*870 ಕೋಟಿ ವೆಚ್ಚದ 74 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಚಾಲನೆ ನೀಡಿದ ಸಿ.ಎಂ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ: 1,70,000 ಜನರಿಗೆ ಕುಡಿಯುವ ನೀರು ಒದಗಿಸುವ ಜೊತೆಗೆ ಕೂಡ್ಲಿಗಿಯ ಅಂತರ್ಜಲ ವೃದ್ಧಿಗೆ ಶ್ರಮಿಸಿ ಯಶಸ್ವಿಯಾದ ಶಾಸಕ ಶ್ರೀನಿವಾಸ್ ಅವರನ್ನು ಪಡೆದ ಕೂಡ್ಲಿಗಿ ಜನತೆ ಅತ್ಯಂತ ಅದೃಷ್ಟವಂತರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಪಾರವಾಗಿ ಶ್ಲಾಘಿಸಿದರು.
ಕೂಡ್ಲಿಗಿ ವಿಧಾನಸಭಾ ಕ್ಷೇತ್ರದ 74 ಕೆರೆಗಳಿಗೆ ನೀರು ತುಂಬಿಸುವ ಯೋಜನೆಯನ್ನು ಉದ್ಘಾಟಿಸಿ, ಹಲವು ಅಭಿವೃದ್ಧಿ ಕಾರ್ಯಕ್ರಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.
ಬರಡು ನೆಲ ಕೂಡ್ಲಿಗಿಯನ್ನು ಹಸಿರಿನ ನೆಲವನ್ನಾಗಿ ಮಾಡಲು ಪಣತೊಟ್ಟು ಕೆಲಸ ಮಾಡುತ್ತಿರುವ ಶಾಸಕ ಶ್ರೀನಿವಾಸ್ ಅವರು ಅತ್ಯಂತ ಕ್ರಿಯಾಶೀಲರು. ಇವರಿಂದ ಕ್ಷೇತ್ರದ ಅಭಿವೃದ್ಧಿ ಅತ್ಯಂತ ವೇಗ ಪಡೆದುಕೊಂಡಿದೆ ಎಂದರು.
ನಮ್ಮದು ಅಭಿವೃದ್ಧಿ ಪರವಾದ ನುಡಿದಂತೆ ನಡೆಯುತ್ತಿರುವ ಸರ್ಕಾರ. ಕಳೆದ ಎರಡು ವರ್ಷಗಳಲ್ಲಿ ಕೂಡ್ಲಿಗಿ ಕ್ಷೇತ್ರಕ್ಕೆ 1750 ಕೋಟಿಗೂ ಅಧಿಕ ಮೊತ್ತದ ಹಣದಲ್ಲಿ ಬೇರೆ ಬೇರೆ ಅಭಿವೃದ್ಧಿ ಕಾರ್ಯಗಳು ನಡೆದಿವೆ. ಜೊತೆಗೆ ಚುನಾವಣೆ ವೇಳೆ ಘೋಷಿಸಿದ್ದಂತೆ ಐದು ಗ್ಯಾರಂಟಿಗಳನ್ನು ಘೋಷಿಸಿ, ಐದಕ್ಕೆ ಐದನ್ನೂ ಜಾರಿ ಮಾಡಿದ್ದೇವೆ. ರಾಜ್ಯದ ಜನರ ಮನೆ ಬಾಗಿಲಿಗೆ ಪ್ರತೀ ತಿಂಗಳು ಸರ್ಕಾರದ ಗ್ಯಾರಂಟಿಗಳು ತಲುಪುತ್ತಿವೆ. 1.20 ಕೋಟಿ ಕುಟುಂಬಗಳ ಮನೆ ಯಜಮಾನಿಯರಿಗೆ ಗೃಹಲಕ್ಷ್ಮಿ ಹಣ ಮತ್ತು ಗೃಹಜ್ಯೋತಿಯ ಸವಲತ್ತು ತಲುಪುತ್ತಿದೆ ಎಂದರು.
ಎರಡು ವರ್ಷದಲ್ಲಿ ನಮ್ಮ ಸರ್ಕಾರ ಒಂದು ಲಕ್ಷ ಕೋಟಿ ರೂಪಾಯಿಗಳನ್ನು ನೇರವಾಗಿ ರಾಜ್ಯದ ಜನರ ಜೇಬಿಗೆ ಹಾಕಿದ್ದೇವೆ ಎಂದು ಲೆಕ್ಕ ಮುಂದಿಟ್ಟರು.
