ಇದು ಬೊಮ್ಮಾಯಿ ಗೃಹ ಸಚಿವರಾಗಿದ್ದಾಗ ನಡೆದ ಪ್ರಕರಣ; ಕೇಸ್ ನಲ್ಲಿ ಯಾರಿದ್ದಾರೆಂದು ಅವರೇ ಬಹಿರಂಗ ಪಡಿಸಲಿ; ಸಿದ್ದರಾಮಯ್ಯ ಆಗ್ರಹ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: 2018ರಲ್ಲಿ ಕಾಂಗ್ರೆಸ್ ನಾಯಕರು ತಮ್ಮದೇ ಸರ್ಕಾರವಿದ್ದರೂ ಬಿಟ್ ಕಾಯಿನ್ ಆರೋಪಿ ಶ್ರೀಕಿ ವಿರುದ್ಧ ಯಾಕೆ ಕ್ರಮ ಕೈಗೊಳ್ಳಲಿಲ್ಲ ಎಂಬ ಸಚಿವ ಆರ್.ಅಶೋಕ್ ಹೇಳಿಕೆಗೆ ತಿರುಗೇಟು ನೀಡಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಅಂದು ನಾನು ಸಿಎಂ ಆಗಿದ್ದಿದು ನಿಜ. ಆದರೆ ಬಿಟ್ ಕಾಯಿನ್ ಬಗ್ಗೆ ಯಾರೂ ದೂರು ನೀಡಿರಲಿಲ್ಲ. ಬಿಜೆಪಿಯವರಿಗೆ ಗೊತ್ತಿದ್ದರೆ ಯಾಕೆ ಸುಮ್ಮನಿದ್ದರು? ಎಂದು ಪ್ರಶ್ನಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, 2018ರಲ್ಲಿ ನಾನು ಸಿಎಂ ಸ್ಥಾನದಲ್ಲಿದ್ದದ್ದು ನಿಜ. ಆದರೆ ಬಿಟ್ ಕಾಯಿನ್ ಹಗರಣದ ಬಗ್ಗೆ ಯಾರೂ ಕೂಡ ದೂರು ನೀಡಿರಲಿಲ್ಲ. ದೂರನ್ನೇ ನೀಡದಿದ್ದರೆ ನಮಗೆ ಹೇಗೆ ಗೊತ್ತಾಗುತ್ತೆ? ಬಿಟ್ ಕಾಯಿನ್ ಹಗರಣದ ಬಗ್ಗೆ ಒಂದು ವೇಳೆ ಬಿಜೆಪಿ ನಾಯಕರಿಗೆ ಗೊತ್ತಿದ್ದಿದ್ದರೆ ಯಾಕೆ ಸುಮ್ಮನಿದ್ದರು? ಆಗ ಜವಾಬ್ದಾರಿಯುತ ವಿಪಕ್ಷ ಸ್ಥಾನದಲ್ಲಿದ್ದ ಬಿಜೆಪಿ ನಾಯಕರು ಪ್ರಕರಣ ಹೊರತರಬೇಕಿತ್ತು ಎಂದು ಹೇಳಿದ್ದಾರೆ.
ಮೊಹಮ್ಮದ್ ನಲಪಾಡ್ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಾದಾಗ ಯಾವುದೇ ಬಿಟ್ ಕಾಯಿನ್ ಕೇಸ್ ಬಗ್ಗೆ ಕೇಳಿಬಂದಿಲ್ಲ. ಬಿಟ್ ಕಾಯಿನ್ ಪ್ರಕರಣ ಸಿಎಂ ಬೊಮ್ಮಾಯಿ ಗೃಹ ಸಚಿವರಾಗಿದ್ದಾಗ ನಡೆದಿರುವ ಪ್ರಕರಣ. ಈ ಕೇಸ್ ನಲ್ಲಿ ಯಾರಿದ್ದಾರೆಂಬುದನ್ನು ಸಿಎಂ ಬೊಮ್ಮಾಯಿ ಬಹಿರಂಗಪಡಿಸಬೇಕು ಎಂದು ಆಗ್ರಹಿಸಿದರು.
ಬಿಟ್ ಕಾಯಿನ್ ಬಡಿದಾಟ; ಕಾಂಗ್ರೆಸ್ ವಿರುದ್ಧ ಆರ್.ಅಶೋಕ್ ವಾಗ್ದಾಳಿ