*ಕಾರ್ಮಿಕರ ಆರೋಗ್ಯಕ್ಕಾಗಿ ಶುದ್ಧ ಕುಡಿಯುವ ನೀರಿನ ಘಟಕಗಳ ಕೊಡುಗೆ: ಚನ್ನರಾಜ ಹಟ್ಟಿಹೊಳಿ*

ಪ್ರಗತಿವಾಹಿನಿ ಸುದ್ದಿ: ಎಂ.ಕೆ.ಹುಬ್ಬಳ್ಳಿ, ಜೂನ್ 25: ಕಾರ್ಮಿಕರ ಆರೋಗ್ಯ ಮತ್ತು ಕಲ್ಯಾಣಕ್ಕೆ ಆದ್ಯತೆ ನೀಡುವ ಉದ್ದೇಶದಿಂದ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಅವರು ತಮ್ಮ ವಿಧಾನ ಪರಿಷತ್ ಸದಸ್ಯರ ಸ್ಥಳೀಯ ಪ್ರದೇಶಾಭಿವೃದ್ಧಿ ಅನುದಾನ (MLC Fund) ಅಡಿಯಲ್ಲಿ ಎಂ.ಕೆ.ಹುಬ್ಬಳ್ಳಿಯ ಶ್ರೀ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ಎರಡು ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಅಳವಡಿಸಿ, ಗುರುವಾರ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕಾರ್ಮಿಕರು ಕೈಗಾರಿಕೆಯ ಬೆನ್ನೆಲುಬಾಗಿದ್ದು, ಅವರ ಆರೋಗ್ಯ ಮತ್ತು ಮೂಲಭೂತ ಸೌಲಭ್ಯಗಳ ಕಡೆ ವಿಶೇಷ ಗಮನ ಹರಿಸುವುದು ಅಗತ್ಯವಾಗಿದೆ ಎಂದು ಹೇಳಿದರು. ಕಾರ್ಖಾನೆಯಲ್ಲಿ ನೂರಾರು ಕಾರ್ಮಿಕರು ಪ್ರತಿನಿತ್ಯ ದುಡಿಯುತ್ತಿರುವ ಹಿನ್ನೆಲೆಯಲ್ಲಿ ಅವರಿಗೆ ಸುರಕ್ಷಿತ ಹಾಗೂ ಶುದ್ಧ ಕುಡಿಯುವ ನೀರು ದೊರೆಯಬೇಕೆಂಬ ಉದ್ದೇಶದಿಂದ ಈ ಘಟಕಗಳನ್ನು ಸ್ಥಾಪಿಸಲಾಗಿದೆ ಎಂದು ತಿಳಿಸಿದರು.
ಶ್ರೀ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆ ಹಲವು ವರ್ಷಗಳಿಂದ ಈ ಭಾಗದ ರೈತರು ಮತ್ತು ಕಾರ್ಮಿಕರ ಜೀವನೋಪಾಯದ ಕೇಂದ್ರವಾಗಿದ್ದು, ಪ್ರಸ್ತುತ ಕಾರ್ಖಾನೆಯ ಆರ್ಥಿಕ ಪರಿಸ್ಥಿತಿ ತೀವ್ರ ಹದಗೆಟ್ಟಿರುವ ಕಾರಣ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸುವಲ್ಲಿ ಆಡಳಿತ ಮಂಡಳಿಗೆ ಸವಾಲುಗಳು ಎದುರಾಗಿವೆ. ಈ ಹಿನ್ನೆಲೆಯಲ್ಲಿ ಕಾರ್ಮಿಕರ ಆರೋಗ್ಯದ ಹಿತದೃಷ್ಟಿಯಿಂದ ತಮ್ಮ ಅನುದಾನದ ಮೂಲಕ ನೆರವು ನೀಡಲಾಗಿದೆ ಎಂದು ಅವರು ಹೇಳಿದರು.

ನೀರಿನ ಘಟಕಗಳ ಉದ್ಘಾಟನೆಯ ಬಳಿಕ ಕಾರ್ಮಿಕರೊಂದಿಗೆ ವಿಶೇಷ ಸಭೆ ನಡೆಸಿದ ಚನ್ನರಾಜ ಹಟ್ಟಿಹೊಳಿ ಅವರು, ಕಾರ್ಮಿಕರ ಸಮಸ್ಯೆಗಳು ಮತ್ತು ಬೇಡಿಕೆಗಳನ್ನು ಆಲಿಸಿದರು. ವಿವಿಧ ವಿಭಾಗಗಳ ಕಾರ್ಮಿಕರು ತಮ್ಮ ಕೆಲಸದ ಪರಿಸ್ಥಿತಿ, ಮೂಲಭೂತ ಸೌಲಭ್ಯಗಳು ಹಾಗೂ ಇತರ ವಿಷಯಗಳಿಗೆ ಸಂಬಂಧಿಸಿದಂತೆ ಮನವಿಗಳನ್ನು ಸಲ್ಲಿಸಿದರು. ಕಾರ್ಮಿಕರ ಸಮಸ್ಯೆಗಳನ್ನು ಸಾಧ್ಯವಾದ ಮಟ್ಟಿಗೆ ಪರಿಹರಿಸಲು ಪ್ರಯತ್ನಿಸಲಾಗುವುದು ಎಂದು ಭರವಸೆ ನೀಡಿದರು.
ಕಾರ್ಮಿಕರು ಸಹ ಈ ಸಂದರ್ಭದಲ್ಲಿ ಮಾತನಾಡಿ, ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಿರುವುದಕ್ಕೆ ಚನ್ನರಾಜ ಹಟ್ಟಿಹೊಳಿ ಅವರಿಗೆ ಕೃತಜ್ಞತೆ ಸಲ್ಲಿಸಿದರು. ಕೆಲಸದ ಅವಧಿಯಲ್ಲಿ ಶುದ್ಧ ನೀರಿನ ಅಗತ್ಯ ಹೆಚ್ಚಾಗಿರುವುದರಿಂದ ಈ ಘಟಕಗಳು ಕಾರ್ಮಿಕರಿಗೆ ಬಹಳ ಉಪಯುಕ್ತವಾಗಲಿವೆ ಎಂದು ಅಭಿಪ್ರಾಯಪಟ್ಟರು.
ಕಾರ್ಯಕ್ರಮದಲ್ಲಿ ಕಾರ್ಖಾನೆಯ ಆಡಳಿತ ಮಂಡಳಿಯ ಉಪಾಧ್ಯಕ್ಷರು, ನಿರ್ದೇಶಕರು, ವಿವಿಧ ವಿಭಾಗಗಳ ಮುಖ್ಯಸ್ಥರು, ಅಧಿಕಾರಿಗಳು ಹಾಗೂ ಕಾರ್ಮಿಕ ವರ್ಗದವರು ಉಪಸ್ಥಿತರಿದ್ದರು. ಬಳಿಕ ನೀರಿನ ಘಟಕಗಳನ್ನು ಉದ್ಘಾಟಿಸಿ ಕಾರ್ಮಿಕರ ಸಭೆ ನಡೆಸಲಾಯಿತು. ಕಾರ್ಮಿಕರ ಆರೋಗ್ಯ ಮತ್ತು ಕಲ್ಯಾಣಕ್ಕೆ ಒತ್ತು ನೀಡುವ ಇಂತಹ ಕಾರ್ಯಗಳು ಮುಂದೆಯೂ ಮುಂದುವರಿಯಲಿವೆ ಎಂದು ಈ ಸಂದರ್ಭದಲ್ಲಿ ತಿಳಿಸಲಾಯಿತು.




