
ಪ್ರಗತಿವಾಹಿನಿ ಸುದ್ದಿ: ತಮಿಳು ಭಾಷೆಯಿಂದಲೇ ಕನ್ನಡ ಹುಟ್ಟಿದೆ ಎನ್ನುವ ಮೂಲಕ ಕನ್ನಡಿಗರನ್ನು ಕೆರಳಿಸಿದ್ದ ನಟ ಕಮಲ್ ಹಾಸನ್ ವಿರುದ್ಧ ಬೆಂಗಳೂರಿನ ಆರ್ ಟಿ ನಗರ ಪೊಲೀಸ್ ಠಾಣೆಯಲ್ಲಿ ಕರವೇ ಪ್ರವೀಣ್ ಶೆಟ್ಟಿ ದೂರು ದಾಖಲಿಸಿದ್ದಾರೆ.
ಕಮಲ್ ಹಾಸನ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ಕಮಲ್ ಹಾಸನ್ ಅವರ ಹೇಳಿಕೆ ಕನ್ನಡಿಗರ ಭಾವನೆಗಳಿಗೆ ಧಕ್ಕೆ ತಂದಿರುವುದು ಮಾತ್ರವಲ್ಲದೇ, ಕನ್ನಡಿಗರು ಮತ್ತು ತಮಿಳರ ನಡುವೆ ವಿಷದ ಬೀಜ ಬಿತ್ತುವುದನ್ನು ತೋರಿಸುತ್ತದೆ. ಕನ್ನಡಿಗರ ಅಪಮಾನ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.
ಯಾವುದೇ ಹೊಸ ತಮಿಳು ಚಿತ್ರ ಬಿಡುಗಡೆ ಸಂದರ್ಭದಲ್ಲಿ ನಿರಂತರವಾಗಿ ಕನ್ನಡಿಗರ ಸ್ವಾಭಿಮಾನವನ್ನು ಕೆಣಕುವ ಪ್ರಯತ್ನ ಮಾಡಲಾಗುತ್ತಿದೆ. ಇಂತಹ ಹೇಳಿಕೆಗಳು ಕನ್ನಡಿಗರು ಮತ್ತು ತಮಿಳರ ನಡುವೆ ಶಾಂತಿ, ಸೌಹಾರ್ದತೆಯನ್ನು ಹದೆಗೆಡಿಸುತ್ತವೆ ಎಂದು ದೂರಿನಲ್ಲಿ ಅವರು ಉಲ್ಲೇಖಿಸಿದ್ದಾರೆ.
ದೂರನ್ನು ಸ್ವೀಕರಿಸಿದ್ದೇವೆ ಆದರೆ, ಇಲ್ಲಿಯವರೆಗೂ ಎಫ್ ಐಆರ್ ದಾಖಲಿಸಿಲ್ಲ. ಕಾನೂನು ಅಭಿಪ್ರಾಯ ಪಡೆದು ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ
ಇನ್ನೊಂದೆಡೆ ಕಮಲ್ ಹಾಸನ್ ನಟನೆಯ ‘ಥಗ್ ಲೈಫ್’ ಬ್ಯಾನ್ ಕುರಿತು ಚರ್ಚಿಸಲು ಕನ್ನಡ ಚಿತ್ರರಂಗದ ಎಲ್ಲಾ ಪಾಲುದಾರರರೊಂದಿಗೆ ನಾಳೆ ಸಭೆ ನಡೆಸಿ, ಮಧ್ಯಾಹ್ನದೊಳಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಎಂ.ನರಸಿಂಹಲು ಹೇಳಿದ್ದಾರೆ.