Election NewsKarnataka NewsLatestPolitics

*ಮತದಾರರಿಗೆ ಹಣ ಹಂಚಿಕೆ ಆರೋಪ; ಕಾಂಗ್ರೆಸ್ ಮುಖಂಡನ ಕಾರಿಗೆ ಮುತ್ತಿಗೆ ಹಾಕಿ ಆಕ್ರೋಶ*

ಪ್ರಗತಿವಾಹಿನಿ ಸುದ್ದಿ: ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಉಪಚುನಾವಣೆ ಹಿನ್ನೆಲೆಯಲ್ಲಿ ಮತದಾನ ಬಿರುಸಿನಿಂದ ಸಾಗಿದೆ. ಬಿಸಿಲನ್ನೂ ಲೆಕ್ಕಿಸದೇ ಮತದಾರರು ಮತಗಟ್ಟೆಗೆ ಆಗಮಿಸಿ ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ.

Home add -Advt

ಈ ನಡುವೆ ಬಾಗಲಕೋಟೆಯ ನವನಗರದ ವಾಂಬೆ ಕಾಲೋನಿಯಲ್ಲಿ ಮತದಾರರಿಗೆ ಹಣ ಹಂಚಿಕೆ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಕಾಂಗ್ರೆಸ್ ಪಕ್ಷದವರು ತಮಗೆ ತಲಾ 500 ರೂಪಾಯಿ ನೀಡಿದ್ದಾರೆ ಎಂದು ಮಹಿಳೆಯೊಬ್ಬರು ನೋಟು ಪ್ರದರ್ಶಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದೆ. ‘ಕೇವಲ ಐನೂರು ರೂಪಾಯಿ ಮಾತ್ರ ಕೊಟ್ಟಿದ್ದಾರೆ’ ಎಂದು ಮಹಿಳೆ ಅಸಮಾಧಾನ ವ್ಯಕ್ತಪಡಿಸುತ್ತಿರುವ ದೃಶ್ಯ ವಿಡಿಯೋದಲ್ಲಿ ಕಂಡುಬಂದಿದೆ.

ಇದೇ ವೇಳೆ, ಹಣ ಹಂಚಲು ಬಂದಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಮುಖಂಡ ಸಂತೋಷ್ ಎಂಬುವವರ ಕಾರಿಗೆ ಸ್ಥಳೀಯರು ಮುತ್ತಿಗೆ ಹಾಕಿದರು. ಜನರ ಆಕ್ರೋಶ ಕಂಡು ಕಾರಿನಿಂದ ಇಳಿದು ಬಂದ ಸಂತೋಷ್, ‘ನನ್ನ ಕಾರಿಗೆ ಹೊಡೆದವರು ಯಾರು’ ಎಂದು ಪ್ರಶ್ನಿಸಿ ಸ್ಥಳೀಯರೊಂದಿಗೆ ವಾಗ್ವಾದ ನಡೆಸಿದರು.

ಮತದಾನದ ದಿನವೇ ಬಹಿರಂಗವಾಗಿ ಹಣ ಹಂಚಿದ ಆರೋಪ ಕೇಳಿಬಂದಿದ್ದು, ಚುನಾವಣಾ ಕಣದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ.


Related Articles

Back to top button