
ಪ್ರಗತಿವಾಹಿನಿ ಸುದ್ದಿ: ವಿವಾದಾತ್ಮಕ ಹೇಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಿಷತ್ ಬಿಜೆಪಿ ಸದಸ್ಯ ಸಿ.ಟಿ.ರವಿಗೆ ಹೈಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದೆ.
ನೀಟ್ ಪರೀಕ್ಷೆ ಅಕ್ರಮದ ವಿರುದ್ಧ ನಡೆದ ಪ್ರತಿಭಟನೆ ಬಗ್ಗೆ ಮಾತನಾಡುತ್ತಾ ಮುಲ್ಲಾಗಳಿಗೂ ನೀಟ್ ಗು ಏನು ಸಂಬಂಧ? ಎದೆ ಸೀಳಿದರೆ ಮೂರಕ್ಷರವಿಲ್ಲದ ಮುಲ್ಲಾಗಳು ಪ್ರತಿಭಟನೆ ಮಾಡುವುದೆಂದರೆ ಏನರ್ಥ? ಎಂದು ಪ್ರಶ್ನಿಸುವ ಮೂಲಕ ವಿವಾದ ಸೃಷ್ಟಿಸಿದ್ದರು. ಇದು ಮುಸ್ಲಿಂ ಸಮುದಾಯದ ಆಕ್ರೋಶಕ್ಕೆ ಕಾರಣವಾಗಿತ್ತು. ಜಾಮಿಯಾ ಮಸೀದಿ ಸಮಿತಿಯ ಅಧ್ಯಕ್ಷ ಮುದಾಸಿರ್ ನೀಡಿದ ದೂರಿನ ಆಧಾರದ ಮೇಲೆ ಚಿಕ್ಕಮಗಳೂರು ನಗರ ಠಾಣೆಯಲ್ಲಿ ಸಿ.ಟಿ. ರವಿ ವಿರುದ್ಧ ಎಫ್ಐಆರ್ ದಾಖಲಾಗಿತ್ತು.
ತಮ್ಮ ವಿರುದ್ಧದ ಎಫ್ಐಆರ್ ಪ್ರಶ್ನಿಸಿ ಸಿ.ಟಿ. ರವಿ ಹೈಕೋರ್ಟ್ ಮೆಟ್ಟಿಲೇರಿದ್ದರು. ತುರ್ತು ವಿಚಾರಣೆಗೆ ಕೋರಿದ್ದರು. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಜುಲೈ 31ಕ್ಕೆ ವಿಚಾರಣೆ ಮುಂದೂಡಿದ್ದು, ಅಲ್ಲಿಯವರೆಗೆ ಸಿ.ಟಿ.ರವಿ ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ಪೊಲೀಸರಿಗೆ ಸೂಚನೆ ನೀಡಿದೆ.
ಮತ್ತೊಂದೆಡೆ ಸಿ.ಟಿ.ರವಿ ವಿರುದ್ಧ ದಾಖಲಾಗಿದ್ದ ಎಫ್ಐಆರ್ ಕೇಸ್ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ವರ್ಗಾವಣೆಯಾಗಿದೆ.

