
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕೌಟುಂಬಿಕ ವಿಚಾರಕ್ಕೆ ಸಂಬಂಧಿಸಿದ ಕ್ಷುಲ್ಲಕ ಕಾರಣದ ಜಗಳವೊಂದು ಇಬ್ಬರು ಸಹೋದರರ ಭೀಕರ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಯರಗಟ್ಟಿ ತಾಲೂಕಿನ ನುಗ್ಗಾನಟ್ಟಿ ಗ್ರಾಮದಲ್ಲಿ ನಡೆದಿದೆ.
ಲಗಮಪ್ಪ ರಾಮಣ್ಣವರ (32) ಹಾಗೂ ಬಸಪ್ಪ ರಾಮಣ್ಣವರ (38) ಕೊಲೆಯಾದ ದುರ್ದೈವಿ ಸಹೋದರರು. ಮೃತ ಸಹೋದರರು ಹಾಗೂ ಅವರ ಸಂಬಂಧಿಕರ ನಡುವೆ ಕೌಟುಂಬಿಕ ವಿಚಾರವಾಗಿ ಜಗಳ ಆರಂಭವಾಗಿದೆ. ಮಾತಿನ ಚಕಮಕಿಯಾಗಿದ್ದ ವಾಗ್ವಾದ, ಕ್ಷಣಾರ್ಧದಲ್ಲೇ ತೀವ್ರ ಸ್ವರೂಪ ಪಡೆದುಕೊಂಡಿದೆ. ಈ ವೇಳೆ ಉದ್ರಿಕ್ತಗೊಂಡ ಸುಮಾರು ಆರು ಮಂದಿ ಸಂಬಂಧಿಕರ ಗುಂಪು, ಸಹೋದರರ ಮೇಲೆ ಮಾರಕಾಸ್ತ್ರಗಳಿಂದ ಏಕಾಏಕಿ ತೀವ್ರವಾಗಿ ಹಲ್ಲೆ ನಡೆಸಿದೆ. ಹಲ್ಲೆಯ ರಭಸಕ್ಕೆ ತೀವ್ರ ರಕ್ತಸ್ರಾವವಾಗಿ ಇಬ್ಬರು ಸಹೋದರರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.
ಘಟನಾ ಸ್ಥಳಕ್ಕೆ ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ಕೆ. ರಾಮರಾಜನ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಬಸರಗಿ, ಮುರಗೋಡ ಸಿಪಿಐ ಐ.ಎಂ. ಮಠಪತಿ ಹಾಗೂ ಪಿಎಸ್ಐ ಎಲ್.ಬಿ. ಮಾಳಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಘಟನೆಗೆ ಸಂಬಂಧಿಸಿದಂತೆ ಮುರಗೋಡ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ. ಹತ್ಯೆಗೆ ಕಾರಣವಾದ ನಿಖರ ಹಿನ್ನೆಲೆಯ ಕುರಿತು ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಸದ್ಯ ಕೃತ್ಯ ಎಸಗಿ ತಲೆಮರೆಸಿಕೊಂಡಿರುವ ಆರು ಮಂದಿ ಆರೋಪಿಗಳ ಬಂಧನಕ್ಕಾಗಿ ಪೊಲೀಸರು ವಿಶೇಷ ಕಾರ್ಯಾಚರಣೆ ಆರಂಭಿಸಿದ್ದು ಶೀಘ್ರದಲ್ಲೇ ಆರೋಪಿಗಳನ್ನು ವಶಕ್ಕೆ ಪಡೆಯುವುದಾಗಿ ತಿಳಿಸಿದ್ದಾರೆ.
ಒಂದೇ ಕುಟುಂಬದ ಇಬ್ಬರ ಭೀಕರ ಕೊಲೆಯಿಂದಾಗಿ ನುಗ್ಗಾನಟ್ಟಿ ಗ್ರಾಮದಲ್ಲಿ ಭಾರೀ ಆತಂಕ ಹಾಗೂ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಮುರಗೋಡ ಠಾಣೆಯ ಪೊಲೀಸರು ತಕ್ಷಣವೇ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಬಳಿಕ ವಾರಸುದಾರರಿಗೆ ಒಪ್ಪಿಸಿ ಅಂತ್ಯಕ್ರಿಯೆ ನೆರವೇರಿಸಲಾಗಿದೆ.


