*ಬೆಳಗಾವಿ ಜಿಲ್ಲೆಗೆ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಜಗನ್ನಾಥ್ ಹಲಮಡಗಿ ಭೇಟಿ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸರ್ಕಾರಿ ಮಕ್ಕಳ ಪಾಲನಾ ಸಂಸ್ಥೆಗಳಾದ ಹಿರಿಯ ಬಾಲಕರ ಬಾಲಮಂದಿರ ಬೆಳಗಾವಿ, ಬಾಲಕಿಯರ ಬಾಲಮಂದಿರ ಸವದತ್ತಿ, ವೀಕ್ಷಣಾಲಯ ಗೃಹ ಬೆಳಗಾವಿ ಹಾಗೂ ವಿವಿಧ ಮಕ್ಕಳ ಪಾಲನಾ ಸಂಸ್ಥೆಗಳಿಗೆ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಜಗನ್ನಾಥ್ ಹಲಮಡಗಿ ಸೋಮವಾರ (ಆ.3) ಭೇಟಿ ನೀಡಿ ಪರಿಶೀಲನೆ ಮಾಡಿದರು.
ಸಂಸ್ಥೆಯಲ್ಲಿರುವ ಮಕ್ಕಳೊಂದಿಗೆ ಚರ್ಚಿಸಿ ಅವರ ಸಮಸ್ಯೆಗಳನ್ನು ಆಲಿಸಿದರು. ಮಕ್ಕಳಿಗೆ ಯಾವುದೇ ತೊಂದರೆ ಆಗದಂತೆ ಸಂಸ್ಥೆಯಲ್ಲಿರುವ ಎಲ್ಲಾ ಸಿಬ್ಬಂದಿಗಳು ನಮ್ಮ ಸಂಸ್ಥೆಯಲ್ಲಿರುವ ಮಕ್ಕಳ ಸೇವೆ ದೇವರ ಸೇವೆ ಎಂದು ತಿಳಿದು ಶ್ರದ್ಧಾಪೂರಕವಾಗಿ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.
ಜಿಲ್ಲೆಯ ಉನ್ನತ ಮಟ್ಟ ಅಧಿಕಾರಿಗಳಾದ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ನಗರ ಪೊಲೀಸ್ ಆಯುಕ್ತ ಬೋರಸೆ ಬೋಷನ್ ಗುಲಬರಾವ್, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ರಾಹುಲ್ ಸಿಂಧೆ, ಪೋಲಿಸ್ ವರಿಷ್ಟಾಧಿಕಾರಿ ಕೆ ರಾಮರಾಜನ್ ಇವರುಗಳು ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಭೇಟಿ ನೀಡಿ ಜಿಲ್ಲೆಯ ಪ್ರಸ್ತುತ ಮಕ್ಕಳ ಸ್ಥಿತಿಗತಿ ವಿವರದ ಕುರಿತು ಚರ್ಚಿಸಿದರು.
ಜಿಲ್ಲೆಯಲ್ಲಿ ಹೆಚ್ಚಾಗಿ ಬಾಲ್ಯ ವಿವಾಹ ಹಾಗೂ ಪೋಕೋ ಪ್ರಕರಣಗಳು ಜಾಸ್ತಿ ಕಂಡು ಬರುತ್ತಿದ್ದು, ಶಾಲಾ/ಕಾಲೇಜಿನ ಮಕ್ಕಳಿಗೆ, ಯುವಕರಿಗೆ ಹಾಗೂ ಸಮಾಜದಲ್ಲಿ ವಾಸಿಸುವ ಎಲ್ಲಾ ಜನರಿಗೂ ಅರಿವು ಕಾರ್ಯಕ್ರಮಗಳನ್ನು ಮಾಡಬೇಕೆಂದು ಎಂದು ತಿಳಿಸಿದರು.
ಈ ಸಂಧರ್ಭದಲ್ಲಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಉಪನಿರ್ದೇಶಕರಾದ ಚೇತನಕುಮಾರ ಎಮ್. ಎನ್. ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ರಾಮಮೂರ್ತಿ ಕೆ. ವಿ. ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.


