
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಖಡಕ್ ಪೊಲೀಸ್ ಅಧಿಕಾರಿ ರವಿ ಡಿ ಚೆನ್ನಣ್ಣನವರ್ ರಾಜಕೀಯಕ್ಕೆ ಪದಾರ್ಪಣೆ ಮಾಡಲಿದ್ದಾರೆ ಎಂಬ ಚರ್ಚೆ ನಡೆಯುತ್ತಿರುವಾಗಲೇ ಅವರ ವಿರುದ್ಧ ಅಕ್ರಮ ಆಸ್ತಿಗಳಿಕೆ ಆರೋಪಗಳು ಕೇಳಿಬರುತ್ತಿದ್ದು, ಇದೀಗ ಹಿರಿಯ ಪೊಲೀಸ್ ಅಧಿಕಾರಿ ಮಾನನಷ್ಟ ಪ್ರಕರಣ ದಾಖಲಿಸುವ ಎಚ್ಚರಿಕೆ ನೀಡಿದ್ದಾರೆ.
ಬಳ್ಳಾರಿ ಅಥವಾ ರಾಯಚೂರಿನಿಂದ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ರವಿ ಡಿ ಚೆನ್ನಣ್ಣನವರ್ ಉತ್ಸುಕರಾಗಿದ್ದಾರೆ. ಈ ನಿಟ್ಟಿನಲ್ಲಿ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. ಖಡಕ್ ಐಪಿಎಸ್ ಅಧಿಕಾರಿ ರಾಜಕೀಯ ರಂಗ ಪ್ರವೇಶಿಸುತ್ತಾರೆ ಎಂಬ ಚರ್ಚೆ ಬೆನ್ನಲ್ಲೇ ಇದೀಗ ಅವರ ವಿರುದ್ಧ ಅಕ್ರಮ ಆಸ್ತಿಗಳಿಕೆ, ಮೂವರು ರೌಡಿಶೀಟರ್ ನಿಂದ ಕೈಬಿಡಲು ಭಕ್ಷೀಸು ಪಡೆದ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿದ ರವಿ ಡಿ ಚೆನ್ನಣ್ಣನವರ್, ನಾನು ಯಾವುದೇ ಅಕ್ರಮ ಆಸ್ತಿ ಸಂಪಾದಿಸಿಲ್ಲ. ನನ್ನ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಆರೋಪ ಮಾಡಲಾಗುತ್ತಿದೆ. ಸುಳ್ಳು ಆರೋಪ ಮಾಡುವವರ ವಿರುದ್ಧ ಮಾನನಷ್ಟ ಮೊಕದ್ದಮೆ ಕೇಸ್ ದಾಖಲಿಸುತ್ತೇನೆ ಎಂದಿದ್ದಾರೆ.
ಇದು ನನ್ನ ತೇಜೋವಧೆಗೆ ನಡೆಸುತ್ತಿರುವ ಷಡ್ಯಂತ್ರ. ಆಧಾರರಹಿತ ಆರೋಪ ಮಾಡುತ್ತಿರುವುದು ಗಮನಕ್ಕೆ ಬಂದಿದೆ. ನನ್ನ ತಂದೆ-ತಾಯಿ ಹಾಗೂ ನನ್ನ ಕುಟುಂಬದ ಆಸ್ತಿಗಳು ಎಲ್ಲವೂ ಸ್ವಯಾರ್ಜಿತ ಹಾಗೂ ಪಿತ್ರಾರ್ಜಿತ ಆಸ್ತಿಗಳಾಗಿವೆ. ಎಲ್ಲವೂ ಕಾನೂನು ಬದ್ಧವಾಗಿಯೇ ಇದೆ. ಭ್ರಷ್ಟಾಚಾರದ ಮೂಲಕ ಸಂಪಾದಿಸಿದ್ದೇನೆ ಎಂಬುದು ಸುಳ್ಳು. ನನ್ನ ವಿರುದ್ಧ ಆರೋಪ ಮಾಡಿದವರ ವಿರುದ್ಧ ಈಗಾಗಲೇ ನಾನು ಕಾನೂನಾತ್ಮಕವಾಗಿ ನ್ಯಾಯವಾದಿಗಳ ಮೂಲಕ ಲೀಗಲ್ ನೋಟೀಸ್ ನೀಡಿದ್ದು, ಇದಕ್ಕೆ ಉತ್ತರ ಬರದ ಕಾರಣ ಈ ಕುರಿತು ಸಂಬಂಧಪಟ್ಟ ನ್ಯಾಯಾಲಯದಲ್ಲಿ 3 ಕೋಟಿ ರೂಪಾಯಿ ಮಾನನಷ್ಟ ಮೊಕದ್ದಮೆ ದಾಖಲಿಸಲಿದ್ದೇನೆ. ಸುಳ್ಳು ಆರೋಪಕ್ಕೆ ಎರಡು ವರ್ಷ ಜೈಲು ಶಿಕ್ಷೆ ವಿಧಿಸುವಂತೆ ಕೋರುತ್ತೇನೆ ಎಂದು ಹೇಳಿದ್ದಾರೆ.
ಸಿಎಂ ಭೇಟಿಯಾದ ರಮೇಶ್ ಜಾರಕಿಹೊಳಿ; ಕುತೂಹಲ ಮೂಡಿಸಿದ ಮಾತುಕತೆ