Kannada NewsKarnataka NewsNationalPolitics

ಬಿಜೆಪಿ -ಜೆಡಿಎಸ್‌ ಪಿತೂರಿಗೆ ಜಗ್ಗುವುದಿಲ್ಲ; ಕೆ.ಸಿ. ವೇಣುಗೋಪಾಲ್

ಪ್ರಗತಿವಾಹಿನಿ ಸುದ್ದಿ: ಬಿಜೆಪಿ– ಜೆಡಿಎಸ್‌ ಪಕ್ಷಗಳ ಪಿತೂರಿಗೆ ನಾವು ಜಗ್ಗುವುದಿಲ್ಲ. ನಾವು ಜನರ ಬಳಿಗೆ ಹೋಗುತ್ತೇವೆ. ಅವರಿಗೆ ವಾಸ್ತವಾಂಶ ವಿವರಿಸುತ್ತೇವೆ. ಒಗ್ಗಟ್ಟಿನಿಂದ ಹೋರಾಡುತ್ತೇವೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್‌ ಅವರು  ಸ್ಪಷ್ಟ ಪಡಿಸಿದರು.

ಅವರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿವಾಸದಲ್ಲಿ ಸಚಿವರೊಂದಿಗೆ ಸಭೆ ನಡೆಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. 

ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ನಡೆಯುತ್ತಿರುವ ಗಂಭೀರ ಬೆಳವಣಿಗೆಗಳ ಕುರಿತು ರಾಜ್ಯದ ಸಚಿವರೊಂದಿಗೆ ಚರ್ಚಿಸಲಾಯಿತು. ಕರ್ನಾಟಕ ರಾಜ್ಯ ಬಿಜೆಪಿಯು ಸರ್ಕಾರಗಳನ್ನು ಉರುಳಿಸುವ ಇತಿಹಾಸವನ್ನು ಹೊಂದಿದೆ.

 2018ರಲ್ಲಿ ಕಾಂಗ್ರೆಸ್- ಜೆಡಿಎಸ್‌ ಮೈತ್ರಿ ಸರ್ಕಾರವನ್ನು ಉರುಳಿಸಿದ್ದೇ ಬಿಜೆಪಿ ಕೇಂದ್ರ ನಾಯಕತ್ವದ ಪಿತೂರಿಯಿಂದ. ಅದೇ ರೀತಿಯ ಸ್ಪಷ್ಟ ಉದ್ದೇಶದಿಂದ ಈಗಲೂ ಕರ್ನಾಟಕ ಕಾಂಗ್ರೆಸ್‌ ಸರ್ಕಾರವನ್ನು ಗುರಿಯಾಗಿಸಿಕೊಂಡಿದ್ದಾರೆ. 

ತಮ್ಮ ಪಕ್ಷವನ್ನು ಉಳಿಸಿಕೊಳ್ಳಲು ಈ ಕೆಲಸ ಮಾಡುತ್ತಿದ್ದಾರೆ  ಎಂದು ಟೀಕಿಸಿದರು

ಪ್ರಜ್ವಲ್‌ ರೇವಣ್ಣ ಪ್ರಕರಣ ಬೆಳಕಿಗೆ ಬಂದಾಗಲೇ ಇಡೀ ದೇಶ ಕಾಂಗ್ರೆಸ್‌ ಸರ್ಕಾರದ ವಿರುದ್ಧದ ಪಿತೂರಿಯನ್ನು ಗಮನಿಸಿದೆ. ಬಿಜೆಪಿ ಹಾಗೂ ಜೆಡಿಎಸ್‌ ನ ಮುಖಂಡರು ತಮ್ಮ ಮಕ್ಕಳನ್ನು ಉಳಿಸಿಕೊಳ್ಳಲು ನಮ್ಮ ಚುನಾಯಿತ ಸರ್ಕಾರವನ್ನು ಗುರಿಯಾಗಿಸಿಕೊಂಡಿದ್ದಾರೆ ಎಂದರು. 

ಸಿದ್ದರಾಮಯ್ಯ ಅವರು ಬೆಳೆದು ಬಂದ ಹಾದಿ ಎಲ್ಲರಿಗೂ ತಿಳಿದಿದೆ

ಎಲ್ಲರಿಗೂ ಸಿದ್ದರಾಮಯ್ಯನವರ ಪ್ರಾಮಾಣಿಕತೆಯ ಅರಿವಿದೆ. ಅವರು ಮುಖ್ಯಮಂತ್ರಿ ಪದವಿಗೆ ಹೊಸಬರಲ್ಲ. ಅವರ ರಾಜಕೀಯ ಬದುಕು, ತತ್ವ ಸಿದ್ಧಾಂತ, ಹಿನ್ನೆಲೆ ಅವರು ಹಿಂದೆ ಹೇಗಿದ್ದರು, ಈಗ ಹೇಗಿದ್ದಾರೆ ಎಂಬುದು ಕರ್ನಾಟಕದ ಜನತೆಗೆ ಚೆನ್ನಾಗಿ ತಿಳಿದಿದೆ.

