ಹಳ್ಳಿಗಳಿಗೆ ಪ್ರಯಾಣ ಮಾಡದಂತೆ ನಗರವಾಸಿಗಳಿಗೆ ಸಿಎಂ ಮನವಿ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ವೈರಸ್ ನಿಯಂತ್ರಣಕ್ಕೆ ಸರ್ಕಾರ ಸಾಕಷ್ಟು ಮುಂಜಾಗೃತಾ ಕ್ರಮಗಳನ್ನು ಕೈಗೊಂಡಿದೆ. 1700 ಹಾಸಿಗೆಗಳನ್ನು ಒಳಗೊಂಡ ವಿಕ್ಟೋರಿಯಾ ಆಸ್ಪತ್ರೆಯನ್ನು ಕೊರೋನಾ ಕೇಂದ್ರ ವಿಶೇಷ ಆಸ್ಪತ್ರೆಯನ್ನಾಗಿ ಪರಿವರ್ತಿಸಲು ನಿರ್ಧರಿಸಲಾಗಿದೆ ಎಂದು ಸಿಎಂ ಬಿ.ಎಸ್​.ಯಡಿಯೂರಪ್ಪ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಯಡಿಯೂರಪ್ಪ, ಪ್ರಧಾನಿ ಮೋದಿ ಕರೆ ಕೊಟ್ಟಿರುವ ಜನತಾ ಕರ್ಫ್ಯೂಗೆ ಕರ್ನಾಟಕದ ಜನತೆ ಸಂಪೂರ್ಣವಾಗಿ ಸಹಕಾರ ಕೊಟ್ಟಿದ್ದಾರೆ. ಅವರಿಗೆ ನಾನು ಅಭಿನಂದನೆ ಸಲ್ಲಿಸುತ್ತೇನೆ ಎಂದರು.

Home add -Advt

ಸಚಿವರು ಹಾಗೂ ಅಧಿಕಾರಿಗಳ ಜೊತೆ ಚರ್ಚೆ ನಡೆಸಿದ್ದು, ವಿಕ್ಟೋರಿಯಾ ಆಸ್ಪತ್ರೆಯನ್ನು ವಿಶೇಷ ಆಸ್ಪತ್ರೆಯಾಗಿ ಪರಿವರ್ತಿಸುವುದರ ಬಗ್ಗೆ ಚರ್ಚೆ ಮಾಡಲಾಗಿದೆ. ಈಗಾಗಲೇ ಅಲ್ಲಿ ದಾಖಲಾಗಿರುವ ರೋಗಿಗಳನ್ನು ಬೇರೆ ಬೇರೆ ಆಸ್ಪತ್ರೆಗಳಿಗೆ ದಾಖಲು ಮಾಡಲು ಚಿಂತಿಸಲಾಗಿದೆ. ಇನ್ನು ಬೆಂಗಳೂರಿನ ಸ್ಯಾಂಕಿ ರಸ್ತೆಯಲ್ಲಿರುವ ಪಾರಂಪರಿಕ ಕಟ್ಟಡ ಬಾಲ ಬ್ರೂಯಿ ಅತಿಥಿ ಗೃಹವನ್ನು ಕೊರೋನಾ ವಾರ್ ರೂಮ್ ಮಾಡಲು ತೀರ್ಮಾನ ಮಾಡಲಾಗಿದೆ ಎಂದು ಹೇಳಿದರು.

ಪ್ರತಿ 10 ಲಕ್ಷ ಜನರಲ್ಲಿ 200 ಜನರಿಗೆ ಪರೀಕ್ಷೆ ನಡೆಸಲು ಆರೋಗ್ಯ ಇಲಾಖೆ ಸಜ್ಜಾಗಿದೆ. ಎಲ್ಲಾ ಖಾಸಗಿ ಮತ್ತು ಸರ್ಕಾರಿ ಆಸ್ಪತ್ರೆಗಳಲ್ಲಿ ಕೋವಿಡ್ ಪರೀಕ್ಷೆಗೆ ಪರವಾನಗಿ ನೀಡಲು ತೀರ್ಮಾನ ಮಾಡಲಾಗಿದೆ. ಟಾಸ್ಕ್ ಫೋರ್ಸ್ ತಂಡ ಹಿರಿಯ ಅಧಿಕಾರಿಗಳ ತಂಡದ ಜೊತೆ ಕಾರ್ಯ ನಿರ್ವಹಿಸುತ್ತದೆ. ಅಂತರಾಷ್ಟ್ರೀಯ ಪ್ರಯಾಣಿಕರು ಹಾಗೂ ಸ್ಥಳೀಯ ಪ್ರಯಾಣಿಕರನ್ನು ತಪಾಸಣೆಗೆ ಒಳಪಡಿಸಲು ತೀರ್ಮಾನ ಮಾಡಲಾಗಿದೆ ಎಂದು ತಿಳಿಸಿದರು.

ಇದೇ ವೇಳೆ, ಜನರು ಗಾಬರಿ ಆಗುವ ಅವಶ್ಯಕತೆ ಇಲ್ಲ. ದವಸ-ಧಾನ್ಯಗಳು ಯಾವುದಕ್ಕೂ ತೊಂದರೆ ಆಗದ ರೀತಿ ಸರ್ಕಾರ ಕ್ರಮ ವಹಿಸಿದೆ. ಎರಡು ತಿಂಗಳ ರೇಷನ್​ ಒಟ್ಟಿಗೆ ಕೊಡಲು ನಿರ್ಧಾರ ಮಾಡಲಾಗಿದೆ.

ಸಾರ್ವಜನಿಕರು 15 ದಿನಗಳ ಕಾಲ ಯಾರೂ ಕೂಡ ನಗರಗಳಿಂದ ಹಳ್ಳಿಗಳಿಗೆ ಹೋಗಬೇಡಿ. ಈಗ ಹಳ್ಳಿಗಳಲ್ಲಿ ಯಾವುದೇ ಸಮಸ್ಯೆ ಇಲ್ಲ. ಹೀಗಾಗಿ ನಗರಗಳಿಂದ ಹಳ್ಳಿಗಳಿಗೆ ಯಾರೂ ಹೋಗಬೇಡಿ ಎಂದು ಮನವಿ ಮಾಡಿದ್ದಾರೆ.

Related Articles

Back to top button