಂಬಂಧಿಸಿ ಬಾಗೇಪಲ್ಲಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.




