*ಸರಗಳ್ಳತನ: ಬಸ್ ಸಮೇತ ಪೊಲೀಸ್ ಠಾಣೆಗೆ ಬಂದ ಮಹಿಳೆ*

ಪ್ರಗತಿವಾಹಿನಿ ಸುದ್ದಿ : ಸಾರಿಗೆ ಬಸ್ನಲ್ಲಿ ಮಹಿಳೆಯ ಚಿನ್ನದ ಸರ ಕಳ್ಳತನವಾದ ಘಟನೆ ನಡೆದಿದ್ದು, ಮಹಿಳೆ ಬಸ್ ಸಮೇತ ಪೊಲೀಸ್ ಠಾಣೆಗೆ ಆಗಮಿಸಿದ್ದಾಳೆ.
ಹಾವೇರಿ ನಗರದಲ್ಲಿ ಈ ಘಟನೆ ನಡೆದಿದೆ. ಚಿನ್ನ ಕಳ್ಳತನವಾದ ಹಿನ್ನೆಲೆಯಲ್ಲಿ ಮಹಿಳೆಯೊಬ್ಬರು ಬಸ್ ಸಮೇತ ಪೊಲೀಸ್ ಠಾಣೆಗೆ ಬಂದಿದ್ದಾಳೆ. ಹಾನಗಲ್ ತಾಲೂಕಿನ ಹಿರೇಬಾಸೂರು ಗ್ರಾಮದ ನಿವಾಸಿ ಮೀನಾಕ್ಷಿ ಕಾಗಿನೆಲೆ 10ಗ್ರಾಂ ತೂಕದ ಚಿನ್ನದ ಸರ ಕಳೆದುಕೊಂಡ ಮಹಿಳೆ ಎಂದು ಗುರುತಿಸಲಾಗಿದೆ.
ಅಡಮಾನ ಇಟ್ಟಿದ್ದ ಚಿನ್ನವನ್ನು ಬಿಡಿಸಿಕೊಂಡು ಮನೆಗೆ ತೆರಳುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಮಹಿಳೆ ಪ್ರಯಾಣಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ನಲ್ಲಿ ಪ್ರಯಾಣಿಸುವಾಗ ಯಾರೋ ಕಳ್ಳರು ಸರವನ್ನು ಕದ್ದಿದ್ದಾರೆ ಎಂದು ಹೇಳಲಾಗಿದೆ.
ಘಟನೆ ತಿಳಿಯುತ್ತಿದ್ದಂತೆಯೇ ಮಹಿಳೆ ಬಸ್ ನಿಲ್ದಾಣಕ್ಕೆ ತಲುಪಿದ ಬಳಿಕ ಬಸ್ ಸಮೇತ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದಾರೆ.
ನನ್ನ ಚಿನ್ನದ ಸರವನ್ನು ಹುಡುಕಿ ಕೊಡಿ ಎಂದು ಮಹಿಳೆ ಪೊಲೀಸರನ್ನು ಮನವಿ ಮಾಡಿಕೊಂಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಘಟನೆ ಕುರಿತು ಹೆಚ್ಚಿನ ತನಿಖೆ ಆರಂಭಿಸಿದ್ದಾರೆ.




