ಮುಸ್ಲಿಂ ಸಮುದಾಯದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಬೇಡಿ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮುಸ್ಲಿಂ ಸಮುದಾಯದ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡುವ ಸ್ವಪಕ್ಷದ ಶಾಸಕರ ವಿರುದ್ಧ ಗರಂ ಆಗಿರುವ ಸಿಎಂ ಬಿ ಎಸ್ ಯಡಿಯೂರಪ್ಪ, ಎಚ್ಚರಿಕೆಯಿಂದ ಮಾತನಾಡುವಂತೆ ಸೂಚನೆ ನೀಡಿದ್ದಾರೆ.

ದಾವೋಸ್ ನಿಂದ ವಾಪಸ್ ಆದ ಸಿಎಂ ಬಿಎಸ್ ಯಡಿಯೂರಪ್ಪನವರನ್ನು ಭೇಟಿಯಾಗಲು ಬಂದ ಶಾಸಕರಿಗೆ ಈ ಬಗ್ಗೆ ಖಡಕ್ ಸೂಚನೆ ನೀಡಿದ್ದಾರೆ. ಪೌರತ್ವ ತಿದ್ದುಪಡಿ ಕಾಯ್ದೆನ್ನು ನಾವು ಒಟ್ಟಾಗಿ ರಾಷ್ಟ್ರಮಟ್ಟಕ್ಕೆ ಕೊಂಡೊಯ್ಯಬೇಕು. ವಿಪಕ್ಷಗಳ ಜತೆ ಮಾತನಾಡುವ ಎಚ್ಚರಿಕೆಯಿಂದ ಹೇಳಿಕೆ ನೀಡಿ. ಯಾರೂ ಆಕ್ರೋಶ ಭರಿತಹೇಳಿಕೆ ನೀಡುವ ಗೋಜಿಗೆ ಹೋಗಬೇಡಿ ಎಂದು ಹೇಳಿದರು.

ಈ ವೇಳೆ ಪ್ರಮುಖವಾಗಿ ಸಿಎಂ ರಾಜಕೀಯ ಕಾರ್ಯದರ್ಶಿ ಎಂ ಪಿ ರೇಣುಕಾಚಾರ್ಯಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ. ನಾವು ದೇಶದಲ್ಲಿ ಒಂದಾಗಿ ಹೋಗೊಕೆ ಮುಂದಾದರೇ ನೀವು ಬಾಯಿಗೆ ಬಂದಂತೆ ಮಾತನಾಡುತ್ತಿದ್ದೀರಾ. ಇಲ್ಲಿ ವಿವಾದಾತ್ಮಕ ಹೇಳಿಕೆಗಳನ್ನು ನೀಡಿ ಸಮಸ್ಯೆಯುಂಟು ಮಾಡುತ್ತಿದ್ದೀರಾ. ಎಚ್ಚರಿಕೆಯಿಂದ ಮಾತನಾಡಿ ಎಂದು ಗುಡುಗಿದ್ದಾರೆ ಎನ್ನಲಾಗಿದೆ.

ಮುಸ್ಲಿಂ ಸಮುದಾಯದವರಿಗೆ ಯಾವುದೇ ವಿಶೇಷ ಪ್ಯಾಕೆಜ್ ಹಾಗೂ ಅಭಿವೃದ್ಧಿ ಕಾರ್ಯ ಮಾಡಿಕೊಡಲ್ಲ. ಅಲ್ಲದೇ ಮಸೀದಿಗಳಲ್ಲಿ ಶಸ್ತ್ರಾಸ್ತ್ರಗಳನ್ನು ಶೇಖರಣೆ ಮಾಡಿರುತ್ತಾರೆ ಎಂದು ಶಾಸಕ ರೇಣುಕಾಚಾರ್ಯ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಈ ಹಿನ್ನಲೆಯಲ್ಲಿ ಮುಸ್ಲಿಂ ಸಮುದಾಯದ ಮುಖಂಡರು ಬೃಹತ್ ಪ್ರತಿಭಟನೆ‌ ಕೂಡ ನಡೆಸಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button