
ರೈತರ ಸಮಸ್ಯೆ ಆಲಿಸಿದ ಶಶಿಕಲಾ ಜೊಲ್ಲೆ, ಎನ್. ರವಿಕುಮಾರ್ ನಿಯೋಗ
ಪ್ರಗತಿವಾಹಿನಿ ಸುದ್ದಿ: ಯರಗಟ್ಟಿ: ಬೆಳಗಾವಿ ಜಿಲ್ಲೆಯ ಯರಗಟ್ಟಿ ತಾಲೂಕಿನ ಸೊಪಡ್ಲ ಗ್ರಾಮದಲ್ಲಿ ಮಳೆ ಇಲ್ಲದೆ ಬೆಳೆ ಹಾನಿಯಾದ ಪ್ರದೇಶಗಳಿಗೆ ಭಾರತೀಯ ಜನತಾ ಪಕ್ಷದ ಮುಖಂಡರ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿತು.
ವಿಧಾನಪರಿಷತ್ ಸದಸ್ಯ ಎನ್. ರವಿಕುಮಾರ್, ಶಾಸಕಿ ಶಶಿಕಲಾ ಜೊಲ್ಲೆ ನೇತೃತ್ವದಲ್ಲಿ ಬಿಜೆಪಿ ಮುಖಂಡರು ಹಾಗೂ ರೈತ ಮೋರ್ಚಾದ ಪ್ರಮುಖರು ಸೊಪಡ್ಲ ಗ್ರಾಮಕ್ಕೆ ತೆರಳಿ ಹಾನಿಗೊಳಗಾದ ಕೃಷಿ ಜಮೀನುಗಳನ್ನು ವೀಕ್ಷಿಸಿದರು. ಬೆಳೆ ಹಾನಿಯಿಂದ ರೈತರು ಎದುರಿಸುತ್ತಿರುವ ಸಮಸ್ಯೆಗಳನ್ನು ಖುದ್ದಾಗಿ ಆಲಿಸಿ, ರೈತರೊಂದಿಗೆ ಚರ್ಚೆ ನಡೆಸಿದರು.
ಪ್ರತಿಕೂಲ ಹವಾಮಾನ ಹಾಗೂ ವಿವಿಧ ಕಾರಣಗಳಿಂದ ಬೆಳೆಗಳಿಗೆ ಹಾನಿಯಾಗಿದ್ದು, ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಹೀಗಾಗಿ ಹಾನಿಗೊಳಗಾದ ಬೆಳೆಗಳ ಸಮರ್ಪಕ ಸಮೀಕ್ಷೆ ನಡೆಸಿ, ಅರ್ಹ ರೈತರಿಗೆ ಸರ್ಕಾರದಿಂದ ಸೂಕ್ತ ಪರಿಹಾರ ದೊರಕಿಸಿಕೊಡಬೇಕು ಎಂದು ಬಿಜೆಪಿ ಮುಖಂಡರು ಆಗ್ರಹಿಸಿದರು.
ರೈತರ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತಂದು, ಬೆಳೆ ಹಾನಿಗೆ ಸೂಕ್ತ ಪರಿಹಾರ ನೀಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ಒತ್ತಾಯಿಸುವುದಾಗಿ ಬಿಜೆಪಿ ಮುಖಂಡರು ತಿಳಿಸಿದರು. ರೈತರ ಸಂಕಷ್ಟದ ಸಂದರ್ಭದಲ್ಲಿ ಪಕ್ಷ ಅವರೊಂದಿಗೆ ನಿಲ್ಲಲಿದೆ ಎಂದು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸುಭಾಷ್ ಪಾಟೀಲ, ವಿಠ್ಠಲ ಹಲಗೇಕರ ಹಾಗೂ ದುರ್ಯೋಧನ ಐಹೊಳೆ, ಮಾಜಿ ಶಾಸಕ ಸಂಜಯ ಪಾಟೀಲ, ರೈತ ಮೋರ್ಚಾ ರಾಜ್ಯಾಧ್ಯಕ್ಷ ಎ.ಎಸ್. ಪಾಟೀಲ (ನಡಹಳ್ಳಿ), ವಿಭಾಗ ಸಹ ಪ್ರಭಾರಿ ಬಸವರಾಜ ಯಂಕಂಚಿ, ರೈತ ಮೋರ್ಚಾ ಜಿಲ್ಲಾಧ್ಯಕ್ಷ ಜಗದೀಶ್ ಬೂದಿಹಾಳ ಸೇರಿದಂತೆ ಬಿಜೆಪಿ ಮುಖಂಡರು, ರೈತ ಮೋರ್ಚಾದ ಪದಾಧಿಕಾರಿಗಳು ಹಾಗೂ ಸ್ಥಳೀಯ ರೈತರು ಉಪಸ್ಥಿತರಿದ್ದರು.



