Belagavi NewsBelgaum NewsCrimeKannada NewsKarnataka NewsNationalTravel

*ಬೆಳಗಾವಿಯಲ್ಲಿ ಅಕ್ಕ-ತಂಗಿಯರ ಮೇಲೆ ಹರಿದ ಕಾರು: ಅಕ್ಕ ಸಾವು*

ಪ್ರಗತಿವಾಹಿನಿ ಸುದ್ದಿ: ಶಾಲೆಯಿಂದ ಮನೆಗೆ ಮರಳುತ್ತಿದ್ದ ಇಬ್ಬರು ಅಕ್ಕ-ತಂಗಿಯರ ಮೇಲೆ ವೇಗವಾಗಿ ಬಂದ ಕಾರು ಹರಿದ ಪರಿಣಾಮ, ಓರ್ವ ವಿದ್ಯಾರ್ಥಿನಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ.

ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಮೇಖಳಿ ಗ್ರಾಮದ ಹೊರವಲಯದಲ್ಲಿ ಘಟನೆ ನಡೆದಿದೆ. ಮೇಖಳಿ ಗ್ರಾಮದ ಅನುದಾನಿತ ಸರ್ಕಾರಿ ಶಾಲೆಯ ವಿದ್ಯಾರ್ಥಿನಿಯರಾದ ಜಯಶ್ರೀ ಕೋಟರೆ ಮತ್ತು ಭಾಗ್ಯಶ್ರೀ ಕೋಟರೆ ಅವರು ಶಾಲೆ ಮುಗಿಸಿಕೊಂಡು ಮನೆಗೆ ನಡೆದುಕೊಂಡು ಬರುತ್ತಿದ್ದರು. ಈ ವೇಳೆ ನಾಗರಮುನ್ನೋಳಿ ಗ್ರಾಮದಿಂದ ರಾಯಬಾಗ ಪಟ್ಟಣದ ಕಡೆಗೆ ತೆರಳುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ಸಹೋದರಿಯರ ಮೇಲೆ ಹರಿದಿದೆ.

Home add -Advt

ಅಪಘಾತದ ತೀವ್ರತೆಗೆ ಜಯಶ್ರೀ ಕೋಟರೆ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಮತ್ತೋರ್ವ ಸಹೋದರಿ ಭಾಗ್ಯಶ್ರೀ ಗಂಭೀರವಾಗಿ ಗಾಯಗೊಂಡಿದ್ದು, ಅವಳ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ. 

ಗಾಯಾಳು ಭಾಗ್ಯಶ್ರೀಯನ್ನು ಹೆಚ್ಚಿನ ಚಿಕಿತ್ಸೆಗಾಗಿ ತಕ್ಷಣವೇ ಬೆಳಗಾವಿ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ. ಅಪಘಾತ ಸಂಭವಿಸಿದ ಸ್ಥಳಕ್ಕೆ ಬೆಳಗಾವಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಆರ್.ಬಿ.ಬಸರಗಿ ಹಾಗೂ ರಾಯಬಾಗ ಸಿಪಿಐ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. 

ಘಟನೆಗೆ ಸಂಬಂಧಿಸಿದಂತೆ ರಾಯಬಾಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಾರು ಚಾಲಕನನ್ನು ಪತ್ತೆ ಹಚ್ಚುವ ಕಾರ್ಯ ನಡೆಯುತ್ತಿದೆ. 

Related Articles

Back to top button