
ಪ್ರಗತಿವಾಹಿನಿ ಸುದ್ದಿ: ಸೇತುವೆ ಮೇಲಿಂದ ತುಂಗಾ ನದಿಗೆ ಜಿಗಿದು ನರ್ಸ್ವೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಮಡುಬು ಗ್ರಾಮದ ಬಳಿ ಈ ಘಟನೆ ನಡೆದಿದೆ. ಮುತ್ತಿನಕೊಪ್ಪದ ರನ್ಯಾ (34) ಆತ್ಮಹತ್ಯೆಗೆ ಶರಣಾದವರು. ರನ್ಯಾ ಶಿವಮೊಗ್ಗದ ಖಾಸಗಿ ಆಸ್ಪತೆಯೊಂದರಲ್ಲಿ ಕೆಲಸ ಮಾಡುತ್ತಿದ್ದರು.
ರನ್ಯಾ ಸೇತುವೆ ಮೇಲಿಂದ ನದಿಗೆ ಹಾರಿದ್ದನ್ನು ಗಮನಿಸಿದ ಸ್ಥಳೀಯರು, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮೃತದೇಹವನ್ನು ನದಿಯಿಂದ ಹೊರ ತೆಗೆಯಲಾಗಿದೆ. ಎನ್.ಆರ್.ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಿವಮೊಗ್ಗದವರಾದ ರನ್ಯಾ ಅವರಿಗೆ ಸುಮಾರು 12 ವರ್ಷಗಳ ಹಿಂದೆ ಎನ್.ಆರ್.ಪುರ ತಾಲೂಕಿನ ಮುತ್ತಿನಕೊಪ್ಪದ ವ್ಯಕ್ತಿಯೊಂದಿಗೆ ವಿವಾಹವಾಗಿತ್ತು. ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಕೆಲವು ತಿಂಗಳಿನಿಂದ ಪತಿಯಿಂದ ದೂರವಿದ್ದರು. ಕೆಲಕಾಲ ತವರು ಮನೆ ಶಿವಮೊಗ್ಗದಲ್ಲಿ ವಾಸವಾಗಿದ್ದರು. ಇದಾದ ನಂತರ ಮತ್ತೆ ಮುತ್ತಿನಕೊಪ್ಪದಲ್ಲಿರುವ ಪತಿಯ ಮನೆಗೆ ಆಗಮಿಸಿದ್ದರು. ಇವರಿಗೆ ಇಬ್ಬರು ಮಕ್ಕಳಿದ್ದು, ಗಂಡ ಹಾಗೂ ಹೆಂಡತಿ ಮಧ್ಯೆ ಕೆಲ ಸಮಯದಿಂದ ಹೊಂದಾಣಿಕೆ ಇರಲಿಲ್ಲ ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕೆಲವು ವಿಚಾರಗಳಿಂದ ರನ್ಯಾ ಮಾನಸಿಕವಾಗಿ ಕುಗ್ಗಿದ್ದರು. ಕೌಟುಂಬಿಕ ಕಲಹಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ರನ್ಯಾ ಅವರ ತಂದೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.




