ಸಿ.ಪಿ ಯೋಗೇಶ್ವರ್ ಗೆ ಸಚಿವ ಸ್ಥಾನ ನೀಡಲು ಮೂಲ ಬಿಜೆಪಿಗರ ವಿರೋಧ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು; ರಾಜ್ಯ ಸಚಿವ ಸಂಪುಟಕ್ಕೆ ಸಿ.ಪಿ.ಯೋಗೇಶ್ವರ್ ಸೇರ್ಪಡೆಯಾಗಲು ಸ್ವತಃ ಬಿಜೆಪಿ ಶಾಸಕರೇ ವಿರೋಧಿಸಿದ್ದು, ಅಕಸ್ಮಾತ್ ಯೋಗೇಶ್ವರ್ ಸಚಿವರಾಗಿ ಸಂಪುಟಕ್ಕೆ ಸೇರ್ಪಡೆಯಾದರೆ ತಾವು ರಾಜೀನಾಮೆ ನೀಡುವುದಾಗಿ ಹಲವರು ಬೆದರಿಕೆ ಒಡ್ಡಿದ್ದಾರೆ ಎಂದು ತಿಳಿದುಬಂದಿದೆ.

ಸಿ.ಪಿ. ಯೋಗೇಶ್ವರ್ ಆಪರೇಷನ್ ಕಮಲದಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದರಿಂದ ಅವರಿಗೂ ಸಚಿವ ಸ್ಥಾನ ನೀಡಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮನಸ್ಸು ಮಾಡಿದ್ದಾರೆ. ಸಂಭಾವ್ಯ ಸಚಿವರ ಪಟ್ಟಿಯಲ್ಲಿ ಯೋಗೇಶ್ವರ್ ಹೆಸರೂ ಇದೆ ಎನ್ನಲಾಗುತ್ತಿದೆ. ಆದರೆ, ಯಡಿಯೂರಪ್ಪ ನಿರ್ಧಾರಕ್ಕೆ ಮೂಲ ಬಿಜೆಪಿಗರೇ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Home add -Advt

ಈ ಕುರಿತು ಬಹಿರಂಗವಾಗಿಯೇ ಸಿಎಂ ಗೆ ಬೆದರಿಕೆ ಹಾಕಿರುವ ಹಲವಾರು ಶಾಸಕರು, ಚುನಾವಣೆಯಲ್ಲಿ ಸೋತವರನ್ನು ಸಚಿವರನ್ನಾಗಿ ಮಾಡುವುದಾದರೆ ನಾವು ಏಕೆ ಬೇಕು? ಸಿ.ಪಿ. ಯೋಗೇಶ್ವರ್ ಅವರನ್ನು ಸಚಿವರನ್ನಾಗಿ ಮಾಡಿದ್ರೆ ನಾವು ನಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇವೆ ಎಂದು ಬೆದರಿಕೆ ಒಡ್ಡಿದ್ದಾರೆ ಎನ್ನಲಾಗುತ್ತಿದೆ. ಅಲ್ಲದೇ ಈ ನಿಟ್ಟಿನಲ್ಲಿ ಕೆಲ ಬಿಜೆಪಿ ಶಾಸಕರು ಸಭೆಯನ್ನೂ ನಡೆಸಿದ್ದಾರೆ.

ಒಟ್ಟಿನಲ್ಲಿ ಸಚಿವ ಸಂಪುಟ ವಿಸ್ತರಣೆ ಕಗ್ಗಂಟಾಗಿದ್ದು, ಸಚಿವ ಸ್ಥಾನಕ್ಕಾಗಿ ಮೂಲ ಹಾಗೂ ವಲಸಿಗ ಬಿಜೆಪಿ ನಾಯಕರು ಭಾರಿ ಲಾಬಿ ನಡೆಸುತ್ತಿದ್ದು, ಇದೀಗ ಸಿ.ಪಿ ಯೋಗೇಶ್ವರ್ ಗೆ ಸಚಿವ ಸ್ಥಾನ ನೀಡಲು ಮುಂದಾಗಿರುವುದು ಬಿಜೆಪಿಯಲ್ಲಿ ಭಿನ್ನಮತ ಹೆಚ್ಚಲು ಕಾರಣವಾಗುತ್ತಿದೆ.

Related Articles

Back to top button