
ಪ್ರಗತಿವಾಹಿನಿ ಸುದ್ದಿ: ದೂರದ ಕೆನಡಾದಲ್ಲಿ ಕೆಲಸ ಮಾಡುತ್ತಿದ್ದ ಕನ್ನಡಿಗನೊಬ್ಬನನ್ನು ದುಷ್ಕರ್ಮಿಗಳು ಗುಂಡಿಟ್ಟು ಹತ್ಯೆಗೈದಿರುವ ಘಟನೆ ನಡೆದಿದೆ.
ಚಂದನ್ ಕುಮಾರ್ ( 37 ) ಹತ್ಯೆಯಾದ ಕನ್ನಡಿಗ. ಬೆಂಗಳೂರಿನ ನೆಲಮಂಗಲದ ತ್ಯಾಮಗೊಂಡ್ಲುವಿನ ನಿವಾಸಿ. ಕಳೆದ 6 ವರ್ಷಗಳಿಂದ ಚಂದನ್ ಕುಮಾರ್ ಕೆನಡಾದಲ್ಲಿ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು.
ನಿನ್ನೆ ರಾತ್ರಿ 9 ಗಂಟೆಗೆ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಚಂದನ್ ಕುಮಾರ್ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಸ್ಥಳದಲ್ಲೇ ಚಂದನ್ ಕುಮಾರ್ ಸಾವನ್ನಪ್ಪಿದ್ದಾರೆ.
ಚಂದನ್ ಮೇಲೆ ಗುಂಡಿನ ದಾಳಿ ನಡೆದಿದ್ದು, ಸಾವನ್ನಪ್ಪಿದ್ದಾಗಿ ಕೆನಡಾ ಪೊಲೀಸರು ಬೆಂಗಳೂರಿನ ನೆಲಮಂಗಲದಲ್ಲಿರುವ ಪೋಷಕರಿಗೆ ಕರೆ ಮಾಡಿ ತಿಳಿಸಿದ್ದಾರೆ. ಮಗನ ಸಾವಿನ ಸುದ್ದಿ ಕೇಳಿ ಪೋಷಕರಿಗೆ ಬರಸಿಡಿಲು ಬಡಿದಂತಾಗಿದೆ. ಚಂದನ್ ಕುಮಾರ್ ಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.