ನಾವು ನುಡಿದಂತೆ ನಡೆದು ಜನರ ಜೇಬಿಗೆ ಹಣ ಹಂಚುತ್ತಿದ್ದರೆ, ಸುಳ್ಳನ್ನೇ ಮನೆ ದೇವರು ಮಾಡಿಕೊಂಡಿರುವ ಬಿಜೆಪಿಯವರು ಮಾನ ಮರ್ಯಾದೆ ಬಿಟ್ಟು ರಾಜ್ಯದ ಜನರಿಗೆ ಸುಳ್ಳುಗಳನ್ನು ಹಂಚುತ್ತಿದ್ದಾರೆ.
ಲಜ್ಜೆಗೆಟ್ಟ ಮತಗಳ್ಳರು
ಸುಳ್ಳಿನ ಸರದಾರ ಬಿಜೆಪಿಯವರು ಈಗ ಸಾರ್ವಜನಿಕವಾಗಿ ಹರಾಜಾಗಿದ್ದಾರೆ. ಇವರು ಲಜ್ಜೆಗೆಟ್ಟು ಮತಗಳ್ಳತನಕ್ಕೆ ಇಳಿದು ಸಿಕ್ಕಿ ಬಿದ್ದಿದ್ದಾರೆ ಎಂದರು.
ಕಬ್ಬು ಬೆಳೆಗಾರರಿಗೆ ದ್ರೋಹ ಬಗೆದದ್ದು ಪ್ರಹ್ಲಾದ್ ಜೋಶಿ : ಸಿಎಂ
FRP ಮತ್ತು MSP ಎರಡನ್ನೂ ನಿಗಧಿ ಮಾಡೋದು ಕೇಂದ್ರದ ಬಿಜೆಪಿ ಸರ್ಕಾರ. ಕಬ್ಬು ಬೆಳೆಗಾರರಿಗೆ ದ್ರೋಹ ಬಗೆದದ್ದು ಪ್ರಹ್ಲಾದ್ ಜೋಶಿ. ಆದರೆ, ವಿಜಯೇಂದ್ರ ತಮ್ಮದೇ ಕೇಂದ್ರ ಸರ್ಕಾರ ಕಬ್ಬು ಬೆಳೆಗಾರರಿಗೆ ಮಾಡಿದ ದ್ರೋಹವನ್ನು ಮರೆಮಾಚಿ ಬೆಳಗಾವಿಗೆ ಹೋಗಿ ಪ್ರತಿಭಟನೆಯ ಡ್ರಾಮಾ ಮಾಡುತ್ತಿದ್ದಾರೆ. ಕೇಂದ್ರ ಸರ್ಕಾರ ಕಬ್ಬು ಬೆಳೆಗಾರರಿಗೆ ದ್ರೋಹ ಬಗೆದರೂ ರಾಜ್ಯ ಸರ್ಕಾರ ಹೆಚ್ಚುವರಿ ಹಣ ನೀಡಿ ನಮ್ಮ ಕಬ್ಬು ಬೆಳೆಗಾರರನ್ನು ಕಾಪಾಡೊ ಕೆಲಸ ಮಾಡಿದೆ ಎಂದು ತಿಳಿಸಿದರು.
ಶಾಸಕ ಶ್ರೀನಿವಾಸ್, ಸಂಸದ ತುಕಾರಾಂ ಇಬ್ಬರೂ ಜನರ ಅಭಿವೃಧ್ಧಿ ಹೊರತಾಗಿ ಬೇರೇನನ್ನೂ ಕೇಳುವವರಲ್ಲ. ಇವರಿಬ್ಬರನ್ನು ಗೆಲ್ಲಿಸಿದ ಜನತೆಗೆ ನಾನು ಧನ್ಯವಾದ ಅರ್ಪಿಸುತ್ತೇನೆ. ಈ ಶಾಸಕರು ಮತ್ತು ಸಂಸದರು ನಿಮ್ಮ ಆಸ್ತಿ ಇದ್ದ ಹಾಗೆ. ಇವರನ್ನು ಕಾಪಾಡಿಕೊಳ್ಳಿ ಎಂದು ಜನತೆಗೆ ಕರೆ ನೀಡಿದರು.



