Latest

ಚಾರ್ಮಡಿ ಘಾಟ್ ನಲ್ಲಿ ಮತ್ತೆ ಕುಸಿದ ಗುಡ್ಡ; ರಸ್ತೆ ಸಂಚಾರ ಸ್ಥಗಿತ

ಪ್ರಗತಿವಾಹಿನಿ ಸುದ್ದಿ; ಚಿಕ್ಕಮಗಳೂರು: ಮಲೆನಾಡಿನಾದ್ಯಂತ ಭಾರೀ ಮಳೆಯಾಗುತ್ತಿದ್ದು, ಚಿಕ್ಕಮಗಳೂರಿನಲ್ಲಿ ಸುಮಾರು ಒಂದು ವಾರದಿಂದ ಸುರಿಯುತ್ತಿರುವ ಮಳೆಯಿಂದ ಗುಡ್ಡ ಕುಸಿದು, ಚಾರ್ಮಾಡಿ ಘಾಟ್​ ಬಂದ್ ಆಗಿದೆ. ಅಲ್ಲದೇ ಶೃಂಗೇರಿಯಿಂದ ಮಂಗಳೂರಿಗೆ ಸಂಪರ್ಕ ಕಲ್ಪಿಸುವ ಹೆದ್ದಾರಿಯೂ ಬಂದ್ ಆಗಿದೆ.

ಚಾರ್ಮಾಡಿ ಘಾಟ್​ನಲ್ಲಿ ನಿನ್ನೆಯಷ್ಟೆ ಗುಡ್ಡ ಕುಸಿತವುಂಟಾಗಿ ರಸ್ತೆಯಲ್ಲಿನ ಮಣ್ಣು ತೆರವುಗೊಳಿಸಲಾಗಿತ್ತು. ಆದರೆ ಇದೀಗ ಮತ್ತೆ ಭೂ ಕುಸಿತವಾಗಿದೆ. ಇದರಿಂದ ದಕ್ಷಿಣ ಕನ್ನಡ- ಚಿಕ್ಕಮಗಳೂರು ಜಿಲ್ಲೆಯ ಸಂಪರ್ಕ ರಸ್ತೆ ಬಂದ್ ಆಗಿದೆ. ರಸ್ತೆಗೆ ಬಿದ್ದಿರುವ ಭಾರೀ ಗಾತ್ರದ ಬಂಡೆ-ಮರ-ಮಣ್ಣಿನಿಂದ ವಾಹನ ಸಂಚಾರ ಸ್ಥಗಿತಗೊಂಡಿದೆ. ಚಾರ್ಮಾಡಿ ಘಾಟ್ ಅಲೇಕಾನ್ ಬಳಿ ಘಟನೆ ನಡೆದಿದೆ.

Home add -Advt

ಮಣ್ಣು ತೆರೆವು ಕಾರ್ಯದಲ್ಲಿ ಹೆದ್ದಾರಿ ಪ್ರಾಧಿಕಾರದ ಸಿಬ್ಬಂದಿಗಳು ನಿರತರಾಗಿದ್ದಾರೆ. ಎರಡು ಜೆಸಿಬಿ ಯಂತ್ರಗಳನ್ನು ಬಳಸಿ ತೆರವು ಕಾರ್ಯ ನಡೆಸಲಾಗುತ್ತಿದೆ.

ಇನ್ನು ಚಿಕ್ಕಮಗಳೂರಿನಲ್ಲಿ ಸುರಿದ ಭಾರೀ ಮಳೆಗೆ ಎರಡು ದಿನದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಜಿಲ್ಲೆಯಾದ್ಯಂತ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಜನ ಜೀವನ ಅಸ್ತವ್ಯಸ್ಥಗೊಂಡಿದೆ.

ಇನ್ನೊಂದೆಡೆ ಕೊಡಗು ಜಿಲ್ಲೆಯಲ್ಲಿ ಮತ್ತೆ ಗುಡ್ಡ ಕುಸಿತವುಂಟಾಗಿದೆ. ನಿನ್ನೆ ಬ್ರಹ್ಮಗಿರಿ ಬೆಟ್ಟ ಕುಸಿದ ಬೆನ್ನಲ್ಲೇ ಇಂದು ಮಡಿಕೇರಿ ತಾಲೂಕಿನ ಬೊಟ್ಲಪ್ಪ ಗ್ರಾಮದಲ್ಲಿ ಭೂಕುಸಿತವಾಗಿದ್ದು, ಇದರಿಂದ ಮುನ್ನೆಚ್ಚರಿಕೆಯಾಗಿ ಸ್ಥಳೀಯ ನಿವಾಸಿಗಳನ್ನು ಸ್ಥಳಾಂತರ ಮಾಡಲಾಗುತ್ತಿದೆ.

Related Articles

Back to top button