
ಪ್ರಗತಿವಾಹಿನಿ ಸುದ್ದಿ: ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗದ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯನನ್ನು ಪೊಲೀಸರು ಬಂಧಿಸಿದ್ದಾರೆ.
ಚಂದ್ರಶೇಖರ್ ಅಲಿಯಾಸ್ ಕೋಟಾನೋಟ್ ಚಂದ್ರ ಬಂಧಿತ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ. ಮಲ್ಲಿಕಾರ್ಜುನ (40) ಎಂಬುವವರನ್ನು ಕೊಲೆ ಮಾಡಿರುವ ಆರೋಪದಲ್ಲಿ ಬಂಧಿಸಲಾಗಿದೆ. ಮಂಜುನಾಥ್ ಅವರಿಗೆ ಲೋನ್ ಕೊಡಿಸುವುದಾಗಿ ನಂಬಿಸಿ ಚಂದ್ರಶೇಖರ್ ವಂಚಿಸಿದ್ದ. ಮಲ್ಲಿಕಾರ್ಜುನ ಅವರ ಬ್ಯಾಂಕ್ ಖಾತೆ ಮೂಲಕ ಹಣ ಡಬ್ಲಿಂಗ್ ದಂಧೆ ನಡೆಸಿದ್ದ. ಇದಾದ ಬಳಿಕ ಪ್ರಕರಣ ದಾಖಲಾಗಿತ್ತು. ಪ್ರಕರಣದಲ್ಲಿ ಮಲ್ಲಿಕಾರ್ಜುನ ಸಾಕ್ಷಿಯಾಗಿದ್ದರು. ಇದರಿಂದ ಸ್ವತಃ ಚಂದ್ರಶೇಖರ್ ಮಲ್ಲಿಕಾರ್ಜುನನ ಹತ್ಯೆಗೆ ಸಂಚು ರೂಪಿಸಿದ್ದ.
ಮೇ 1ರಂದು ಚಿತ್ರದುರ್ಗದ ಜಾನಕೊಂಡ ಸಮೀಪದ ತೋಟವೊಂದರ ಮನೆಯಲ್ಲಿ ಮಲ್ಲಿಕಾರ್ಜುನ ಸಾವನ್ನಪ್ಪಿದ್ದರು. ಘಟನೆಯ ಸಂಬಂಧ ಅಸಹಜ ಸಾವು ಪ್ರಕರಣ ದಾಖಲಾಗಿತ್ತು. ಈ ಹಿಂದೆ ಏಪ್ರಿಲ್ 14 ರಂದು ವಾಹನ ಅಪಘಾತದಲ್ಲಿ ಗಾಯಗೊಂಡಿದ್ದ ಮಲ್ಲಿಕಾರ್ಜುನ ಚಿಕಿತ್ಸೆ ಪಡೆದು ಏಪ್ರಿಲ್ 18 ರಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರು. ಬಳಿಕ ಚಂದ್ರಶೇಖರ್ಗೆ ಸೇರಿದ್ದ ತೋಟದಲ್ಲಿ ಈತನನ್ನು ಅಕ್ರಮವಾಗಿ ಬಂಧನದಲ್ಲಿರಿಸಲಾಗಿತ್ತು.
ಚಂದ್ರಶೇಖರ್ ತನ್ನ ಅಕ್ರಮಗಳನ್ನು ಮುಚ್ಚಿ ಹಾಕಲು ತನ್ನ ಪತಿ ಮಲ್ಲಿಕಾರ್ಜುನ್ ಅವರನ್ನು ಹತ್ಯೆ ಮಾಡಿದ್ದಾಗಿ ಮಲ್ಲಿಕಾರ್ಜುನ್ ಪತ್ನಿ ಆಶಾ ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದರು.ಈ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿತ್ತು. ಸದ್ಯ ಚಂದ್ರಶೇಖರ್ ಹಾಗೂ ಸದಾಶಿವ ನಾಯಕ ಎನ್ನುವವರನ್ನು ಪೊಲೀಸರು ಬಂಧಿಸಿದ್ದಾರೆ. ಇನ್ನೋರ್ವ ಆರೋಪಿ ಚಂದ್ರಶೇಖರ್ ಪುತ್ರ ವಿನಾಯಕ್ಗೆ ಬಂಧನಕ್ಕಾಗಿ ಹುಡುಕಾಟ ನಡೆಸಿದ್ದಾರೆ.