ಜನಪ್ರಿಯತೆ ಸಹಿಸದೆ ಸರ್ಕಾರ ಅಸ್ತಿರಗೊಳಿಸುವ ಹುನ್ನಾರ

ನಮ್ಮ ಸರ್ಕಾರ ಅಸ್ತಿತ್ವಕ್ಕೆ ಬಂದ ಕೂಡಲೇ ಬಡವರಿಗಾಗಿ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಲಾಯಿತು. ಬಿಜೆಪಿ ಮತ್ತು ಜೆಡಿಎಸ್‌ ನವರಿಗೆ ಇದು ರಾಜಕೀಯವಾಗಿ ನಷ್ಟ ಉಂಟು ಮಾಡುವುದು ಹಾಗೂ ವಿವಿಧ ಪ್ರಕರಣಗಳ ತನಿಖೆಯಿಂದ ವೈಯಕ್ತಿಕವಾಗಿಯೂ ಅವರಿಗೆ ತೊಂದರೆಯಾಗಲಿದೆ ಎಂಬುದು ಅರಿವಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಯವರ ವಿರುದ್ಧ ಕೆಲವು ಆರೋಪಗಳನ್ನು ಮಾಡುವ ಮೂಲಕ ಸರ್ಕಾರವನ್ನು ಅಸ್ಥಿರಗೊಳಿಸುವ ಪಿತೂರಿ ನಡೆಸಿದ್ದಾರೆ.

ರಾಜ್ಯಪಾಲರ ಬಳಕೆ ದುರದೃಷ್ಟಕರ

ದುರದೃಷ್ಟವಶಾತ್‌ ರಾಜ್ಯದ ರಾಜ್ಯಪಾಲರು ಬಿಜೆಪಿ ಪಿತೂರಿಯ ಸಾಧನವಾಗಿದ್ದಾರೆ. ಮುಖ್ಯಮಂತ್ರಿಯವರಿಗೆ ಕಾರಣ ಕೇಳಿ ನೋಟೀಸ್‌ ನೀಡುವ ಮೂಲಕ ಸರ್ಕಾರ ಅಸ್ಥಿರಗೊಳ್ಳಲಿದೆ ಎಂಬ ಭಾವನೆ ಮೂಡಿಸುವ ಪ್ರಯತ್ನ ಮಾಡಲಾಗುತ್ತಿದೆ. ಆದರೆ ಕಾಂಗ್ರೆಸ್‌ ಪಕ್ಷವು ಈ ಪಿತೂರಿ ವಿರುದ್ಧ ಹೋರಾಡಲು ತೀರ್ಮಾನಿಸಿದ್ದು, ಕರ್ನಾಟಕದ ಜನತೆಗೆ ವಾಸ್ತವಾಂಶದ ಅರಿವು ಮೂಡಿಸಲು ನಿರ್ಧರಿಸಿದೆ. ಸಚಿವರು, ಶಾಸಕರು ಜಿಲ್ಲೆಗಳು, ತಮ್ಮ ಕ್ಷೇತ್ರಗಳಿಗೆ ಭೇಟಿ ನೀಡಿ ಜನರಿಗೆ ಸರ್ಕಾರದ ಸಾಧನೆಗಳನ್ನು ವಿವರಿಸಿ, ಗ್ಯಾರಂಟಿ ಯೋಜನೆಗಳನ್ನು ಮುಗಿಸುವ ಬಿಜೆಪಿ-ಜೆಡಿಎಸ್‌ ನ ಹುನ್ನಾರವನ್ನು ಬಯಲಿಗೆಳೆಯಲಾಗುವುದು.

ಇದಕ್ಕಾಗಿ ಇಂದು ಸಭೆ ನಡೆಸಿದ್ದು, ರಾಜ್ಯದ ಬಡ ಜನರ ಕುರಿತು ಕಾಂಗ್ರೆಸ್‌ ಸರ್ಕಾರಕ್ಕೆ ಅತೀವ ಕಾಳಜಿ ಇದ್ದು, ಗ್ಯಾರಂಟಿ ಯೋಜನೆಗಳನ್ನು ಮುಂದುವರೆಸಲಾಗುವುದು. ಈ ಯೋಜನೆಗಳ ಕುರಿತು ನಮಗೆ ಹೆಮ್ಮೆ ಇದೆ ಎಂದರು. 

