*ಪ್ರತಿಭಟನೆ ವೇಳೆ ಪೊಲೀಸರ ಜೊತೆ ಮಾತಿನ ಚಕಮಕಿ: ಬಿಜೆಪಿ ಕಾರ್ಯಕರ್ತರು ಪೊಲೀಸರ ವಶಕ್ಕೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಇಂದು ಬೆಳಗಾವಿಯಲ್ಲಿ ಬಿಜೆಪಿ ನಡೆಸುತ್ತಿದ್ದ ಪ್ರತಿಭಟನೆಯ ವೇಳೆ ಪೊಲೀಸರು ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದು ಸುಮಾರು 8ಕ್ಕೂ ಅಧಿಕ ಕಾರ್ಯಕರ್ತರನ್ನು ಮಾರ್ಕೇಟ್ ಪೊಲೀಸರು ವಶಕ್ಕೆ ಪಡೆದರು.
ಬೆಳಗಾವಿ ನಗರದ ರಾಣಿ ಚನ್ನಮ್ಮ ಸರ್ಕಲ್ ಹತ್ತಿರ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ನಡೆಯಿತು. ಸಿಎಂ ಸಿದ್ದರಾಮಯ್ಯ ಡಿ.ಸಿ.ಎಂ ಡಿ.ಕೆ ಶಿವಕುಮಾರ್ ಭಾವಚಿತ್ರ ಇರುವ ಪ್ಲೇ ಕಾರ್ಡಗಳನ್ನು ಸುಟ್ಟು ಆಕ್ರೋಶ ವ್ಯಕ್ತಪಡಿಸಿದ ಕಾರ್ಯಕರ್ತರು ಅರ್ಧ ಗಂಟೆಗೂ ಹೆಚ್ಚುಕಾಲ ರಸ್ತೆ ತಡೆ ಮಾಡಿದರು.
ರಾಜ್ಯ ಸರಕಾರ ಬಜೆಟ್ ಮಂಡಿಸಿದ್ದು ಹಿಂದು ವಿರೋಧಿ ಬಜೆಟ್ ಹಾಗೂ ದಲಿತರ ಅನುದಾನವನ್ನು ತನ್ನ ಗ್ಯಾರಂಟಿ ಯೋಜನೆಗೆ ಬಳಕೆ ಮಾಡಿಕೊಂಡಿದೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಜಿಲ್ಲಾಧಿಕಾರಿ ಕಚೇರಿ ಎದುರು ಅಳವಡಿಸಲಾದ ಗ್ಯಾರಂಟಿ ಯೋಜನೆಯ ಬ್ಯಾನರ್ ಹರಿದು ಆಕ್ರೋಶ ವ್ಯಕ್ತಪಡಿಸುತ್ತಿದ್ದ ವೇಳೆ ಪೊಲೀಸರು ಆಗಮಿಸಿ ತಡೆದ ಪರಿಣಾಮ ಪೊಲೀಸರು ಹಾಗೂ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆಯಿತು. ಇದೇ ಸಂದರ್ಭದಲ್ಲಿ ಪೊಲೀಸರಿಗೆ ತಳ್ಳಾಟ ನೂಕಾಟ ನಡೆಸಿದ ಸುಮಾರು 8 ಕ್ಕೂ ಅಧಿಕ ಬಿಜೆಪಿ ಕಾರ್ಯಕರ್ತರನ್ನು ಮಾರ್ಕೆಟ್ ಪೊಲೀಸರು ವಶಕ್ಕೆ ಪಡೆದುಕೊಂಡರು.