
ಪ್ರಗತಿವಾಹಿನಿ ಸುದ್ದಿ: ಸಿಇಟಿ ಪರೀಕ್ಷೆಗೆ ವಿದ್ಯಾರ್ಥಿಗೆ ಜನಿವಾರ ತೆಗೆಸಿದ ಪ್ರಕರಣ ರಾಜ್ಯಾದ್ಯಂತ ಆಕ್ರೋಶಕ್ಕೆ ಕಾರಣವಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಗೃಹರಕ್ಷಕ ದಳ ಸಿಬ್ಬಂದಿಗಳನ್ನು ಅಮಾನತು ಮಾಡಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.
ಎರಡು ದಿನಗಳ ಹಿಂದೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಆದಿಚುಂಚನಗಿರಿ ಕಾಲೇಜಿನ ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿಗೆ ಪರೀಕ್ಷಾ ಕೇಂದ್ರದ ಸಿಬ್ಬಂದಿ, ಅಧಿಕಾರಿಗಳು ಜನಿವಾರ ತೆಗೆಸಿದ್ದ ಘಟನೆ ನಡೆದಿತ್ತು. ಇದೇ ವೇಳೆ ಬೀದರ್ ನಲ್ಲಿ ವಿದ್ಯಾರ್ಥಿ ಜನಿವಾರ ತೆಗೆಯದ ಕಾರಣಕ್ಕೆ ಆತನನ್ನು ಪರೀಕ್ಷಾ ಕೇಂದ್ರದಿಂದಲೇ ಹೊರ ಕಳುಹಿಸಲಾಗಿದ್ದು, ವಿದ್ಯಾರ್ಥಿ ಒಂದು ವಿಷಯದ ಪರೀಕ್ಷೆ ಬರೆಯಲು ಸಾಧ್ಯವಾಗಿಲ್ಲ.
ಈ ಘಟನೆ ಖಂಡಿಸಿ ರಾಜ್ಯಾದ್ಯಂತ ಬ್ರಾಹ್ಮಣ ಮಹಾಸಭಾ, ವಿಪ್ರ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಇದೀಗ ಶಿವಮೊಗ್ಗ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಗೃಹರಕ್ಷಕ ದಳ ಸಿಬ್ಬಂದಿಯನ್ನು ಅಮಾನತುಗೊಳಿಸಿ ಶಿವಮೊಗ್ಗ ಗೃಹರಕ್ಷಕ ಕಮಾಂಡೆಂಟ್ ಆದೇಶ ಹೊರಡಿಸಿದ್ದಾರೆ.