ಭ್ರಷ್ಟಾಚಾರ ಕುರಿತು ಬಿಜೆಪಿ ಮಾತಾಡುವುದು ಹಾಸ್ಯಾಸ್ಪದ

ಬಿಜೆಪಿ ಭ್ರಷ್ಟಾಚಾರದ ಕುರಿತು ಮಾತನಾಡುತ್ತಿರುವುದು ಅತ್ಯಂತ ಹಾಸ್ಯಾಸ್ಪದ. ವಿಜಯೇಂದ್ರ ಅವರ ಮೇಲೆ ಎಷ್ಟು ಆರೋಪಗಳಿವೆ?, ಪ್ರಜ್ವಲ್‌ ರೇವಣ್ಣ ವಿರುದ್ಧ ಎಷ್ಟು ಆರೋಪಗಳಿವೆ? ಅಂತವರು ತಾವೇ ಅತ್ಯಂತ ಸಭ್ಯರೆಂಬ ಸೋಗಿನಲ್ಲಿ ತಮ್ಮ ರಾಜಕೀಯ ಜೀವನದುದ್ದಕ್ಕೂ ಜನಪರ ಕಾಳಜಿ ಹೊಂದಿದ ರಾಜ್ಯದ ಮುಖ್ಯಮಂತ್ರಿ ವಿರುದ್ಧ ಆರೋಪಗಳನ್ನು ಮಾಡುತ್ತಿದ್ದಾರೆ. ರಾಜ್ಯದ ಬಡ ಜನರ ಜೊತೆ ನಿಂತ ಮುಖ್ಯಮಂತ್ರಿಯವರನ್ನು ಮುಗಿಸಲು ಮುಂದಾಗಿದ್ದಾರೆ ಎಂದರು. 

ಸಮಸ್ಯೆ ಇದ್ದರೆ ಕಾನೂನು ಕ್ರಮ ಕೈಗೊಳ್ಳಲಿ

ಆರೋಪಗಳ ಕುರಿತು ಕಾನೂನು ತನ್ನದೇ ಕ್ರಮ ವಹಿಸಲಿದೆ. ಈ ಬಗ್ಗೆ ನಮಗೆ ಯಾವುದೇ ಅಳುಕಿಲ್ಲ. ನಿಜವಾಗಿಯೂ ಸಮಸ್ಯೆ ಇದ್ದರೆ ಕಾನೂನಿನ ಮೊರೆ ಹೋಗಲಿ. ಅದರ ಬದಲಾಗಿ ಪ್ರತಿದಿನ ಸಿದ್ದರಾಮಯ್ಯ ಅವರ ವಿರುದ್ಧ ಪದೇ ಪದೇ ಭ್ರಷ್ಟಾಚಾರ ಆರೋಪ ಮಾಡುವುದು ಸರಿಯಲ್ಲ. ಅವರು ಗ್ಯಾರಂಟಿ ಯೋಜನೆಗಳು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗುರಿಯಾಗಿಸಿಕೊಂಡಿದ್ದಾರೆ. 

ಕಾಂಗ್ರೆಸ್‌ ಬಡವರ ಪರವಾಗಿದೆ ಎಂದು ಅವರಿಗೂ ಗೊತ್ತಿದೆ. ಹಿಂದಿನ ಚುನಾವಣೆ ಕರ್ನಾಟಕದಲ್ಲಿ ಬಡವರು-ಶ್ರೀಮಂತರ ನಡುವೆ ಇತ್ತು. ಆದ್ದರಿಂದಲೇ  135 ಸೀಟುಗಳೊಂದಿಗೆ ಗೆಲುವು ಸಾಧಿಸಿ ಅಧಿಕಾರಕ್ಕೆ ಬಂದಿದ್ದೇವೆ. 

ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಮಾಡಿರುವ ತಾರತಮ್ಯ ಕುರಿತು ಯಾರೂ ಮಾತನಾಡುತ್ತಿಲ್ಲ. ನಿರ್ಮಲಾ ಸೀತಾರಾಮನ್‌ ಅವರು ಇಲ್ಲಿಂದಲೇ ಆಯ್ಕೆಯಾಗಿದ್ದರೂ ಯಾವುದೇ ನೆರವು ಒದಗಿಸಿಲ್ಲ. ಸೀಮಿತ ಸಂಪನ್ಮೂಲದೊಂದಿಗೆ ಸರ್ಕಾರ ಬಡವರ ಕಲ್ಯಾಣಕ್ಕಾಗಿ ಶ್ರಮಿಸುತ್ತಿದೆ. ಕೇಂದ್ರ ಸರ್ಕಾರ ಬೆಂಬಲ ನೀಡುವ ಬದಲಿಗೆ ಸರ್ಕಾರವನ್ನು ಅಸ್ಥಿರಗೊಳಿಸಲು ಪ್ರಯತ್ನಿಸುತ್ತಿದೆ.  ನಾವು ಇದರ ವಿರುದ್ಧ ಒಗ್ಗಟ್ಟಿನಿಂದ ಹೋರಾಡುತ್ತೇವೆ ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ರಾಜ್ಯ ಉಸ್ತುವಾರಿ ಸುರ್ಜೇವಾಲ ಅವರು ಉಪಸ್ಥಿತರಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button